ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆಯ ನ್ಯೂನತೆ ಪರಿಶೀಲನೆ

KannadaprabhaNewsNetwork |  
Published : Oct 14, 2025, 01:00 AM IST
13ಕೆಎಂಎನ್ ಡಿ27 | Kannada Prabha

ಸಾರಾಂಶ

ಮದ್ದೂರು ತಾಲೂಕಿನ ನಿಡಘಟ್ಟ ಗಡಿಭಾಗದಿಂದ ನಿಡಘಟ್ಟ, ಕೋಡಿಹಳ್ಳಿ ರಸ್ತೆ, ಮದ್ದೂರು ಪಟ್ಟಣದ ಕೊಲ್ಲಿ ಸರ್ಕಲ್, ಸಾರಿಗೆ ಬಸ್ ನಿಲ್ದಾಣ ಹಾಗೂ ಪ್ರವಾಸಿ ಮಂದಿರ ವೃತ್ತದ ವರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ವಾಬಲೆ ಮತ್ತು ಎಂಜಿನಿಯರ್‌ ಅರುಣ್, ಸಿಬ್ಬಂದಿಯೊಂದಿಗೆ ಶಾಸಕರು ಪರಿವೀಕ್ಷಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರಸ್ತೆ ನ್ಯೂನತೆ ಮತ್ತು ಸಮಸ್ಯೆಗಳ ಬಗ್ಗೆ ಶಾಸಕ ಕೆ.ಎಂ.ಉದಯ್ ಸೋಮವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ನಿಡಘಟ್ಟ ಗಡಿಭಾಗದಿಂದ ನಿಡಘಟ್ಟ, ಕೋಡಿಹಳ್ಳಿ ರಸ್ತೆ, ಮದ್ದೂರು ಪಟ್ಟಣದ ಕೊಲ್ಲಿ ಸರ್ಕಲ್, ಸಾರಿಗೆ ಬಸ್ ನಿಲ್ದಾಣ ಹಾಗೂ ಪ್ರವಾಸಿ ಮಂದಿರ ವೃತ್ತದ ವರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ವಾಬಲೆ ಮತ್ತು ಎಂಜಿನಿಯರ್‌ ಅರುಣ್, ಸಿಬ್ಬಂದಿಯೊಂದಿಗೆ ಶಾಸಕರು ಪರಿವೀಕ್ಷಣೆ ಮಾಡಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮುರಿದು ಬಿದ್ದ ಉಕ್ಕಿನ ಬೇಲಿ, ಕುಸಿದು ಬಿದ್ದ ಸೇತುವೆಗಳು, ಚರಂಡಿ ಹಾಗೂ ಸರ್ವೀಸ್ ರಸ್ತೆಯ ಅಕ್ರಮ ಒತ್ತುವರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಿಸಿ ಇವುಗಳ ದುರಸ್ತಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು.

ನಿಡಘಟ್ಟ ಗ್ರಾಮದ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಹಂಗಾಮಿಯವಾಗಿ ಅಂಗಡಿ, ಮನೆಗಳು, ಹೋಟೆಲ್ ನಾಮಫಲಕ ತೆರವುಗೊಳಿಸಬೇಕು. ಮಳೆ ನೀರು ಸರಾಗವಾಗಿ ಹರಿಯುವಂತೆ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.

ಪಟ್ಟಣದ ಕೊಲ್ಲಿ ಸರ್ಕಲ್‌ನ ಶಿಂಷಾ ನದಿ ದಡದ ಸರ್ವೀಸ್ ರಸ್ತೆಯ ಬಲಭಾಗದಲ್ಲಿ ಒಣಗಿದ ತ್ಯಾಜ್ಯ ವಸ್ತು ಎಲ್ಲೆಂದರೆ ಅಲ್ಲಿ ಬಿಸಾಡುತ್ತಾ ನದಿ ನೀರಿನಲ್ಲಿ ಸೇರಿ ಮಲೀನವಾಗುತ್ತಿದೆ. ಇದನ್ನು ಸರಿಯಾಗಿ ವಿಲೇವಾರಿ ಮಾಡುವಂತೆ, ತ್ಯಾಜ್ಯ ಬಿಸಾಡುವ ವ್ಯಕ್ತಿಗಳ ವಿರುದ್ಧ ಅಗತ್ಯ ಕ್ರಮ ವಹಿಸುವಂತೆ ಗ್ರಾಪಂ, ಪುರಸಭೆ ಅಧಿಕಾರಿಗಳಿಗೆ ಶಾಸಕರು ಆದೇಶ ನೀಡಿದರು.

