ಪ್ರಾಕೃತಿಕ ವಿಕೋಪ: ತ್ವರಿತ ಪರಿಹಾರ ವಿತರಿಸಲು ಸೂಚನೆ

KannadaprabhaNewsNetwork |  
Published : Aug 07, 2026, 03:00 AM IST
ಸಚಿವ ಯು.ಟಿ.ಖಾದರ್‌ ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರು | Kannada Prabha

ಸಾರಾಂಶ

ಭೂ ಕುಸಿತ ಮತ್ತು ಮಳೆಹಾನಿ ಸೇರಿದಂತೆ ಪ್ರಾಕೃತಿಕ ವಿಕೋಪಗಳ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ತ್ವರಿತವಾಗಿ ಮಂಜೂರು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸೂಚಿಸಿದ್ದಾರೆ.

ಮಂಗಳೂರು: ಭೂ ಕುಸಿತ ಮತ್ತು ಮಳೆಹಾನಿ ಸೇರಿದಂತೆ ಪ್ರಾಕೃತಿಕ ವಿಕೋಪಗಳ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ತ್ವರಿತವಾಗಿ ಮಂಜೂರು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸೂಚಿಸಿದ್ದಾರೆ.

ಬುಧವಾರ ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದರು.ಮಳೆಯಿಂದ ಮನೆ ಕುಸಿತ ಹಾಗೂ ಜೀವಹಾನಿ ನಡೆದ ಘಟನೆಗಳಿಗೆ ಸರ್ಕಾರದ ನಿಯಮಾನುಸಾರ ಪರಿಹಾರ ಮಂಜೂರು ಮಾಡಬೇಕು. ಮನೆಯೊಳಗೆ ನೀರು ನುಗ್ಗಿದ ಪ್ರಕರಣಗಳ ಸಂತ್ರಸ್ತರಿಗೂ ತುರ್ತು ಪರಿಹಾರವನ್ನು ಮಂಜೂರು ಮಾಡಬೇಕು. ಈ ವಿಷಯದಲ್ಲಿ ವಿಳಂಬವನ್ನು ಸಹಿಸಲಾಗುವುದಿಲ್ಲ ಎಂದು ಸಚಿವರು ತಿಳಿಸಿದರು.ಸನ್ನದ್ಧರಾಗಿ ಕಾರ್ಯನಿರ್ವಹಿಸಿ: ಮಳೆಗಾಲದಲ್ಲಿ ಅಧಿಕಾರಿಗಳು ಪೂರ್ತಿ ಸನ್ನದ್ಧರಾಗಿ ಕಾರ್ಯನಿರ್ವಹಿಸಬೇಕು. 24 ಗಂಟೆಯೂ ಸಾರ್ವಜನಿಕರ ಸೇವೆಗೆ ಲಭ್ಯರಾಗಬೇಕು. ಕಂಟ್ರೋಲ್ ರೂಂ ಸದಾ ಸನ್ನದ್ದ ಸ್ಥಿತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಚಿವರು ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಅಲ್ಲಲ್ಲಿ ನೀರು ನಿಲ್ಲುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿವೆ. ಈ ಹೆದ್ದಾರಿ ಸಮಸ್ಯೆಗಳನ್ನು ಪಟ್ಟಿ ಮಾಡಿ ಹಂತ ಹಂತವಾಗಿ ಬಗೆಹರಿಸಲು ಅವರು ತಿಳಿಸಿದರು.ಕೃಷಿ ಮತ್ತು ತೋಟಗಾರಿಕೆ ಇಲಾಖೆ ರೈತರಿಗೆ ಬೆಳೆ ವಿಮೆಯನ್ನು ತ್ವರಿತವಾಗಿ ಮಂಜೂರು ಮಾಡಬೇಕು ಎಂದು ಯು.ಟಿ ಖಾದರ್ ತಿಳಿಸಿದರು.

ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ 12 ಕೋಟಿ ರು. ಅನುಮೋದನೆಯಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಪಿಡಬ್ಲ್ಯೂಡಿ ಅಧಿಕಾರಿಗಳು ಸಭೆಗೆ ತಿಳಿಸಿದರು. ಬೆಳ್ತಂಗಡಿ ನಗರ ಯೋಜನಾ ಪ್ರಾಧಿಕಾರ ಸ್ಥಾಪನೆ ಮಾಡುವ ಸಂಬಂಧ ಪರಿಶೀಲಿಸಲಾಗುವುದು. ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರ ಕೆಲಸಕ್ಕೆ ಆದ್ಯತೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಪತ್ರ ವಿತರಣೆ: ಸಭೆಯಲ್ಲಿ ಸಚಿವ ಯು.ಟಿ. ಖಾದರ್ ಅವರು ರೆಖ್ಯಾದಲ್ಲಿ ಕಾಡಾನೆ ದಾಳಿಯಲ್ಲಿ ಮೃತ ಕುಟುಂಬಕ್ಕೆ 15 ಲಕ್ಷ ರು. ಪರಿಹಾರ ಮಂಜೂರಾತಿ ಪತ್ರ ನೀಡಿದರು. ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಅನಿಲ್‌ ಭೂಮರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.ಮಳೆ ಹಾನಿ ಪ್ರದೇಶಕ್ಕೆ ಭೇಟಿ: ಇದಕ್ಕೂ ಮೊದಲು ಸಚಿವ ಯು.ಟಿ. ಖಾದರ್ ಮಳೆಯಿಂದ ಹಾನಿಗೊಳಗಾದ ಬೆಳ್ತಂಗಡಿ ತಾಲೂಕಿನ ಗುರಿಂಗಾನ, ಪುತ್ರಬೈಲು, ಲಾಯಿಲ ಮತ್ತಿತರ ಕಡೆಗೆ ಭೇಟಿ ನೀಡಿ ಮಳೆ ಅನಾಹುತ ವೀಕ್ಷಿಸಿದರು. ಸಾರ್ವಜನಿಕರನ್ನು ಭೇಟಿಯಾಗಿ ಅವರ ಅಹವಾಲುಗಳನ್ನು ಆಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನ ಕಟ್ಟಿಕೊಳ್ಳಿ; ವ್ಯಸನ ಅಲ್ಲ: ರಾಜೇಂದ್ರ ಬಿ.
ಬರಹ ಪಠ್ಯಕ್ಕೆ ಸೀಮಿತ ಆಗದಿರಲಿ: ಡಾ.ರಾಜೇಶ್‌