ನಾಡಗೀತೆ ಖಾಸಗಿ ಶಾಲೆಗೂ ಅನ್ವಯ: ಸರ್ಕಾರ

KannadaprabhaNewsNetwork |  
Published : Apr 04, 2024, 02:00 AM ISTUpdated : Apr 04, 2024, 06:28 AM IST
ಹೈಕೋರ್ಟ್‌ | Kannada Prabha

ಸಾರಾಂಶ

ನಾಡಗೀತೆ ಸಾಂವಿಧಾನಿಕವಾಗಿ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ದಿ.ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲೆ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ರಾಜ್ಯದ ಖಾಸಗಿ ಶಾಲೆಗಳಿಗೂ ಅನ್ವಯಿಸಲಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟೀಕರಣ ನೀಡಿದೆ.

 ಬೆಂಗಳೂರು :  ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ರಾಜ್ಯದ ಖಾಸಗಿ ಶಾಲೆಗಳಿಗೂ ಅನ್ವಯಿಸಲಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟೀಕರಣ ನೀಡಿದೆ.

ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2023ರ ಸೆ.25ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠಕ್ಕೆ ಸರ್ಕಾರಿ ವಕೀಲರು ಈ ಸ್ಪಷ್ಟನೆ ನೀಡಿದರು.

ಸರ್ಕಾರದ ಸ್ಪಷ್ಟೀಕರಣ ಆಲಿಸಿದ ಬಳಿಕ ಪ್ರತಿಕ್ರಿಯಿಸಿದ ನ್ಯಾಯಪೀಠ, ನಾಡಗೀತೆಯನ್ನು ನಿರ್ದಿಷ್ಟ ರಾಗದಲ್ಲಿ ಹಾಡುವುದನ್ನು ಕಡ್ಡಾಯ ಮಾಡಿ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಯಾವುದೇ ಶಾಸನವಿಲ್ಲ ಎಂಬುದಾಗಿ ಅರ್ಜಿದಾರರು ಆಕ್ಷೇಪಿಸಿದ್ದಾರೆ. ಹಾಗಾದರೆ, ಇಂತಹ ಆದೇಶ ಹೊರಡಿಸಲು ಸರ್ಕಾರ ಯಾವ ಶಾಸನಾತ್ಮಕ ಅಧಿಕಾರ ಹೊಂದಿದೆ ಎಂದು ಪ್ರಶ್ನಿಸಿತು.

ಸರ್ಕಾರದ ವಕೀಲರು, ಈ ಕುರಿತು ರಾಜ್ಯ ಸರ್ಕಾರದಿಂದ ಅಗತ್ಯ ಮಾಹಿತಿ ಪಡೆದು ವಿವರಣೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಅದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಹೈಕೋರ್ಟ್‌, ನಾಡಗೀತೆ ಸಾಂವಿಧಾನಿಕವಾಗಿ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ನಾಡಗೀತೆ ವಿಚಾರದಲ್ಲಿ ರಾಜ್ಯ ಸರ್ಕಾರ ಏಕೆ ಹೀಗೆ ಗೊಂದಲ ಆದೇಶಗಳನ್ನು ಹೊರಡಿಸುತ್ತಿದೆ? ಒಂದು ಆದೇಶ ಹೊರಡಿಸಿ ನಂತರ ಅದನ್ನು ಹಿಂಪಡೆದು ತಿದ್ದುಪಡಿ ಆದೇಶ ಹೊರಡಿಸುತ್ತಿದೆ. ಇನ್ನೂ ನಿರ್ದಿಷ್ಟ ರಾಗದಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಸಂವಿಧಾನದ ಅಥವಾ ಇತರೆ ಶಾಸನದ ಬೆಂಬಲವಿರಬೇಕು. ಸರ್ಕಾರ ವಿವೇಚನಾಧಿಕಾರ ಬಳಸಿ ಕಾರ್ಯಕಾರಿ ಆದೇಶ ಹೊರಡಿಸಲಾಗದು. ಈ ಬಗ್ಗೆ ಸಮಗ್ರವಾದ ವಿವರಣೆ ಎಂದು ಸೂಚಿಸಿ ವಿಚಾರಣೆಯನ್ನು ಏ.10ಕ್ಕೆ ವಿಚಾರಣೆ ಮುಂದೂಡಿತು.