ಹೆದ್ದಾರಿ ಉದ್ಘಾಟನೆಯಾಗಿ ಮೂರು ವರ್ಷಗಳಾಗುತ್ತಿದೆ. ಆದರೆ, ಅಪೂರ್ಣಗೊಂಡಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳು ನಿರ್ಲಕ್ಷ್ಯತನ ತೋರುತ್ತಿದ್ದಾರೆ. ಈಗಾಗಲೇ ಕಾಮಗಾರಿ ಸಂಬಂಧ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಯೋಜನಾ ಪ್ರಾಧಿಕಾರದ ಅಧಿಕಾರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿತ್ತು ಎಂದರು.

ಕಾಮಗಾರಿಗೆ ಸಂಬಂಧ ಪಟ್ಟಂತೆ ಭೂಸ್ವಾಧೀನ ಪ್ರಕ್ರಿಯೆ ಎಲ್ಲಾ ಮುಗಿದಿದೆ. ಆದರೆ, ಚರಂಡಿ, ಸರ್ವಿಸ್ ರಸ್ತೆ, ಹಾಗೂ ನಾಲೆಗಳ ಕಾಮಗಾರಿ ಕೈಗೊಂಡಿದ್ದ ವೇಳೆಯಲ್ಲಿ ಕೆಲವರ ವಿರೋಧ ಹಾಗೂ ತಾಂತ್ರಿಕ ಸಮಸ್ಯೆಗಳಿಂದ ಕಾಮಗಾರಿ ನಡೆಸಲು ಸಾಧ್ಯವಾಗಿಲ್ಲ. ಇದರಲ್ಲಿ ಸಾರ್ವಜನಿಕರು ಕೂಡ ಸಹಕಾರ ನೀಡದ ಪರಿಣಾಮ ಅಪೂರ್ಣ ಕಾಮಗಾರಿಯಾಗಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಡಿಬಿಎಲ್ ಕಂಪನಿಗೆ ನೀಡಲಾಗಿತ್ತು. ಈಗ ಆ ಕಾಮಗಾರಿಗಳನ್ನು ಮಾಡಲು ಅವರ ಅವಧಿ ಮುಗಿದಿದೆ. ಹೀಗಾಗಿ ಸ್ಥಳೀಯ ಗುತ್ತಿಗೆದಾರರ ಮೂಲಕ ಕಾಮಗಾರಿ ನಡೆಸಲು ಸಚಿವರ ಸಭೆಯಲ್ಲಿ ತೀರ್ಮಾನಿಸಿದ್ದು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಾಮಗಾರಿಗಳಿಗೆ ಅನುದಾನ ನೀಡಲಿದ್ದಾರೆ. ಎರಡು ಮೂರು ತಿಂಗಳಲ್ಲಿ ಕಾಮಗಾರಿಗಳನ್ನು ಮುಗಿಸಲು ಸೂಚನೆ ನೀಡಲಾಗಿದೆ ಎಂದರು.

ಶಿಂಷಾ ನದಿಯ ಸರ್ವಿಸ್ ರಸ್ತೆಗೆ ಅಡ್ಡಲಾಗಿ ಮತ್ತೊಂದು ಸೇತುವೆ ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ಕ್ರಿಯಾಯೋಜನೆ ರೂಪಿಸಲಿರಲಿಲ್ಲ. ಮುಖ್ಯಮಂತ್ರಿಗಳು ಹೆದ್ದಾರಿ ವೀಕ್ಷಣೆಗೆ ಆಗಮಿಸಿದ್ದ ವೇಳೆ ನಾನು ಶಿಂಷಾ ನದಿಗೆ ಮತ್ತೊಂದು ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದ್ದೆ. ಹೀಗಾಗಿ ಮುಖ್ಯಮಂತ್ರಿಗಳು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ವ್ಯವಹಾರ ಮಾಡಿ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದ್ದಾರೆ ಎಂದರು.

