ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರದ್ಧಾಭಕ್ತಿಯ ನಾಗರ ಪಂಚಮಿ ಆಚರಣೆ

KannadaprabhaNewsNetwork |  
Published : Aug 10, 2024, 01:33 AM IST
ಕುಕ್ಕೆಸುಬ್ರಹ್ಮಣ್ಯದಲ್ಲಿ ಶ್ರದ್ಧಾಭಕ್ತಿಯನಾಗರ ಪಂಚಮಿ ಆಚರಣೆ | Kannada Prabha

ಸಾರಾಂಶ

ನಾಗದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಜಲಾಭಿಷೇಕ, ಸೀಯಾಳಾಭಿಷೇಕ ನೆರವೇರಿಸಲಾಯಿತು.

ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ

ದಕ್ಷಿಣ ಭಾರತದ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿಯನ್ನು ಶುಕ್ರವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಮಧ್ಯಾಹ್ನ ಮಹಾಪೂಜೆಯ ಬಳಿಕ ದೇವಳದ ಅರ್ಚಕ ವೇದಮೂರ್ತಿ ರಮೇಶ್ ನೂರಿತ್ತಾಯರು ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಜಲಾಭಿಷೇಕ ಮಾಡಿದರು. ಬಳಿಕ ಮಹಾಮಂಗಳಾರತಿ, ವಿವಿಧ ವೈದಿಕ ವಿದಿವಿಧಾನಗಳನ್ನು ನೆರವೇರಿಸಿ ಪ್ರಸಾದ ನೀಡಿದರು.

ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿ ನಾಗರಾಜನಿಗೆ ಹಾಲು ಮತ್ತು ಎಳನೀರಿನ ಅಭಿಷೇಕ ನೆರವೇರಿತು. ಭಕ್ತರು ನಾಗರಾಜನಿಗೆ ತನು ಎರೆದು ಕೃತಾರ್ಥರಾದರು. ಭಕ್ತಾದಿಗಳು ನೀಡಿದ ಕ್ಷೀರ ಮತ್ತು ಎಳನೀರನ್ನು ಪುರೋಹಿತ ಕುಮಾರ ಭಟ್ ನಾಗದೇವರಿಗೆ ಅರ್ಪಿಸಿದರು. ತನುವಿನೊಂದಿಗೆ ಹಿಂಗಾರ, ಹಣ್ಣುಕಾಯಿ ಇತ್ಯಾದಿಗಳನ್ನು ಕೂಡಾ ಭಕ್ತರು ಸಮರ್ಪಿಸಿದರು. ಮುಂಜಾನೆಯಿಂದಲೇ ಸರತಿಯ ಸಾಲಿನಲ್ಲಿ ಸಾಗಿ ಬಂದು ಭಕ್ತರು ಹಾಲು ಮತ್ತು ಎಳನೀರು ಸಮರ್ಪಿಸಿದರು.

ಈ ಸಂದರ್ಭ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಎಇಒ ಯೇಜುರಾಜ್, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಅಭಿಯಂತರ ಉದಯಕುಮಾರ್, ಹೆಬ್ಬಾರ್ ಪ್ರಸನ್ನ ಭಟ್, ಪಾಟಾಳಿ ಲೋಕೇಶ್ ಎ.ಆರ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

ಸೇವೆ ಸಮರ್ಪಣೆ: ಕುಕ್ಕೆಯಲ್ಲಿ ಪ್ರತಿದಿನ ನಡೆಯುವ ಆಶ್ಲೇಷಾ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ, ಶೇಷ ಸೇವೆ, ಕಾರ್ತಿಕ ಪೂಜೆ ಮೊದಲಾದವುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಊರ ಮತ್ತು ಪರವೂರ ಭಕ್ತರು ನೆರವೇರಿಸಿದರು.

ಅತ್ಯಧಿಕ ಸಂಖ್ಯೆಯಲ್ಲಿ ಊರ ಭಕ್ತರು ಬೆಳಗ್ಗೆಯಿಂದಲೇ ತನು ಅರ್ಪಿಸಿ ಸೇವೆಯನ್ನು ನೆರವೇರಿಸಿ ಪ್ರಸಾದ ಸ್ವೀಕರಿಸಿದರು. ದೇವಳದ ಹೊರಾಂಗಣದಲ್ಲಿ ಮಾರುದ್ದದ ಸರತಿ ಸಾಲಿನ ಮೂಲಕ ತೆರಳಿ ತನು ಸಮರ್ಪಿಸಿದರು. ನಾಗನಿಗೆ ಶುದ್ಧ ಆಕಳ ಹಾಲನ್ನು ಸಮರ್ಪಿಸುವುದು ವಾಡಿಕೆಯಾದುದರಿಂದ ಇಂದು ಹಸುವಿನ ಹಾಲಿಗೆ ಹೆಚ್ಚಿನ ಬೇಡಿಕೆ ಕಂಡು ಬಂತು. ಕ್ಷೇತ್ರದಲ್ಲಿ ಮಾತ್ರವಲ್ಲದೆ ಇಲ್ಲಿನ ಪರಿಸರದಲ್ಲಿನ ಹಾಲಿನ ಡೈರಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಲನ್ನು ಪಡೆದರು. ಇದನ್ನು ಮನಗಂಡ ಸ್ಥಳೀಯ ಹೈನುಗಾರರು ಹಸುವಿನ ಹಾಲನ್ನು ನೀಡಿದರು. ಅಲ್ಲದೆ ಊರವರು ದೂರದೂರಿನ ಹಾಲಿನ ಡೈರಿಗಳಿಂದ ಹಾಲನ್ನು ತರಿಸಿ ಭಕ್ತರಿಗೆ ವಿತರಿಸಿದರು. ಹೆಚ್ಚಿನ ಭಕ್ತಾದಿಗಳು ಇದರ ಉಪಯೋಗವನ್ನು ಪಡೆದುಕೊಂಡರು. ಈ ರೀತಿಯ ವ್ಯವಸ್ಥೆಯಿಂದಾಗಿ ಪರವೂರ ಭಕ್ತರಿಗೆ ಹೆಚ್ಚು ಅನುಕೂಲವಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಮಧು
ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