ಅಲ್ಲದೆ, ಮುಂದಿನ ವಿಚಾರಣೆ ವೇಳೆ ನ್ಯಾಯಾಲಯ ಕೇಳಿರುವ ಪ್ರಶ್ನೆಗಳಿಗೆ ಹಾಗೂ ಅರ್ಜಿದಾರರು ಎತ್ತಿರುವ ಆಕ್ಷೇಪಣೆಗಳಿಗೆ ಸರ್ಕಾರ ಕಾನೂನಿನ ನೆಲಗಟ್ಟಿನಲ್ಲಿ ಸಮರ್ಪಕ ಉತ್ತರ ನೀಡಬೇಕು. ಹೆಚ್ಚುಕಾಲ ಈ ಅರ್ಜಿ ವಿಚಾರಣೆ ಮುಂದೂಡುತ್ತಾ ಹೋಗಲು ಸಾಧ್ಯವಿಲ್ಲ. ನ್ಯಾಯಾಲಯ ತ್ವರಿತವಾಗಿ ತನ್ನ ನಿರ್ಧಾರ ಪ್ರಕಟಿಸುವ ಮೂಲಕ ಅರ್ಜಿ ವಿಲೇವಾರಿ ಮಾಡಬೇಕಿದೆ. ಸರ್ಕಾರವು ವಿವರಣೆ ನೀಡಿದ ಬಳಿಕ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ. ನ್ಯಾಯಾಲಯದಲ್ಲಿ ವಾದ ಮಂಡಿಸುವ ಮುನ್ನ ಸರ್ಕಾರಿ ವಕೀಲರು ವಿಚಾರಕ್ಕೆ ಸಂಬಂಧಿಸಿದ ಎಲ್ಲ ವಿವರಗಳು, ಕಾನೂನುಗಳನ್ನು ಪರಿಶೋಧಿಸಿ, ಮಾಹಿತಿ ನೀಡಬೇಕು ಎಂದು ಮೌಖಿಕವಾಗಿ ಸೂಚಿಸಿತು.

ಖಾಸಗಿ ಶಾಲೆಗೂ ಅನ್ವಯ: ಸ್ಪಷ್ಟನೆ

ಅರ್ಜಿ 2024ರ ಫೆ.2ರಂದು ವಿಚಾರಣೆಗೆ ಬಂದಾಗ, ನಿರ್ದಿಷ್ಟ ಧಾಟಿಯಲ್ಲಿ ನಾಡಗೀತೆ ಹಾಡುವುದಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಆದೇಶ ಖಾಸಗಿ ಶಾಲೆಗಳಿಗೂ ಅನ್ವಯವಾಗಲಿದೆಯೇ ಎಂಬ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ನಿರ್ದೇಶಿಸಿತ್ತು.

ಅದರಂತೆ ಬುಧವಾರ ಅರ್ಜಿ ವಿಚಾರಣೆ ವೇಳೆ ಸರ್ಕಾರಿ ವಕೀಲರು ಹಾಜರಾಗಿ, ಜ.7ರ ಆದೇಶದಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡಬೇಕು ಎಂದು ತಿಳಿಸಿತ್ತು. ಆ ಆದೇಶವನ್ನು ಫೆ.16ರಂದು ಹಿಂಪಡೆದು ಫೆ.21ರಂದು ಮತ್ತೊಂದು ತಿದ್ದುಪಡಿ ಆದೇಶ ಹೊರಡಿಸಿ, ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ ಶಾಲೆಗಳಲ್ಲಿ ದೈನದಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕು ಎಂದು ಹೇಳಲಾಗಿದೆ ಎಂದು ತಿಳಿಸಿ ಆ ಆದೇಶದ ಪ್ರತಿಯನ್ನು ಕೋರ್ಟ್‌ಗೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