ಈ ವೇಳೆ ತಾಪಂ ಮಾಜಿ ಸದಸ್ಯ ಚಲುವರಾಜು, ಮುಖಂಡರಾದ ಸತೀಶ್, ವಿಜಯ್ ಕುಮಾರ್, ಲೋಕೇಶ್, ಮಹೇಶ್, ಯತೀಶ್, ಪುಟ್ಟಪ್ಪ, ರಾಜು, ಅಪ್ಪೇಗೌಡ, ಬೊಮ್ಮಯ್ಯ, ಸತೀಶ್, ಶ್ರೀನಿವಾಸ್ ಮತ್ತಿತರರು ಇದ್ದರು.ಕೇಂದ್ರ ಸಚಿವರಿಗೆ ಕಾಳಜಿ ಇಲ್ಲ

ಮದ್ದೂರು:

ರಾಷ್ಟ್ರೀಯ ಹೆದ್ದಾರಿಯ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲೆಯ ಸಂಸದರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಾಳಜಿ ಇಲ್ಲ ಎಂದು ಶಾಸಕ ಕೆ.ಎಂ.ಉದಯ್ ಕಿಡಿಕಾರಿದರು.

ಹೆದ್ದಾರಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಎಚ್ಡಿಕೆ ಕೇಂದ್ರ ಸಚಿವರಾಗಿ ಒಂದೂವರೇ ವರ್ಷವಾಗುತ್ತಿದೆ. ಆದರೆ, ಹೆದ್ದಾರಿ ಕಾಮಗಾರಿ ಬೇರೆ ರಸ್ತೆಗಳಿಗಿಂತ ಅವೈಜ್ಞಾನಿಕವಾಗಿದೆ. ಅಪೂರ್ಣ ಕಾಮಗಾರಿಗಳ ವೀಕ್ಷಣೆ ಮಾಡಿ ಕ್ರಮ ಕೈಗೊಳ್ಳುವ ಯೋಚನೆ ಮಾಡಿದ್ದಾರಾ ಎಂದು ಪ್ರಶ್ನಿಸಿದರು.

ನಾಲ್ಕು ತಿಂಗಳಿಗೊಮ್ಮೆ ನಡೆಯುವ ದಿಶಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ಕೊಟ್ಟರೆ ಸಾಲದು. ರಸ್ತೆ ಗುಂಡಿ ಬಿದ್ದು ಚರಂಡಿ ಕಾಮಗಾರಿ, ಸರ್ವಿಸ್ ರಸ್ತೆಗಳಿಂದ ಜನರಿಗೆ ತೊಂದರೆಯಾಗಿರುವ ಬಗ್ಗೆ ಖುದ್ದು ಸ್ಥಳ ಪರಿಶೀಲನೆ ನಡೆಸಬೇಕು. ಅದು ಬಿಟ್ಟು ಕಾಟಾಚಾರದ ಸಭೆ ನಡೆಸಿ ಸೂಚನೆ ಕೊಟ್ಟು ಹೋದರೆ ಪ್ರಯೋಜನವಾಗಲ್ಲ. ನಾವು ನಮ್ಮ ಕ್ಷೇತ್ರದ ವ್ಯಾಪ್ತಿ ಆಗಿರುವ ಲೋಪದೋಷಗಳನ್ನು ರಾಜ್ಯ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಕೇಂದ್ರ ಸಚಿವರನ್ನು ಕುಟುಕಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆಗೆ ಕಾಲಿಟ್ಟಿರೋ ಹುಷಾರ್‌, ಕಚ್ಲಿಕ್ಕೆ ಕಾಯ್ತಿವೆ ಬೀದಿ ನಾಯಿ
ನಗರದಲ್ಲಿ ಡ್ರಗ್ಸ್ ಮಾರಾಟಕ್ಕೆಯತ್ನಿಸಿದ ಮೂವರ ಬಂಧನ