ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಭಯನಕ ರೂಪವನ್ನು ಪಡೆದುಕೊಂಡಿದೆ. ಕೇಂದ್ರ ಸರ್ಕಾರದ 78 ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ 9.78 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ.
ಕನ್ನಡಪ್ರಭ ವಾರ್ತೆ ಮೈಸೂರು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಖಾಲಿ ಹುದ್ದೆಗಳ ಭರ್ತಿ ಮಾಡಲು, ನೇಮಕಾತಿಯಲ್ಲಿನ ಅಕ್ರಮಗಳನ್ನು ತಡೆಗಟ್ಟಲು ಆಗ್ರಹಿಸಿ ದೇಶ ವ್ಯಾಪಿ ಸಹಿಸಂಗ್ರಹ ಅಭಿಯಾನ ಹಿನ್ನೆಲೆಯಲ್ಲಿ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಹತ್ತಿರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಜಿಲ್ಲಾ ಸಮಿತಿಯವರು ಗುರುವಾರ ಸಹಿಸಂಗ್ರಹ ಅಭಿಯಾನ ಹಮ್ಮಿಕೊಂಡಿದ್ದರು.ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಭಯನಕ ರೂಪವನ್ನು ಪಡೆದುಕೊಂಡಿದೆ. ಕೇಂದ್ರ ಸರ್ಕಾರದ 78 ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ 9.78 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಕರ್ನಾಟಕ ರಾಜ್ಯ ಸರ್ಕಾರದ ಇಲಾಖೆಗಳಲ್ಲೂ ಸಹ 2.85 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಅವರು ತಿಳಿಸಿದರು.ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಮತ್ತು ಹೊಸ ಉದ್ಯೋಗಗಳನ್ನು ಸೃಷ್ಟಿಸಬೇಕು. ಎಲ್ಲಾ ನೇಮಕಾತಿಗಳ ವಯೋಮಿತಿಯಲ್ಲಿ ಕನಿಷ್ಠ 5 ವರ್ಷಗಳ ಸಡಿಲಿಕೆ ನೀಡಬೇಕು. ಎಲ್ಲಾ ರೀತಿಯ ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು ಎಂದು ಅವರು ಒತ್ತಾಯಿಸಿದರು.ಕೆಪಿಎಸ್ಸಿಯಲ್ಲಿನ ಅಕ್ರಮ ತಡೆಗಟ್ಟಲು ರಾಜ್ಯ ಸರ್ಕಾರ ಹೋಟಾ ಸಮಿತಿ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಗುತ್ತಿಗೆ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಮತ್ತು ಎಲ್ಲಾ ಹುದ್ದೆಗಳಿಗೂ ಕಾಯಂ ನೇಮಕಾತಿ ಮಾಡಬೇಕು. ದೇಶಾದ್ಯಂತ ಗಿಗ್ ಕಾರ್ಮಿಕರಿಗೆ ಕಾರ್ಮಿಕರೆಂದು ಪರಿಗಣಿಸಿ ಮತ್ತು ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಯನ್ನು ಖಚಿತಪಡಿಸಬೇಕು ಎಂದು ಅವರು ಆಗ್ರಹಿಸಿದರು.ಉದ್ಯೋಗಾವಕಾಶ ದೊರೆಯುವವರೆಗೆ ಗೌರವಾನ್ವಿತ ಜೀವನ ನಡೆಸಲು ಸೂಕ್ತವಾದ ನಿರುದ್ಯೋಗ ಭತ್ಯೆ ನೀಡಬೇಕು. ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ನೀತಿಯನ್ನು ರದ್ದುಗೊಳಿಸಬೇಕು. ನೇಮಕಾತಿಗಳಲ್ಲಿ ದುಬಾರಿ ಪರೀಕ್ಷಾ ಶುಲ್ಕ ಕೈಬಿಡಬೇಕು ಹಾಗೂ ಪರೀಕ್ಷಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.ಈ ಅಭಿಯಾನದಲ್ಲಿ ಯುವಜನರು ಹಾಗೂ ಸಾರ್ವಜನಿಕರು ತಮ್ಮ ಸಹಿ ಹಾಕುವುದರ ಮೂಲಕ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು.ಈ ವೇಳೆ ಎಐಡಿವೈಒ ಜಿಲ್ಲಾಧ್ಯಕ್ಷ ಟಿ.ಆರ್. ಸುನಿಲ್, ಜಂಟಿ ಕಾರ್ಯದರ್ಶಿ ನೀತುಶ್ರೀ, ಸದಸ್ಯರಾದ ರಣಜಿತ್, ಪೂರ್ಣಿಮಾ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.