ಜನರಿಗೆ ಸೌಕರ್ಯ ಕಲ್ಪಿಸುವುದು ನನ್ನ ಮುಖ್ಯ ಉದ್ದೇಶ: ಸಚಿವ ಚಲುವರಾಯಸ್ವಾಮಿ

KannadaprabhaNewsNetwork | Published : Apr 12, 2025 12:46 AM

ಸಾರಾಂಶ

ಕಳೆದ 2017ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೆ.ಆರ್.ಪೇಟೆ, ನಾಗಮಂಗಲ ಹಾಗೂ ಚನ್ನರಾಪಟ್ಟಣ ತಾಲೂಕುಗಳ ಕೆರೆಗಳನ್ನು ತುಂಬಿಸಲು 213ಕೋಟಿ ರು. ವೆಚ್ಚದ ಏತನೀರಾವರಿ ಯೋಜನೆಯನ್ನು ಮಂಜೂರು ಮಾಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ನಾಗಮಂಗಲ

ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ರಸ್ತೆ, ಚರಂಡಿ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ನನ್ನ ಮುಖ್ಯ ಉದ್ದೇಶ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಕಲ್ಲುಕೊಂಬರಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಶೇಷ ಅನುದಾನ 25 ಲಕ್ಷ ರು. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆಗಳು ಉತ್ತಮವಾಗಿರಬೇಂಬ ಉದ್ದೇಶದಿಂದ ಹಳ್ಳಿಗಳ ರಸ್ತೆ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಎಲ್ ಅಂಡ್ ಟಿ ಸಂಸ್ಥೆಯಿಂದ ನಡೆಯುತ್ತಿರುವ ಕುಡಿಯುವ ನೀರಿನ ಯೋಜನೆ ವರ್ಷದೊಳಗೆ ಪೂರ್ಣಗೊಳ್ಳಲಿದೆ ಎಂದರು.

ಕಳೆದ 2017ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೆ.ಆರ್.ಪೇಟೆ, ನಾಗಮಂಗಲ ಹಾಗೂ ಚನ್ನರಾಪಟ್ಟಣ ತಾಲೂಕುಗಳ ಕೆರೆಗಳನ್ನು ತುಂಬಿಸಲು 213ಕೋಟಿ ರು. ವೆಚ್ಚದ ಏತನೀರಾವರಿ ಯೋಜನೆಯನ್ನು ಮಂಜೂರು ಮಾಡಿಸಲಾಗಿತ್ತು. ತಾಲೂಕಿನ ಗೂಡೆಹೊಸಹಳ್ಳಿಯಿಂದ ಕೆ.ಆರ್.ಪೇಟೆ ತಾಲೂಕಿನ ಸಂತೆಬಾಚಹಳ್ಳಿ ವರೆಗೆ ಒಂದಷ್ಟು ಕೆಲಸ ಮಾಡಿರುವುದನ್ನು ಬಿಟ್ಟರೆ 5 ವರ್ಷ ಕಳೆದರೂ ಕೂಡ ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಆಗಿಲ್ಲ ಎಂದರು.

ಈ ಯೋಜನೆಗೆ ಮತ್ತಷ್ಟು ಕೆರೆಗಳನ್ನು ಸೇರ್ಪಡೆ ಮಾಡಿ ಹೆಚ್ಚುವರಿಯಾಗಿ 130 ಕೋಟಿ ರು.ಗಳನ್ನು ಮಂಜೂರು ಮಾಡಿಸಲಾಗಿದೆ. ಎರಡು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.

ಏತ ನೀರಾವರಿ ಯೋಜನೆ ಪೂರ್ಣಗೊಂಡಲ್ಲಿ ತಾಲೂಕಿನ ಕಸಬಾ ಮತ್ತು ಬಿಂಡಿಗನವಿಲೆ ಹೋಬಳಿಯ ಎಲ್ಲಾ ಕೆರೆಗಳು ಹಾಗೂ ಬೆಳ್ಳೂರು ಹೋಬಳಿಯ ಹಲವು ಕೆರೆಗಳಿಗೆ ನೀರು ತುಂಬಿಸಬಹುದಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಹಳ್ಳಿಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ ಎಂದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಮಾಜಿ ಅಧ್ಯಕ್ಷ ಎಚ್.ಟಿ.ಕೃಷ್ಣೆಗೌಡ, ಜಿಪಂ ಮಾಜಿ ಸದಸ್ಯರಾದ ಎಂ.ಪ್ರಸನ್ನ, ಸಾವಿತ್ರಮ್ಮ, ಗ್ರಾ.ಪಂ. ಸದಸ್ಯ ಗೋವಿಂದ, ಪುರಸಭೆ ಸದಸ್ಯ ಸಂಪತ್‌ಕುಮಾರ್, ಮುಖಂಡರಾದ ಕ್ರಷರ್ ಕರೀಗೌಡ, ತ್ಯಾಪೇನಹಳ್ಳಿ ಶ್ರೀನಿವಾಸ್, ದೇವರಾಜು, ಎಸ್.ಬಿ.ರಮೇಶ, ಪಂಚಾಯತ್ ರಾಜ್ ಇಲಾಖೆಯ ಎಇಇ ಸ್ವಾಮಿ, ಜೆಇ ಶಿವಪ್ಪ ಸೇರಿದಂತೆ ಹಲವರು ಇದ್ದರು.

Share this article