ಸಖರಾಯಪಟ್ಟಣ : ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸಿ ಅವರ ಜೀವನ ಸುಧಾರಣೆಗೆ ಸಹಕರಿಸುವುದರೊಂದಿಗೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಕೈಗೊಂಡು ಅಭಿವೃದ್ಧಿಗೊಳಿಸುವುದೇ ನನ್ನ ಗುರಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿ ಸೇರಿದಂತೆ ಸಖರಾಯಪಟ್ಟಣ ವ್ಯಾಪ್ತಿಯ ರಸ್ತೆ, ದೇವಸ್ಥಾನ, ಸಮುದಾಯ ಭವನ, ಕಾಂಪೌಂಡ್ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆ ಹಾಗೂ ಗ್ರಾಮಾಂತರ ಪ್ರದೇಶಗಳು ಒಳಗೊಂಡಂತೆ ಕ್ಷೇತ್ರಕ್ಕೆ ಒಟ್ಟು ₹25 ಕೋಟಿ ವಿಶೇಷ ಅನುದಾನ ನೀಡಲಾಗಿದೆ ಎಂದು ಹೇಳಿದರು.ಸಖರಾಯಪಟ್ಟಣ ವ್ಯಾಪ್ತಿಯಲ್ಲಿ ದೇವಸ್ಥಾನ, ಆಟೋ ನಿಲ್ದಾಣ ಹಾಗೂ ರಸ್ತೆ ಸೇರಿದಂತೆ ಸುಮಾರು ₹2 ಕೋಟಿಗೂ ಹೆಚ್ಚಿನ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ 4 ತಿಂಗಳೊಳಗಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಗುಬ್ಬಿಹಳ್ಳಿ ಗೇಟ್ನಿಂದ ದೇವನೂರುವರೆಗೂ ₹29 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಂಡು ಶೀಘ್ರ ಪೂರ್ಣ ಗೊಳಿಸಲಾಗುವುದು ಎಂದ ಅವರು, ಅಭಿವೃದ್ಧಿ ಕಾರ್ಯಗಳೊಂದಿಗೆ ಜನರ ಸಮಸ್ಯೆ ಬಗೆಹರಿಸುವ ಕಾರ್ಯಗಳನ್ನು ನಿಷ್ಠೆ ಯಿಂದ ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.
ಸರ್ಕಾರ ಸಮಾಜದ ಎಲ್ಲಾ ಬಡವರು, ಹಿಂದುಳಿದ ವರ್ಗ ಹಾಗೂ ಶೋಷಿತ ವರ್ಗದವರ ಪರವಾದ ಯೋಜನೆ ರೂಪಿಸಿ ಅವರ ಏಳಿಗೆಗಾಗಿ ದುಡಿಯುವುದಲ್ಲದೇ ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿದೆ. ಎತ್ತಿನ ಹೊಳೆ ಯೋಜನೆ ಮೂಲಕ ಯೋಜನಾ ವ್ಯಾಪ್ತಿಯಲ್ಲಿ ನಮ್ಮ ಕ್ಷೇತ್ರ ಇಲ್ಲದಿದ್ದರೂ ಸಹ ಮನವಿ ಮೇರೆಗೆ ಹಳೇಬೀಡು, ದೇವನೂರು, ಬೆಳವಾಡಿ ಕೆರೆಗಳನ್ನು ಭರ್ತಿಗೊಳಿಸಿರುವುದು ಇಲ್ಲಿನ ರೈತರ ಸಂತಸಕ್ಕೆ ಕಾರಣವಾಗಿದೆ ಹೇಳಿದರು.ಕಾರ್ಯಕ್ರಮದಲ್ಲಿ ಸಖರಾಯಪಟ್ಟಣ ಗ್ರಾಪಂ ಅಧ್ಯಕ್ಷೆ ರಾಜಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿ ಮನೆ ಸತೀಶ್, ಗಣೇಶ್, ರಾಜಣ್ಣ, ಕಿರಣ್, ಲೋಕೇಶ್, ಸಚಿನ್ ಎತ್ತಿನ ಮನೆ ಉಪಸ್ಥಿತರಿದ್ದರು.
10 ಕೆಸಿಕೆಎಂ 3ಸಖರಾಯಪಟ್ಟಣದ ಆಟೋ ನಿಲ್ದಾಣ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಾಸಕ ಎಚ್.ಡಿ. ತಮ್ಮಯ್ಯ ಅವರು ಸೋಮವಾರ ಚಾಲನೆ ನೀಡಿದರು.