ಕನ್ನಡಪ್ರಭ ವಾರ್ತೆ ಮಂಗಳೂರು
ಇದೇ ವೇಳೆ ಸರಳೀಕೃತ ಆದಾಯ ತೆರಿಗೆ ಚೌಕಟ್ಟನ್ನು ಸ್ವಾಗತಿಸಿದ ಅವರು, ಇದು ತೆರಿಗೆದಾರರಿಗೆ ಹೆಚ್ಚಿನ ಸ್ಪಷ್ಟತೆ ಮತ್ತು ವಿಶ್ವಾಸವನ್ನು ನೀಡಲಿದೆ ಎಂದು ಅಭಿಪ್ರಾಯಪಟ್ಟರು.
ಸಹಕಾರಿ ಒಕ್ಕೂಟ ವ್ಯವಸ್ಥೆಯ ಕುರಿತು ಮಾತನಾಡಿದ ಕ್ಯಾ. ಚೌಟ, ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಜನಸಾಮಾನ್ಯರಿಗೆ ತಲುಪಲು ರಾಜ್ಯ ಸರ್ಕಾರಗಳ ಸಮಯೋಚಿತ ಅನುಷ್ಠಾನ ಕೂಡ ಅತಿ ಮುಖ್ಯ. ಆದರೆ ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಯಂತಹ ಮಹತ್ವದ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ಅಸಹಕಾರ, ವಿಳಂಬ ನೀತಿಯಿಂದಾಗಿ ಅನುದಾನ ಸರಿಯಾಗಿ ಬಳಕೆಯಾಗದೆ ಉಳಿದಿದೆ. ಇದರಿಂದ ಬಡ ಕುಟುಂಬಗಳು ಕುಡಿಯುವ ನೀರು ಮತ್ತು ವಸತಿ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.ಶಾಶ್ವತ ಪರಿಹಾರಕ್ಕೆ ಆಗ್ರಹ:ದ.ಕ. ಜಿಲ್ಲೆಯ ಉಳ್ಳಾಲ ಮತ್ತು ಸೋಮೇಶ್ವರ ಭಾಗದಲ್ಲಿ ತೀವ್ರವಾಗಿರುವ ಕಡಲ್ಕೊರೆತವು ಕೇವಲ ತಾತ್ಕಾಲಿಕ ಸಮಸ್ಯೆಯಲ್ಲ, ಬದಲಾಗಿ ಅಸ್ತಿತ್ವಕ್ಕೆ ಇರುವ ಸವಾಲಾಗಿದೆ ಎಂದು ಸಂಸದರು ಆತಂಕ ವ್ಯಕ್ತಪಡಿಸಿದರು. ಈ ಸಮಸ್ಯೆಯಿಂದ ಮೀನುಗಾರರ ಮನೆಗಳು ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾಗುವ ಹಾನಿಯಿಂದ ರಕ್ಷಣೆಗೆ ಕೇಂದ್ರ ಪರಿಸರ ಸಚಿವಾಲಯ ಹಾಗೂ ಭೂವಿಜ್ಞಾನ ಸಚಿವಾಲಯದ ಸಮನ್ವಯದೊಂದಿಗೆ ವೈಜ್ಞಾನಿಕ ಸಮಗ್ರ ಕರಾವಳಿ ರಕ್ಷಣಾ ಯೋಜನೆ ರೂಪಿಸಿ, ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.ಕೊಂಕಣ ರೈಲ್ವೆ ಭಾರತೀಯ ರೈಲ್ವೆ ಜತೆ ವಿಲೀನಕ್ಕೆ ಒತ್ತಾಯ ಕೊಂಕಣ ರೈಲ್ವೆಯು ಪ್ರಸ್ತುತ ಇರುವ ರಚನಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅದರ ಪೂರ್ಣ ಪ್ರಮಾಣದ ಅಭಿವೃದ್ಧಿಗಾಗಿ ಅದನ್ನು ತಕ್ಷಣವೇ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಬೇಕು. ಈ ಕುರಿತು ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಜಾರ್ಜ್ ಫರ್ನಾಂಡಿಸ್ ಅವರ ಕಾಲದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಇದು ಅನಿವಾರ್ಯವಾಗಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಅಭಿಪ್ರಾಯಪಟ್ಟರು.
ಹಾಸನ-ಮಂಗಳೂರು ರೈಲು ಮಾರ್ಗದ ಶಿರಾಡಿ ಘಾಟ್ ವಿಭಾಗದ ಡಿಪಿಆರ್ ಸಿದ್ಧಪಡಿಸಲು ಅನುಮೋದನೆ ನೀಡಿದ ರೈಲ್ವೆ ಸಚಿವರಿಗೆ ಈ ವೇಳೆ ಧನ್ಯವಾದ ಸಲ್ಲಿಸಿದ ಸಂಸದ ಕ್ಯಾ.ಚೌಟ, ಈ ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸಬೇಕು ಎಂದು ಒತ್ತಾಯಿಸಿದರು. ಇದರೊಂದಿಗೆ ಕೇಂದ್ರ ಸರ್ಕಾರ ಘೋಷಿಸಿರುವ ‘ಸಿಟಿ ಎಕನಾಮಿಕ್ ರೀಜನ್’ ಯೋಜನೆಗೆ ಮಂಗಳೂರು ಅತ್ಯಂತ ಸೂಕ್ತ ನಗರವಾಗಿದ್ದು, ಇದನ್ನು ಆದ್ಯತೆಯ ಮೇಲೆ ಪರಿಗಣಿಸುವಂತೆ ಹಣಕಾಸು ಸಚಿವರಿಗೆ ಮನವಿ ಮಾಡಿದರು.