ಧಾರವಾಡ: ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣನವರ ಮಂಗಳವಾರ ಎತ್ತು-ಚಕ್ಕಡಿಯೊಂದಿಗೆ ಆಗಮಿಸಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಹು-ಧಾ ಮಹಾನಗರ ಪಾಲಿಕೆಗೆ ಎರಡು ಬಾರಿ ಬಿಜೆಪಿ ವತಿಯಿಂದ ಸದಸ್ಯರಾಗಿದ್ದ ಶಿವಾನಂದ ಮುತ್ತಣ್ಣವರ ಅವರಿಗೆ ಕಳೆದ ಪಾಲಿಕೆ ಚುನಾವಣೆಯಲ್ಲಿ ಟಿಕೆಟ್ ನೀಡಿರಲಿಲ್ಲ. ಆಗ ಬಿಜೆಪಿಯಲ್ಲಿ ಕುರುಬ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದರು. ಇದರೊಂದಿಗೆ ಕಳೆದ ಮೂರು ಅವಧಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಬಿಜೆಪಿ ಕುರುಬ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ. ಈಶ್ವರಪ್ಪ ಅವರ ಪುತ್ರನಿಗೂ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿತು. ಇದರೊಂದಿಗೆ ಈ ಭಾಗದ ಪ್ರಮುಖ ಸಮಸ್ಯೆಯಾಗಿರುವ ಮಹದಾಯಿ ಯೋಜನೆ ಜಾರಿಗಾಗಿ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಶಿವಾನಂದ ಮುತ್ತಣ್ಣವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.