-ನಂದಗುಡಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಕನ್ನಡಪ್ರಭ ವಾರ್ತೆ ಹೊಸಕೋಟೆ
ನಂದಗುಡಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶರತ್ ಚಾಲನೆ ನೀಡಿ ಮಾತನಾಡಿ, ಬಿಜೆಪಿಯಲ್ಲೂ ಒಳ ಜಗಳ ಪ್ರಾರಂಭವಾಗಿದ್ದು ಗುಂಪುಗಳಾಗಿ ವಿಭಜನೆಯಾಗಿದೆ. ಒಂದೇ ಒಂದು ದಾಖಲೆಯೂ ಇಲ್ಲದೆ ಸುಳ್ಳು ಆರೋಪ ಮಾಡಿ ರಾಜ್ಯ ಕಂಡ ಜನಸ್ನೇಹಿ ಮುಖ್ಯಮಂತ್ರಿಯವರ ಆಡಳಿತವನ್ನು ಸಹಿಸಲಾರದೇ ಪಾದಯಾತ್ರೆ ಆರಂಭಿಸಿದ್ದಾರೆ. ಈ ಪಾದಯಾತ್ರೆಯಿಂದ ರಾಜ್ಯದ ಯಾರಿಗೂ ಅನುಕೂಲವಾಗುವುದಿಲ್ಲ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ರಸ್ತೆಗಳು ನಿರ್ಮಾಣವಾದರೆ, ಅಭಿವೃದ್ಧಿ ಪಥದಲ್ಲಿ ಮುಂದುವರೆಯಲು ಸಾಧ್ಯವಾಗುತ್ತದೆ. ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಲ್ಲಿ ನಮ್ಮ ಸರ್ಕಾರ ಎಲ್ಲಾ ರೀತಿಯಲ್ಲಿ ಬದ್ದರಾಗಿದ್ದೇವೆ ಎಂದರು.ರಾಜ್ಯದಿಂದ ಕೇಂದ್ರಕ್ಕೆ ಅನೇಕ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದರೂ ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಅನುದಾನ ನೀಡದೆ, ಕೇವಲ ಆಂಧ್ರಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಅನುದಾನ ನೀಡಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಮಾಡುತ್ತಿರುವ ತಾರತಮ್ಯ ಧೋರಣೆ ವಿರುದ್ಧ ಮಂಗಳವಾರ ಮಂಡ್ಯದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಹೊಸಕೋಟೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಸಿದ್ದರಾಮಯ್ಯನವರು ಹಾಗೂ ಡಿಕೆ ಶಿವಕುಮಾರ್ ಆವರ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.