ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಜತೆಗೆ, ಆ.28ರಂದು ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆಯಲಿರುವ ಸರ್ಕಾರಿ ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಈಡಿಗ, ಬಿಲ್ಲವ, ದೀವರು ಸಹಿತ ಎಲ್ಲ 26 ಉಪಪಂಗಡಗಳ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸಿಕೊಂಡು ಬರುತ್ತಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಈ ಬಾರಿಯೂ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಡಳಿತದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಭಿಷೇಕ ಅವರು ಸಭೆಗೆ ತಿಳಿಸಿದ್ದರು. ಸಭೆಯಲ್ಲಿ ಹಾಜರಿದ್ದ ಮುಖಂಡರು ಇದಕ್ಕೆ ಒಪ್ಪಿಗೆ ಸೂಚಿಸಿ ಸರ್ಕಾರದೊಂದಿಗೆ ಸಹಕರಿಸಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ಸಹಮತ ವ್ಯಕ್ತಪಡಿಸಿದ್ದರು.ಆದರೆ ಪೂರ್ವಭಾವಿ ಸಭೆಯ ಎರಡು ದಿನಗಳ ಬಳಿಕ ಪ್ರಕಟಿಸಿದ ಆಹ್ವಾನ ಪತ್ರಿಕೆಯಲ್ಲಿ ಜಿಲ್ಲಾ ಆರ್ಯ ಈಡಿಗ ಸಂಘದ ಹೆಸರು ಹಾಗೂ ಜಿಲ್ಲಾಧ್ಯಕ್ಷರ ಹೆಸರು ಇಲ್ಲದಿರುವುದು ಗಮನಕ್ಕೆ ಬಂದಿದೆ ಎಂದು ಮುಖಂಡರು ತಿಳಿಸಿದ್ದಾರೆ. ಈ ಹಿಂದೆ ಪ್ರತಿವರ್ಷ ಜಿಲ್ಲಾ ಈಡಿಗ ಸಂಘದ ಹೆಸರು ಆಹ್ವಾನ ಪತ್ರಿಕೆಯ ಮುಖಪುಟದಲ್ಲಿದ್ದು, ಜಿಲ್ಲಾಧ್ಯಕ್ಷರ ಹೆಸರು ಮುಖ್ಯ ಅತಿಥಿಗಳ ಪಟ್ಟಿಯಲ್ಲಿ ಇರುತ್ತಿತ್ತು. ಈ ಬಾರಿ ಎರಡೂ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿದರು.
ನಂತರ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಆರ್. ಹುಲ್ತಿಕೊಪ್ಪ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಅವರನ್ನು ದೂರವಾಣಿ ಮೂಲಕ ವಿಚಾರಿಸಿದ್ದು, ಈ ವಿಚಾರದಲ್ಲಿ ತಮಗೆ ಸಂಬಂಧವಿಲ್ಲ, ಜಿಲ್ಲಾಧಿಕಾರಿಯವರನ್ನೇ ಕೇಳಬೇಕು ಎಂದು ಉತ್ತರಿಸಿರುವುದಾಗಿ ಆರೋಪಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಈಡಿಗ ಸಮಾಜವು ಹೆಚ್ಚಿನ ಜನಸಂಖ್ಯೆ ಹೊಂದಿದ್ದು, ಎಸ್. ಬಂಗಾರಪ್ಪ, ಕಾಗೋಡು ತಿಮ್ಮಪ್ಪ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಗಣಪತಿಯಪ್ಪ ಅವರಂತಹ ಮಹಾನ್ ನಾಯಕರಿಗೆ ಜನ್ಮ ನೀಡಿದ ಜಿಲ್ಲೆ ಇದಾಗಿದೆ. ಇಂತಹ ಸಂದರ್ಭ ಈಡಿಗ ಸಮಾಜವನ್ನು ಹೊರಗಿಟ್ಟು ಜಯಂತಿ ಆಚರಿಸುವುದು ಖಂಡನೀಯ ಎಂದು ತಿಳಿಸಿದರು.
-----ಬಾಕ್ಸ್-----
ಸಂತ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ, ಸಿದ್ಧಾಂತಗಳ ಅಳವಡಿಸಿಕೊಂಡು ಬರುತ್ತಿರುವ ಶಿವಮೊಗ್ಗ ಜಿಲ್ಲೆಯ ಈಡಿಗ, ದೀವರು, ಬಿಲ್ಲವ, ನಾಮಧಾರಿ ಹಾಗೂ ಇನ್ನಿತರ ಉಪಪಂಗಡಗಳ ಜನಾಂಗಕ್ಕೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವಮಾನ ಮಾಡಿದೆ. ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘದ ಅಡಿಯಲ್ಲಿ ಸಮಾಜದ ಎಲ್ಲ ಸಂಘಟನೆಗಳ ಮುಖಂಡರು ಹಾಗೂ ಸಮಾಜ ಬಾಂಧವರ ಸಹಯೋಗದಲ್ಲಿ ಪ್ರತ್ಯೇಕವಾಗಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸಲು ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಾಜಕ್ಕೆ ಆಗಿರುವ ಅನ್ಯಾಯ ಮತ್ತು ಅವಮಾನಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.
ಪೋಟೋ: 27ಎಸ್ಎಂಜಿಕೆಪಿ02