ಕನ್ನಡಪ್ರಭ ವಾರ್ತೆ ನಾಗಮಂಗಲ
ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸುವ ಮೂಲಕ ವಿಜಯೋತ್ಸವ ಆಚರಿಸಿದರು.ಪಟ್ಟಣದ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಟಿ.ಮರಿಯಪ್ಪ ವೃತ್ತ, ಮಂಡ್ಯ ಸರ್ಕಲ್, ಪಿಎಲ್ಡಿ ಬ್ಯಾಂಕ್ ಎದುರು ಹಾಗೂ ಬ್ಲಾಕ್ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿದ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಗೆಲುವು ಸಾಧಿಸಿದ ಮೂವರು ಅಭ್ಯರ್ಥಿಗಳ ಪರ ಘೋಷಣೆ ಕೂಗಿ ಸಂಭ್ರಮಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್ ಮಾತನಾಡಿ, ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಆಶೀರ್ವದಿಸಿದ್ದಾರೆ. ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರಿಗೆ ಈ ಉಪ ಚುನಾವಣೆಯ ಫಲಿತಾಂಶವೇ ತಕ್ಕ ಉತ್ತರವಾಗಿದೆ ಎಂದರು.ಚಿಣ್ಯ ವೃತ್ತದಲ್ಲಿ ವಿಜಯೋತ್ಸವ:
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಚಿಣ್ಯ ವೃತ್ತದಲ್ಲಿ ಕಾರ್ಯಕರ್ತರು ಬೃಹತ್ ಪಟಾಕಿ ಸಿಡಿಸಿ ಸ್ಥಳೀಯ ಜನರಿಗೆ ಸಹಿ ವಿತರಿಸುವ ಮೂಲಕ ವಿಜಯೋತ್ಸವ ಆಚರಿಸಿದರು.ಈ ವೇಳೆ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ತಟ್ಟಹಳ್ಳಿ ನರಸಿಂಹಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಹಾಲ್ತಿ ಗಿರೀಶ್, ತಾಪಂ ಮಾಜಿ ಅಧ್ಯಕ್ಷರಾದ ಆರ್.ಕೃಷ್ಣೇಗೌಡ, ಭೀಮನಹಳ್ಳಿ ಮರಿಸ್ವಾಮಿ, ಮುಖಂಡರಾದ ಚಿಣ್ಯ ವೆಂಕಟೇಶ್, ಹೊಣಕೆರೆ ಬಸವರಾಜು, ತ್ಯಾಪೇನಹಳ್ಳಿ ಶ್ರೀನಿವಾಸ್, ನರಸಿಂಹಮೂರ್ತಿ, ಹೊಣಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಎಂ.ಚಿಕ್ಕಣ್ಣ, ಜಯರಾಮು, ಸತೀಶ್ ಸೇರಿದಂತೆ ಹಲವರು ಇದ್ದರು.