ಹುಬ್ಬಳ್ಳಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಚಾರ್ಜ್ಶೀಟ್ ವಿರೋಧಿಸಿ ನವನಗರದ ಆದಾಯ ತೆರಿಗೆ ಕಚೇರಿಯ ಎದುರು ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಿದರು.
ನವನಗರದಿಂದ ಐಟಿ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಐಟಿ- ಇಡಿ ದಾಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡ- ಹುಬ್ಬಳ್ಳಿ ರಸ್ತೆಯಲ್ಲಿ ಕೆಲಕಾಲ ಧರಣಿ ಕೂತರು. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಐಟಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಎಲ್ಲರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಪ್ರತಿಭಟನೆಯ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಜಾವುದ್ದೀನ್ ವಾಚ್ ಮೇಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ರಾಜ್ಯ ಕಾರ್ಯದರ್ಶಿ ನಾಗಾರ್ಜುನ ಕತ್ರಿಮಲ್, ಜಿಲ್ಲಾಧ್ಯಕ್ಷ ಅರ್ಜುನ್ ಪಾಟೀಲ್, ಗ್ರಾಮೀಣ ಜಿಲ್ಲಾಧ್ಯಕ್ಷ ಇಕ್ಬಾಲ್ ತಮಟಗಾರ, ಉಪಾಧ್ಯಕ್ಷ ಖಾಸೀಂ ಕೂಡಲಗಿ, ಶಾನುಖಾನ್, ಪ್ರೇಮ್ ಜಾದವ್, ಅಜ್ಮತ್ ಮುಲ್ಲಾ, ಅಜಾಜ್ ಖಾನ್ ಹಾಗೂ ರಾಹುಲ್ ಉಪಲ್ಲದಡಿ, ಜೇಕರ್ ಮುಜಾವರ್, ಚೇತನ್ ಕುಮಾರ್ ಸೀಗೆಹಳ್ಳಿ, ಅಬ್ಬು ಬಿಜಾಪುರ, ರಕೀಬ್ ದೇವಗೇರಿ, ಅಕ್ಷಯ್ ಕೊರಿಯವರ, ಮುಸ್ತಾಕ್ ನಿಪ್ಪಾಣಿ, ಜಾಫರ್, ಸೂರಜ್ ಗೌಳಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.