ಮೂಲ್ಕಿ: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಕರ್ತರ ಆರೋಗ್ಯ ಕಾಪಾಡುವುದು ನಮ್ಮ ಸಾಮಾಜಿಕ ಜವಾಬ್ದಾರಿಯಾಗಿದ್ದು ಪತ್ರಕರ್ತರ ಆರೋಗ್ಯದ ವಿಷಯದಲ್ಲಿ ಅವರಿಗೊಂದು ವಿಶೇಷ ಆರೋಗ್ಯ ಕಾರ್ಡ್ ಒದಗಿಸಿ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧ ಎಂದು ಶ್ರೀನಿವಾಸ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಡೇವಿಡ್ ರೊಸಾರಿಯೊ ಹೇಳಿದರು. ಸಮಾಜಕ್ಕಾಗಿ ದುಡಿಯುವವರ ಆರೈಕೆ ಎಂಬ ಧ್ಯೇಯದೊಂದಿಗೆ ಮುಕ್ಕದ ಶ್ರೀನಿವಾಸ ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರಿಗಾಗಿ ಆಯೋಜಿಸಿದ್ದ ಒಂದು ವಾರದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ಮಾತನಾಡಿ ಎ. ಶ್ಯಾಮ ರಾವ್ ಫೌಂಡೇಶನ್ ಸೇವಾ ಮನೋಭಾವದಿಂದ ಬಹಳಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದೆ ಎಂದರು.
ಸಂಘದ ರಾಜ್ಯದ ಪ್ರತಿನಿಧಿ ಶ್ರೀನಿವಾಸ್ ಇಂದಾಜೆ, ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಸಚಿವ ಡಾ. ಕೆ. ಸತ್ಯನಾರಾಯಣ ರೆಡ್ಡಿ, ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನಿಲ್ ಕುಮಾರ್, ಶ್ರೀನಿವಾಸ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ. ಉದಯ್ ಕುಮಾರ್ ರಾವ್, ಮೂಲ್ಕಿ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಸುರತ್ಕಲ್ ಮತ್ತಿತರರಿದ್ದರು.ಝರೀನಾ ನಿರೂಪಿಸಿದರು.