ಶೈಕ್ಷಣಿಕವಾಗಿ ಹಿಂದುಳಿದಿದ್ದ ನಾಪೋಕ್ಲು ವಿನಲ್ಲಿ ಇದೀಗ ವಿವಿಧ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು ನಾಪೋಕ್ಲು ಶೈಕ್ಷಣಿಕವಾಗಿ ಮುಂದುವರೆದಿದೆ ಎಂದು ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಪಟ್ಟಡ ಧನು ಉತ್ತಯ್ಯ ಹೇಳಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಶೈಕ್ಷಣಿಕವಾಗಿ ಹಿಂದುಳಿದಿದ್ದ ನಾಪೋಕ್ಲು ವಿನಲ್ಲಿ ಇದೀಗ ವಿವಿಧ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು ನಾಪೋಕ್ಲು ಶೈಕ್ಷಣಿಕವಾಗಿ ಮುಂದುವರೆದಿದೆ ಎಂದು ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಪಟ್ಟಡ ಧನು ಉತ್ತಯ್ಯ ಹೇಳಿದರು.ಇಲ್ಲಿನ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವತಿಯಿಂದ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.ಗ್ರಾಮೀಣ ಪ್ರದೇಶದಲ್ಲಿ ಹಿಂದೆ ವಿದ್ಯಾರ್ಥಿಗಳಿಗೆ ಇಷ್ಟು ಅವಕಾಶ ಇರಲಿಲ್ಲ ಈಗ ವಿಪುಲ ಅವಕಾಶ ಲಭಿಸಿದೆ. ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಜೊತೆ ಕೈಜೋಡಿಸಿ ಶಿಕ್ಷಣದಲ್ಲಿ ಮುಂದುವರಿಯಬೇಕು ಎಂದರು. ವೇದಿಕೆ ಸಿಕ್ಕಾಗ ಬಳಸಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಯಶಸ್ಸು ಗಳಿಸಲು ಸಾಧ್ಯ. ವೇದಿಕೆಗಳನ್ನು ಸೂಕ್ತವಾಗಿ ಬಳಸಿಕೊಳ್ಳುವುದರಿಂದ ಧೈರ್ಯ ಹಾಗೂ ಆತ್ಮವಿಶ್ವಾಸ ಗಳಿಸಿಕೊಳ್ಳಲು ಸಾಧ್ಯ ಎಂದರು.ನೇತಾಜಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ. ಎಸ್. ಸುರೇಶ್ ಮಾತನಾಡಿ ಎಕ್ಸೆಲ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಉತ್ತಮ ಪ್ರಜೆಗಳಾಗಿ ಮೂಡಿಬರಲು ಸಾಧ್ಯವಾಗುತ್ತಿದೆ ಎಂದರು.ಶಾಲೆಯ ಸ್ಥಾಪಕ ಅಧ್ಯಕ್ಷ ಕುಟ್ಟಂಜೆಟ್ಟಿರ ಮಾದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಿರ್ದೇಶಕರಾದ ಕುಟ್ಟಂಜೆಟ್ಟಿರ ಶರತ್, ವಿದ್ಯಾ ಸುರೇಶ್, ಮುಖ್ಯ ಶಿಕ್ಷಕರು ಚೋಕಿರ ತಮ್ಮಯ್ಯ ಉಪಸ್ಥಿತರಿದ್ದರು. ವೇದಿಕೆಯಲ್ಲಿದ್ದ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆಗೊಳಿಸಿದರು. ನಿರ್ದೇಶಕಿ ಭವ್ಯ ಶಾಲಾ ವಾರ್ಷಿಕ ವರದಿ ವಾಚಿಸಿದರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿ ಪ್ರೇಕ್ಷಕರ ಮನಸೂರೆಗೊಂಡಿತು. ತರಗತಿಯ ವಿದ್ಯಾರ್ಥಿಗಳು ವೈವಿಧ್ಯಮಯ ನೃತ್ಯ ಪ್ರದರ್ಶಿಸಿದರು. ಪೌರಾಣಿಕ ಕಥಾ ಹಿನ್ನೆಲೆಯ ನೃತ್ಯರೂಪಕ, ಮೊಬೈಲ್ ಬಳಕೆಯ ದುಷ್ಪರಿಣಾಮಗಳು ನಾಟಕ ಸೇರಿದಂತೆ ಹತ್ತು ಹಲವು ನೃತ್ಯಗಳು ವೀಕ್ಷಕರನ್ನು ಸೂಜಿಗಲ್ಲಿನಂತೆ ಸೆಳೆದವು.
ವಿದ್ಯಾರ್ಥಿನಿಯರಾದ ದುಂಧುಬಿ, ದರ್ಶ ದೇಚಮ್ಮ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕ ವೃಂದ, ಪೋಷಕರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.