ನಾಗಮಂಗಲ: ಸುಭಾಷ್‌ ನಗರದ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

KannadaprabhaNewsNetwork |  
Published : Mar 18, 2026, 01:45 AM IST
17ಕೆಎಂಎನ್ ಡಿ26 | Kannada Prabha

ಸಾರಾಂಶ

ನಾಗಮಂಗಲ ಪಟ್ಟಣದ 17ನೇ ವಾರ್ಡ್‌ನ ಸಮಗ್ರ ಅಭಿವೃದ್ಧಿಗೆ 4 ಕೋಟಿ ರು. ಅನುದಾನ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳು ಆರಂಭವಾಗಲಿವೆ. ಪುರಸಭೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ ಕೆಲವು ಗ್ರಾಮಗಳನ್ನು ವಿಶೇಷ ಅನುದಾನದ ಮೂಲಕ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲು ಬದ್ಧನಾಗಿದ್ದೇನೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಪುರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕಟ್ಟೆಚ್ಚರ ವಹಿಸಬೇಕೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿ, ಪುರಸಭೆ ವ್ಯಾಪ್ತಿಯ 1ನೇ ವಾರ್ಡ್‌ನ ಬಹುತೇಕ ಮೂಲ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಸುಭಾಷ್‌ ನಗರದ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆಯಲ್ಲಿ ಇರುವ ಗೊಂದಲ ಸೇರಿದಂತೆ ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ ನಂಬರ್ ಒನ್ ಮಾದರಿ ಬಡಾವಣೆಯನ್ನಾಗಿಸುವ ಉದ್ದೇಶ ನನ್ನದಾಗಿದೆ ಎಂದರು.

ಪಟ್ಟಣದ 17ನೇ ವಾರ್ಡ್‌ನ ಸಮಗ್ರ ಅಭಿವೃದ್ಧಿಗೆ 4 ಕೋಟಿ ರು. ಅನುದಾನ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳು ಆರಂಭವಾಗಲಿವೆ. ಪುರಸಭೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ ಕೆಲವು ಗ್ರಾಮಗಳನ್ನು ವಿಶೇಷ ಅನುದಾನದ ಮೂಲಕ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲು ಬದ್ಧನಾಗಿದ್ದೇನೆ ಎಂದರು.

ಬೇಸಿಗೆ ಮುಗಿದು ಮಳೆಗಾಲ ಆರಂಭವಾಗುವವರೆಗೂ ಜನ ಜಾನುವಾರುಗಳ ಕುಡಿವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ತಹಸೀಲ್ದಾರ್, ತಾಪಂ ಇಒ ಹಾಗೂ ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದರು.

ಪುರಸಭೆ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿನ ಮತದಾರರ ಪಟ್ಟಿ ಮತ್ಯಾವುದೋ ವಾರ್ಡ್‌ನ ಪಟ್ಟಿಗೆ ಸೇರ್ಪಡೆಯಾಗಿವೆ. ಈ ಬಗ್ಗೆ ಬಿಎಲ್‌ಒಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಇದರಿಂದ ಚುನಾವಣೆಯಲ್ಲಿ ಕೆಲ ಸಮಸ್ಯೆಗಳಾಗಲಿವೆ ಎಂದು ಸ್ಥಳೀಯ ಮುಖಂಡರು ಸಚಿವರ ಗಮನಕ್ಕೆ ತಂದರು.

ಇದಕ್ಕೆ ಸ್ಪಂದಿಸಿದ ಸಚಿವರು, ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪವಾಗದಂತೆ ಈಗಲೇ ಕ್ರಮವಹಿಸಬೇಕು. ಯಾವ ಮತಗಟ್ಟೆಯ ಬಿಎಲ್‌ಒ ಆಸಕ್ತಿಯಿಂದ ಕೆಲಸ ಮಾಡುತ್ತಿಲ್ಲವೋ ಅಂತಹ ಬಿಎಲ್‌ಒಗಳನ್ನು ಬದಲಾಯಿಸಿ. ಈಗಲೇ ಮತಪಟ್ಟಿಯನ್ನು ಸರಿಪಡಿಸಿ ಎಂದು ತಹಸೀಲ್ದಾರ್‌ಗೆ ನಿರ್ದೇಶನ ನೀಡಿದರು.

ತಾಲೂಕಿನ ಶೆಟ್ಟಹಳ್ಳಿ ಗ್ರಾಮದ ಹಾಲಿನ ಡೈರಿಯಲ್ಲಿ ಕೋಟ್ಯಂತರ ರು. ಅಕ್ರಮ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದ ನಂತರ ಸ್ಥಳೀ ಅಧಿಕಾರಿಗಳಿಂದ ನಡೆಸಿದ ತನಿಖೆಯಲ್ಲಿ ಕೆಲವು ಲೋಪಗಳು ಹಾಗೂ ಹಣ ದುರುಪಯೋಗ ಕಂಡುಬಂದಿರುವ ಹಿನ್ನೆಲೆಯಲ್ಲಿ ಡೈರಿ ಕಾರ್ಯದರ್ಶಿ ವಿರುದ್ಧ ಅಕ್ರಮಕ್ಕೆ ಸಂಬಂಧಿಸಿದಂತೆ ತ್ವರಿತಗತಿಯಲ್ಲಿ ಸಂಪೂರ್ಣ ತನಿಖೆ ನಡೆಸಿ 10 ನಗಳಲ್ಲಿ ತಮಗೆ ವರದಿ ನೀಡುವಂತೆ ಸಹಕಾರ ಇಲಾಖೆ ಎಆರ್ ನಾಗಭೂಷಣ್ ಗೆ ಸೂಚಿಸಿದರು.

ವರದಿ ಬಂದ ನಂತರ ಕಾರ್ಯದರ್ಶಿಯನ್ನು ಆ ಸ್ಥಾನದಿಂದ ತೆಗೆದುಹಾಕುವುದು, ಕ್ರಿಮಿನಲ್ ಪ್ರಕರಣ ದಾಖಲಿಸುವುದು ಅಥವಾ ಅಕ್ರಮವೆಸಗಿರುವ ಹಣ ವಸೂಲಿ ಮಾಡುವುದು ಸೇರಿದಂತೆ ಹಲವು ಪ್ರಕ್ರಿಯೆಗಳು ಕಾನೂನು ಬದ್ಧವಾಗಿ ನಡೆಯಲಿವೆ. ಯಾರೇ ಆಗಲಿ ಕ್ಷಮಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರಿಗೆ ಕಾನೂನು ಕ್ರಮವಾಗಲಿದೆ ಎಂದರು.

ಈ ವೇಳೆ ತಹಸೀಲ್ದಾರ್ ಜಿ.ಆದರ್ಶ, ತಾ.ಪಂ.ಇಒ ಸತೀಶ್, ಪುರಸಭೆ ಮುಖ್ಯಾಧಿಕಾರಿ ವೀಣಾ, ಸೆಸ್ಕಾಂ ಇಇ ಮಂಜುನಾಥ್ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ; ಅಧಿಕಾರಿಗಳಿಂದ ಅಗತ್ಯ ಸಿದ್ಧತೆ
ಅಡುಗೆ ಅನಿಲ ಕೊರತೆ: ಸೌದೆ ಒಲೆಗಳತ್ತ ಜನರ ಚಿತ್ತ