ಬಳ್ಳಾರಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ದಾಖಲೆಯ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿಯ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು.
ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ, ಬಿಹಾರ ಚುನಾವಣೆ ದೇಶದಲ್ಲಿ ಇನ್ನು ಮುಂದೆ ಜರುಗುವ ಚುನಾವಣೆಗಳಿಗೆ ದಿಕ್ಸೂಚಿಯಂತಿದೆ. ಬಿಹಾರದ ಮತದಾರರು ಕೇಂದ್ರದ ಎನ್ಡಿಎ ಮೈತ್ರಿಕೂಟದ ಮೇಲೆ ಅಪಾರವಾದ ವಿಶ್ವಾಸವನ್ನಿಟ್ಟುಕೊಂಡು ಮತದಾನ ಮಾಡುವ ಮೂಲಕ ಅಭೂತಪೂರ್ವ ಗೆಲುವು ನೀಡಿದ್ದಾರೆ. ಪ್ರಮುಖವಾಗಿ ಬಿಹಾರದ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದು ಎನ್ಡಿಎ ಕೂಟಕ್ಕೆ ಜಯ ತಂದುಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಜರುಗುವ ಚುನಾವಣೆಯಲ್ಲಿ ಸಹ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ಜನರು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಬಿಹಾರದ ಚುನಾವಣೆಯ ಫಲಿತಾಂಶದ ಪರಿಣಾಮ ಕರ್ನಾಟಕ ಹಾಗೂ ಬಳ್ಳಾರಿಯ ಮೇಲೂ ಪರಿಣಾಮ ಬೀರಲಿದೆ. ಈ ವಿಜಯೋತ್ಸವ ದೇಶದ ಜನರ ವಿಜಯೋತ್ಸವವಾಗಿದೆ. ಬರುವ ದಿನಗಳಲ್ಲಿ ಕರ್ನಾಟಕದಲ್ಲೂ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂಬ ಸ್ಪಷ್ಟ ಸಂದೇಶ ರವಾನಿಯಾದಂತಾಗಿದೆ ಎಂದು ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಪಕ್ಷದ ಜಿಲ್ಲಾಧ್ಯಕ್ಷ ಅನಿಲಕುಮಾರ್ ಮೋಕಾ ತಿಳಿಸಿದರು.ನಗರದ ಗಡಗಿಚನ್ನಪ್ಪ ವೃತ್ತದಲ್ಲಿ ಜಮಾಯಿಸಿದ ನೂರಾರು ಪಕ್ಷದ ಕಾರ್ಯಕರ್ತರು ಭಾರತ ಮಾತಕೀ ಜೈ, ನರೇಂದ್ರ ಮೋದೀಜಿ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. ಇದೇ ವೇಳೆ ಪಕ್ಷದ ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡುವ ಮೂಲಕ ಸಂತಸ ಹಂಚಿಕೊಂಡರು.
ಪಕ್ಷದ ಜಿಲ್ಲಾ ಪ್ರಮುಖರಾದ ಎಸ್.ಗುರುಲಿಂಗನಗೌಡ, ಜಿ.ವೆಂಕಟರಮಣ, ವಿಜಯಲಕ್ಷ್ಮಿ, ಅಡವಿಸ್ವಾಮಿ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.