ಡಿಸೆಂಬರ್‌ನಿಂದ ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್ ಕಾಮಗಾರಿ ಆರಂಭ: ಮೇಯರ್‌

KannadaprabhaNewsNetwork |  
Published : Dec 01, 2024, 01:34 AM IST
ಮಲ್ಟಿ ಲೆವೆಲ್‌ ಕಾರು ಪಾರ್ಕಿಂಗ್‌ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿದ ಮೇಯರ್‌ ಮನೋಜ್‌ ಕುಮಾರ್‌  | Kannada Prabha

ಸಾರಾಂಶ

ಕಾಮಗಾರಿ ನಡೆಸುವ ಬದಿಯಲ್ಲಿ ಕಾಲುದಾರಿಯಾಗಿ ಬಳಕೆಯಲ್ಲಿರುವ ಸಣ್ಣ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗುತ್ತಿದೆ. ನಿತ್ಯ ನೂರಾರು ಮಂದಿ ಈ ರಸ್ತೆಯನ್ನು ಆಶ್ರಯಿಸಿದ್ದಾರೆ. ಅದನ್ನು ಡಾಮರೀಕರಣ ಮಾಡಬೇಕಿದೆ ಎಂದು ಸ್ಥಳೀಯರು ಮೇಯರ್ ಅವರಲ್ಲಿ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ನಗರದಲ್ಲಿ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ದೊರಕಿಸುವ ನಿಟ್ಟಿನಲ್ಲಿ ಕೈಗೆತ್ತಿಕೊಳ್ಳಲಾಗಿರುವ ಬಹು ನಿರೀಕ್ಷೆಯ ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್ ಯೋಜನೆ ಆರಂಭಿಕ ಹಂತದಲ್ಲಿಯೇ ನೆನೆಗುದಿಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ನೂತನ ಮೇಯರ್ ಮನೋಜ್ ಕುಮಾರ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.ಸ್ಥಳೀಯ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿಕೊಂಡ ಮೇಯರ್ ಅವರು ಯೋಜನೆ ಬಗ್ಗೆ ಸ್ಮಾರ್ಟ್‌ಸಿಟಿ ಅಧಿಕಾರಿ ಹಾಗೂ ಗುತ್ತಿಗೆದಾರರಿಂದ ಮಾಹಿತಿ ಪಡೆದುಕೊಂಡರು. ಸ್ಥಳೀಯರಿಗೆ ಸಮಸ್ಯೆ ಆಗದಂತೆ ಯೋಜನೆಯನ್ನು ತುರ್ತಾಗಿ ನಡೆಸುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮೇಯರ್ ಅವರು ಸ್ಮಾರ್ಟ್‌ಸಿಟಿ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್ ಮನೋಜ್ ಕುಮಾರ್, ಒಂದೂವರೆ ಎಕರೆ ಜಾಗದಲ್ಲಿ ೯೦ ಕೋಟಿ ರು. ಹಣವನ್ನು ಗುತ್ತಿಗೆದಾರರೇ ಭರಿಸಿಕೊಂಡು ಮಾಡುವ ಯೋಜನೆ ಇದಾಗಿದೆ. ಗುತ್ತಿಗೆದಾರರಿಂದ ಕೆಲಸ ಆರಂಭಿಸಲಾಗಿತ್ತು. ಕಾರಣಾಂತರ ಕಾಮಗಾರಿ ಸ್ಥಗಿತಗೊಂಡಿದ್ದು, ಇದೀಗ ಗುತ್ತಿಗೆದಾರರ ಪತ್ನಿ ಈ ಯೋಜನೆ ಮುಂದುವರಿಸುವ ಭರವಸೆ ನೀಡಿದ್ದಾರೆ. ಡಿಸೆಂಬರ್‌ನಲ್ಲಿ ಮತ್ತೆ ಕಾಮಗಾರಿ ಆರಂಭಿಸಲು ಸ್ಮಾರ್ಟ್‌ಸಿಟಿ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಕಾಮಗಾರಿ ನಡೆಸುವ ಬದಿಯಲ್ಲಿ ಕಾಲುದಾರಿಯಾಗಿ ಬಳಕೆಯಲ್ಲಿರುವ ಸಣ್ಣ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗುತ್ತಿದೆ. ನಿತ್ಯ ನೂರಾರು ಮಂದಿ ಈ ರಸ್ತೆಯನ್ನು ಆಶ್ರಯಿಸಿದ್ದಾರೆ. ಅದನ್ನು ಡಾಮರೀಕರಣ ಮಾಡಬೇಕಿದೆ ಎಂದು ಸ್ಥಳೀಯರು ಮೇಯರ್ ಅವರಲ್ಲಿ ಮನವಿ ಮಾಡಿದರು. ತಾತ್ಕಾಲಿಕ ರಸ್ತೆ ಡಾಮರೀಕರಣ ನಡೆಸುವಂತೆ ಮೇಯರ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ವೀಣಾಮಂಗಳ, ಸ್ಥಳೀಯ ಸದಸ್ಯೆ ಪೂರ್ಣಿಮಾ, ಸ್ಮಾರ್ಟ್‌ಸಿಟಿ ಅಧಿಕಾರಿ ಅರುಣ್ ಪ್ರಭಾ, ಗುತ್ತಿಗೆದಾರ ಅನುರಾಧಾ ಪ್ರಭು ಇದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎನ್‌ಡಿಎ ಮೈತ್ರಿ ಕೂಟದಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ
ಪತ್ರಕರ್ತರಿಗೆ ಸ್ಪಂದಿಸುತ್ತಿದ್ದ ಶಾಮನೂರು ಸದಾ ಸ್ಮರಣೀಯ