ನಾಗಮಂಗಲ ಗಲಭೆ ಪ್ರಕರಣಕ್ಕೆ ಹೊಸ ತಿರುವು : ಕೇರಳದ ನಿಷೇಧಿತ ಪಿಎಫ್‌ಐ ಸಂಘಟನೆ ಜೊತೆ ಸಂಪರ್ಕ?

KannadaprabhaNewsNetwork | Updated : Sep 16 2024, 05:16 AM IST

ಸಾರಾಂಶ

ನಾಗಮಂಗಲದಲ್ಲಿ ನಡೆದ ಗಣೇಶ ವಿಸರ್ಜನೆ ಗಲಭೆಯಲ್ಲಿ ಕೇರಳ ಮೂಲದ ನಿಷೇಧಿತ ಪಿಎಫ್‌ಐ ಸಂಘಟನೆಯ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಇಬ್ಬರು ಕೇರಳ ಮೂಲದ ಯುವಕರನ್ನು ಬಂಧಿಸಲಾಗಿದ್ದು, ಗಲಭೆಗೆ ಪೂರ್ವ ನಿಯೋಜಿತ ಸಂಚು ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

  ನಾಗಮಂಗಲ(ಮಂಡ್ಯ) :  ಪಟ್ಟಣದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಕೋಮು ಗಲಭೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಗಲಾಟೆ ಹಿಂದೆ ಕೇರಳ ಮೂಲದ ನಿಷೇಧಿತ ಪಿಎಫ್‌ಐ ಸಂಘಟನೆಯ ಲಿಂಕ್‌ ಇರುವ ಆರೋಪ ಕೇಳಿಬಂದಿದೆ.

ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ 44ನೇ ಆರೋಪಿ ಯೂಸೂಫ್ ಮತ್ತು 61ನೇ ಆರೋಪಿ ನಾಸೀರ್‌ ಎಂಬವರನ್ನು ಬಂಧಿಸಲಾಗಿದ್ದು, ಇವರು ಕೇರಳದ ಮಲ್ಲಪ್ಪುರಂ ಮೂಲದವರಾಗಿದ್ದಾರೆ. ಗಲಭೆ ಸಮಯದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಇವರನ್ನು ಬಂಧಿಸಲಾಗಿದ್ದು, ಇವರು ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ಗಲಭೆಯಲ್ಲಿ ಹೊರಗಿನವರ ಕೈವಾಡ ಇದೆ ಎಂಬ ಆರೋಪ ಆರಂಭದಿಂದಲೂ ಕೇಳಿಬರುತ್ತಿತ್ತು. ಸದ್ಯ ಪ್ರಕರಣದ ಎಫ್‌ಐಆರ್‌ನಲ್ಲಿರುವ 74 ಆರೋಪಿಗಳ ಪೈಕಿ ಈ ಇಬ್ಬರು ಹಲವು ವರ್ಷಗಳಿಂದ ಪಟ್ಟಣದಲ್ಲಿ ನೆಲೆಸಿಕೊಂಡು ಪಾತ್ರೆ ಮತ್ತು ಬೇಕರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಕೇರಳ ಮೂಲದವರಾದ ಇವರಿಬ್ಬರು ಪಿಎಫ್‌ಐ ಸಂಘಟನೆಗೆ ಸೇರಿದವರು ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ಪೂರ್ವ ತಯಾರಿ:

ಪಟ್ಟಣದಲ್ಲಿ ಕೋಮು ಗಲಭೆ ನಡೆಸಲು ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪವೂ ಇದೆ. ಇದಕ್ಕೆ ಪೂರಕವಾಗಿ ಪಟ್ಟಣದ ಮೆಡಿಕಲ್ ಶಾಪ್‌ವೊಂದರಲ್ಲಿ ಗಲಭೆಗೂ ಮೊದಲೇ 200 ಮಾಸ್ಕ್‌ಗಳನ್ನು ಖರೀದಿಸಲಾಗಿದೆ ಎಂದು ಹೇಳಲಾಗಿದೆ. ಪೆಟ್ರೋಲ್ ಬಾಂಬ್ ಬಳಕೆಯಲ್ಲೂ ಕೇರಳ ಮೂಲದವರ ಕೈವಾಡವಿದೆ. ಹಾಗಾಗಿ ಈ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಕೇರಳ ಮೂಲದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು ಪಿಎಫ್‌ಐ ಸಂಘಟನೆಗೆ ಸೇರಿದವರೋ, ಅಲ್ಲವೋ ಎಂಬ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ಬಯಲಾಗಲಿದೆ. ಗಲಭೆ ಹಿಂದೆ ಯಾರ ಕೈವಾಡವಿದೆ ಎಂಬುದು ಬೆಳಕಿಗೆ ಬರಬೇಕಿದೆ. ಈಗ ಪಟ್ಟಣ ಸಹಜ ಸ್ಥಿತಿಗೆ ಮರಳಿದೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು.

- ಎನ್.ಚಲುವರಾಯಸ್ವಾಮಿ, ಕೃಷಿ ಸಚಿವ

Share this article