ನಗರಳ್ಳಿ ಗ್ರಾಮದ ಸುಗ್ಗಿ ಉತ್ಸವ ನೆರವೇರಿತು. ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳು ಜರುಗಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಇಲ್ಲಿಗೆ ಸಮೀಪದ ಶಾಂತಳ್ಳಿ ಹೋಬಳಿಯ ನಗರಳ್ಳಿ ಗ್ರಾಮದ ಐತಿಹಾಸಿಕ ಕೂತಿನಾಡು ಸುಗ್ಗಿ ಉತ್ಸವ ಅಪಾರ ಸಂಖ್ಯೆಯ ಭಕ್ತಾದಿಗಳ ಸಮ್ಮುಖದಲ್ಲಿ ಸೋಮವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.
ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.
ಸುಗ್ಗಿ ಉತ್ಸವದ ಕೊನೆ ದಿನವಾದ ಸೋಮವಾರ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ತೆರೆ ಬಿದ್ದಿತು.
ಸುಗ್ಗಿ ಕುಣಿತ, ಸುಗ್ಗಿಹಾಡುವುದು, ಬಿಲ್ಲು ತೂಗುವುದು ಸೇರಿದಂತೆ ವಿವಿಧ ಜಾನಪದ ನೃತ್ಯಗಳು ನಡೆದವು. 18 ಗ್ರಾಮಗಳ ನವ ದಂಪತಿಗಳು ಮದುವೆ ಕಾಣಿಕೆಯನ್ನು ಸಲ್ಲಿಸಿದರು. ಹರಕೆ ತಿರಿಸುವುದು ಮತ್ತು ಹರಕೆ ಮಾಡಿಕೊಳ್ಳುವ ಕಾರ್ಯಗಳು ನಡೆದವು. ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ, ಓಡಳ್ಳಿ ಗ್ರಾಮಗಳ ಮುಖ್ಯಸ್ಥರು ಗ್ರಾಮದೇವತೆಗೆ ಪಟ್ಟ ಒಪ್ಪಿಸಿ, ಸಾಮೂಹಿಕ ಪೂಜೆ ನೆರವೇರಿಸಿದರು. ನಂತರ ಉತ್ತಮ ಮಳೆ ಬೆಳೆಗಾಗಿ ಪ್ರಾರ್ಥಿಸಿದರು.
ಸುಗ್ಗಿ ಕಟ್ಟೆಯ ಮುಖ್ಯ ರಂಗದಲ್ಲಿ ಈಡುಗಾಯಿ ಒಡೆಯಲಾಯಿತು. ಭಕ್ತಾದಿಗಳಿಗೆ ಅನ್ನಸಂರ್ಪಣೆ ನಡೆಯಿತು. ಸವಿನ್, ವಸಂತ್, ಇಂದ್ರೇಶ್, ಸಿಶಾಂತ್, ಶಶಿಕುಮಾರ್ ದೇವರ ಒಡೆಕಾರರಾಗಿ ಕಾರ್ಯನಿರ್ವಹಿಸಿದರು. ರಮೇಶ್, ಪ್ರಸನ್ನ, ಪ್ರಕಾಶ್ ದೇವರ ಸೇವೆ ಮಾಡಿದರು. ಉತ್ಸವದಲ್ಲಿ ಶಾಸಕ ಡಾ.ಮಂತರ್ಗೌಡ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಭಾಗವಹಿಸಿ ಗ್ರಾಮಸ್ಥರ ಸನ್ಮಾನ ಸ್ವೀಕರಿಸಿದರು. ಕೂತಿನಾಡು ಶ್ರೀ ಸಬ್ಬಮ್ಮ ದೇವರ ಸಮಿತಿ ಅಧ್ಯಕ್ಷ ಕೆ.ಬಿ.ಜಗದೀಶ್, ಉಪಾಧ್ಯಕ್ಷ ಸಿ.ಎಸ್.ಬೋಪಯ್ಯ, ಕಾರ್ಯದರ್ಶಿ ಕೆ.ಯು. ಜಗದೀಶ್, ಖಜಾಂಚಿ ಎನ್.ಬಿ.ಸುರೇಶ್ ಮತ್ತು ಗ್ರಾಮದ ಹಿರಿಯರು ಸುಗ್ಗಿಯ ಉಸ್ತುವಾರಿ ವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.