ಮುದ್ದೇನಹಳ್ಳಿ ಬಸ್ ನಿಲ್ದಾಣ ಕಾಮಗಾರಿತಡೆ ಖಂಡಿಸಿ ಹೋರಾಟದ ಎಚ್ಚರಿಕೆ

KannadaprabhaNewsNetwork |  
Published : Jun 16, 2026, 03:15 AM IST
  ಸಿಕೆಬಿ-2 ಸುದ್ದಿಗೋಷ್ಠಿಯಲ್ಲಿ ಶಿವಕುಮಾರ್ ಮಾತನಾಡಿದರು | Kannada Prabha

ಸಾರಾಂಶ

ಮುದ್ದೇನಹಳ್ಳಿಯ ಸತ್ಯಸಾಯಿ ಆಸ್ಪತ್ರೆ ಸಮೀಪ ಸಂಸದರ ನಿಧಿಯಡಿಯಲ್ಲಿ ನಿರ್ಮಾಣವಾಗುತ್ತಿದ್ದ ಬಸ್ ನಿಲ್ದಾಣ ಕಾಮಗಾರಿಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗಿದೆ

ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:

ಮುದ್ದೇನಹಳ್ಳಿಯ ಸತ್ಯಸಾಯಿ ಆಸ್ಪತ್ರೆ ಸಮೀಪ ಸಂಸದರ ನಿಧಿಯಡಿಯಲ್ಲಿ ನಿರ್ಮಾಣವಾಗುತ್ತಿದ್ದ ಬಸ್ ನಿಲ್ದಾಣ ಕಾಮಗಾರಿಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗಿದೆ ಎಂದು ತಾ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ಶಿವಕುಮಾರ್ ಆರೋಪಿಸಿದರು.ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಸತ್ಯ ಸಾಯಿ ಆಸ್ಪತ್ರೆ ಬಳಿ ಬಸ್ ನಿಲ್ದಾಣ ನಿರ್ಮಾಣ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ಹಾಗೂ ಮುದ್ದೇನಹಳ್ಳಿಯ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವರಾಜ್ ಅವರು, ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ತಹಸೀಲ್ದಾರ್ ಕಾಮಗಾರಿ ಸ್ಥಗಿತಗೊಳಿಸಿದ್ದು, ಕಾರಣ ಕೇಳಿದಾಗ ಅಗತ್ಯ ಅನುಮತಿ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಆದರೆ ಪಿಡಬ್ಲ್ಯುಡಿ ಇಲಾಖೆ ಜಾಗ ಗುರುತಿಸಿ ಜಿಲ್ಲಾಧಿಕಾರಿಗಳ ಅನುಮೋದನೆಯ ಬಳಿಕವೇ ಕಾಮಗಾರಿ ಆರಂಭಗೊಂಡಿತ್ತು ಎಂದು ಸ್ಪಷ್ಟಪಡಿಸಿದರು.

ಸತ್ಯಸಾಯಿ ಆಸ್ಪತ್ರೆಗೆ ಆಗಮಿಸುವ ರೋಗಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಇದೇ ಜಾಗದಲ್ಲಿ ಬಸ್ ನಿಲ್ದಾಣ ನಿರ್ಮಾಣ ಸೂಕ್ತವಾಗಿದೆ. ಅನುಮತಿ ನೆಪದಲ್ಲಿ ಕಾಮಗಾರಿ ನಿಲ್ಲಿಸಿರುವ ಇವರು ಅನುಮತಿ ಇಲ್ಲದೆ ಕಾಮಗಾರಿ ನಡೆದಿದ್ದರೆ ಸಂಬಂಧಿತ ಇಲಾಖೆ ಅಥವಾ ಜಿಲ್ಲಾಧಿಕಾರಿ ಗಮನಕ್ಕೆ ತರಬಹುದಿತ್ತು. ಆದರೆ ಪಿಡಿಓ ಹಾಗೂ ತಹಸೀಲ್ದಾರ್ ತರಾತುರಿಯಲ್ಲಿ ಕಾಮಗಾರಿ ನಿಲ್ಲಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಸದ ಡಾ.ಕೆ. ಸುಧಾಕರ್ ಅವರಿಗೆ ಒಳ್ಳೆ ಹೆಸರು ಬರುತ್ತದೆ ಎಂಬ ರಾಜಕೀಯ ಕಾರಣದಿಂದ ಕಾಮಗಾರಿ ತಡೆಯಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿದ ಅವರು, ಪಿಡಿಒ ಹಾಗೂ ತಹಸೀಲ್ದಾರ್ ಯಾರ ಒತ್ತಡಕ್ಕೆ ಮಣಿದು ಈ ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ ಅವರು ಇದೇ ಜಾಗವನ್ನು ಇಂದಿರಾ ಕ್ಯಾಂಟೀನ್‌ಗೆ ಮೀಸಲಿಟ್ಟಿದ್ದಾರೆ ಎಂಬ ಕಾರಣ ಕೂಡ ನೀಡಲಾಗುತ್ತಿದೆ. ಆದರೆ ಕ್ಯಾಂಟೀನ್ ನಿರ್ಮಾಣಕ್ಕೆ ಬೇರೆ ಪರ್ಯಾಯ ಜಾಗಗಳಿದ್ದು, ಪಂಚಾಯಿತಿ ಮೂಲಕ ಜಾಗ ಗುರುತಿಸಲು ನಾವು ಸಿದ್ಧರಿದ್ದೇವೆ. ಅಗತ್ಯವಿದ್ದರೆ ನನ್ನ ಸ್ವಂತ ಜಾಗವನ್ನೂ ನೀಡುತ್ತೇನೆ ಎಂದು ಶಿವಕುಮಾರ್ ತಿಳಿಸಿದರು.

ಇದೇ ಸ್ಥಳದಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಅವಕಾಶ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ಕೈಗೊಳ್ಳಲಾಗುವುದು. ರಾಜಕೀಯ ಉದ್ದೇಶದಿಂದ ಕಾಮಗಾರಿ ತಡೆದಿದ್ದರೆ ಅದಕ್ಕೆ ರಾಜಕೀಯವಾಗಿಯೇ ಉತ್ತರ ನೀಡಲು ನಾವು ಸಿದ್ಧ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಮಾಜಿ ಸದಸ್ಯ ಸುಬ್ರಹ್ಮಣ್ಯಚಾರಿ, ಮುಖಂಡರಾದ ರಮೇಶ್, ಪ್ರಸಾದ್, ಪ್ರಸನ್ನ, ಗುರು ಮತ್ತಿತರರು ಇದ್ದರು.

ಸಿಕೆಬಿ-2 ಸುದ್ದಿಗೋಷ್ಠಿಯಲ್ಲಿ ಶಿವಕುಮಾರ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಸಂಕಲ್ಪ
ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಬೃಹತ್ ಜಾಥಾ