ಕನ್ನಡಪ್ರಭ ವಾರ್ತೆ ಮದ್ದೂರು
ನಗರದ ಸಂಜಯ ಚಿತ್ರಮಂದಿರದ ಬಳಿ ಕೆಂಪೇಗೌಡ ಒಕ್ಕಲಿಗರ ಸಂಘ ಮತ್ತು ಚುಂಚಶ್ರೀ ಗೆಳೆಯರ ಬಳಗದಿಂದ ನಡೆದ ಸಮಾರಂಭದಲ್ಲಿ ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಪೀಠಾಧ್ಯಕ್ಷ ಅಧ್ಯಕ್ಷ ಡಾ.ನಿಶ್ಚಲಾನಂದನಾಥ ಶ್ರೀಗಳು ಶಿವಶಂಕರೇಗೌಡರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ನಂತರ ಮಾತನಾಡಿದ ಶ್ರೀಗಳು, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ರಾಜ್ಯ ಹಾಗೂ ಬೆಂಗಳೂರು ನಗರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸರ್ಕಾರ ಇವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಬೆಂಗಳೂರನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಅಭಿವೃದ್ಧಿ ಪಡಿಸಿದ ಎಸ್.ಎಂ ಕೃಷ್ಣ ರವರ ಸಾಧನೆಯನ್ನು ಮಾತಿನಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದರು.ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಗುರಿಯಾಗಿಸಿಕೊಂಡು ಎಸ್.ಎಂ.ಕೃಷ್ಣ ಅವರು ಅಪಾರ ಸಾಧನೆ ಮಾಡಿದ್ದಾರೆ. ಮುಂಬರುವ ದಿನಮಾನಗಳಲ್ಲಿ ಇವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸುವ ಮೂಲಕ ಸಮುದಾಯಕ್ಕೆ ಬಹುದೊಡ್ಡ ಕೊಡುಗೆ ನೀಡಲು ಶಾಸಕರು ಹಾಗೂ ಒಕ್ಕಲಿಗರ ಸಂಘದ ನಿರ್ದೇಶಕರು ಮುಖ್ಯಮಂತ್ರಿಗಳಿಗೆ ಮನವಿ ಮಾಡಬೇಕು ಎಂದು ಕೋರಿದರು.
ಒಕ್ಕಲಿಗ ಸಮುದಾಯಕ್ಕಾಗಿ ರಾಜ್ಯದ ಪ್ರತಿಯೊಂದು ತಾಲೂಕು ಜಿಲ್ಲೆಯಲ್ಲೂ ವಿದ್ಯಾರ್ಥಿ ನಿಲಯ, ಸಮುದಾಯದ ಭವನ ನಿರ್ಮಿಸಿ ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯಕ್ಕೆ ಹೆಚ್ಚಿನ ಶಕ್ತಿ ತುಂಬುವಂತಹ ಕೆಲಸವಾಗಬೇಕು. ಎಸ್ಎಸ್ಎಲ್ಸಿ ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಸಂಘದಿಂದ ಸಾರ್ವಜನಿಕವಾಗಿ ಅಭಿನಂದಿಸಿ ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.
ಕೆಂಪೇಗೌಡ ಜಯಂತಿಗೆ ಸೀಮಿತ ಸಂಖ್ಯೆ ಜನರು ಮಾತ್ರ ಭಾಗವಹಿಸುತ್ತಿರುವ ಪರಿಣಾಮ ಸಮುದಾಯದ ಐಕ್ಯತೆಗೆ ಧಕ್ಕೆಯಾಗುತ್ತಿದೆ. ಮುಂದಾದರು ಪ್ರತಿಯೊಬ್ಬರು ಸಂಘಟಿತರಾಗಿ ಇಂತಹ ಜಯಂತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಮುದಾಯಕ್ಕೆ ಹೆಚ್ಚಿನ ಶಕ್ತಿ ತುಂಬುವಂತಹ ಕೆಲಸವಾಗಬೇಕೆಂದರು
ಚುನಾವಣೆ ವೇಳೆ ರಾಜಕೀಯ ಮಾಡಬೇಕೆ ಹೊರತು ಸಂಘಟನೆಯ ವಿಚಾರ ಬಂದಾಗ ಎಲ್ಲರೂ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಇತರೆ ಸಮುದಾಯಗಳಂತೆ ಒಗ್ಗಟ್ಟು ಪ್ರದರ್ಶಿಸುವ ಮೂಲಕ ನಮ್ಮತನವನ್ನು ಉಳಿಸಿಕೊಳ್ಳಬೇಕು ಎಂದರು.
ಇದೇ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪೂರ್ಣಪ್ರಜ್ಞಾ ವಿದ್ಯಾ ಸಂಸ್ಥೆ ವಿದ್ಯಾರ್ಥಿ ಎಸ್.ಆರ್.ಭುವನ್ ಗೌಡರನ್ನು ಅಭಿನಂದಿಸಲಾಯಿತು. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ನಲ್ಲಿಗೆರೆ ಬಾಲು, ರಾಘವೇಂದ್ರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಟಿ.ರವಿಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂಸರ್ಶ, ಎಪಿಎಂಸಿ ಮಾಜಿ ಉಪಾಧ್ಯಕ್ಷೆ ಮಮತಾ ಶಂಕರೇಗೌಡ, ಪೂರ್ಣಪ್ರಜ್ಞಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ಆರ್.ಅನಂತೆಗೌಡ, ಅಖಿಲ ಕರ್ನಾಟಕ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ಶಿವಲಿಂಗಯ್ಯ, ನಿರ್ದೇಶಕರಾದ ಪಿ.ಶಿವಪ್ಪ, ಸುರೇಶ್, ದೇವಕುಮಾರ್, ಶಿವಲಿಂಗಯ್ಯ ಹಾಜರಿದ್ದರು.