ಮೈಸೂರು ಅರಮನೆ ಆವರಣ ಪ್ರವೇಶಿಸಿದ ದಸರಾ ಗಜಪಡೆ : ಅಭಿಮನ್ಯು ನೇತೃತ್ವದ 9 ಆನೆಗಳಿಗೆ ವಿಶೇಷ ಪೂಜೆ

ಸಾರಾಂಶ

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಮೈಸೂರು ಅರಮನೆಯಲ್ಲಿ ಶುಕ್ರವಾರ ಬೆಳಗ್ಗೆ 10.10ರ ತುಲಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕೋರಲಾಯಿತು.

ಮೈಸೂರು :  ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಮೈಸೂರು ಅರಮನೆಯಲ್ಲಿ ಶುಕ್ರವಾರ ಬೆಳಗ್ಗೆ 10.10ರ ತುಲಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕೋರಲಾಯಿತು.

ಅಶೋಕಪುರಂನಲ್ಲಿರುವ ಅರಣ್ಯ ಭವನದಿಂದ ಅರಮನೆಯ ಜಯಮಾರ್ತಾಂಡ ದ್ವಾರಕ್ಕೆ ಅಂಬಾರಿ ಆನೆ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಆಗಮಿಸಿದವು. ಇವುಗಳಿಗೆ ಅರ್ಚಕ ಪ್ರಹ್ಲಾದ್ ರಾವ್ ಪೂಜೆ ಸಲ್ಲಿಸಿದರು. ಬಳಿಕ ಶಾಸಕರಾದ ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ, ತನ್ವೀರ್ ಸೇಠ್ ಅವರು ಪುಷ್ಪಾರ್ಚನೆ ಮಾಡಿ, ಅರಮನೆ ಆವರಣಕ್ಕೆ ಆನೆಗಳನ್ನು ಬರ ಮಾಡಿಕೊಂಡರು. ದಸರಾ ಆನೆಗಳು ಅರಮನೆ ಆವರಣ ಪ್ರವೇಶಿಸುತ್ತಿದ್ದಂತೆ ಸಿಎಆರ್ ಪೊಲೀಸರು ಗೌರವ ರಕ್ಷೆ ಸಲ್ಲಿಸಿದರು.

ನಂತರ ಆನೆಗಳು ಅರಮನೆಯ ಮುಂಭಾಗದ ಆನೆ ಬಾಗಿಲಿಗೆ ಆಗಮಿಸಿದವು. ಇಲ್ಲಿ ಆನೆಗಳನ್ನು ಪೂರ್ವ ದಿಕ್ಕಿಗೆ ಸಾಲಾಗಿ ನಿಲ್ಲಿಸಿ, ವೇದ ಘೋಷಗಳೊಂದಿಗೆ ಪೂಜೆ ಸಲ್ಲಿಸಲಾಯಿತು. ಸಿಎಆರ್ ಪೊಲೀಸರು ಗೌರವ ರಕ್ಷೆ ಸಲ್ಲಿಸಿದರು. ಇದೇ ವೇಳೆ ಮಾವುತರು ಮತ್ತು ಕಾವಾಡಿಗಳಿಗೆ ದಿನನಿತ್ಯದ ಪದಾರ್ಥಗಳಿರುವ ಕಿಟ್‌ ಅನ್ನು ವಿತರಿಸಲಾಯಿತು. 9 ಆನೆಗಳ ಪೈಕಿ ಏಕಲವ್ಯ ಆನೆಗೆ ಇದು ಮೊದಲ ದಸರಾ.

Share this article