-ದೇವಲಾಪುರ ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಶಿಕ್ಷಣದ ಮೇಲೆ ದೇಶದ ಅಭಿವೃದ್ಧಿ ಅವಲಂಬಿಸಿದ್ದು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಅಗತ್ಯ ಅನುದಾನ ಒದಗಿಸುತ್ತೇನೆ ಹಾಗೂ ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ತಾಲೂಕಿನ ದೇವಲಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.ತಾಲೂಕಿನಲ್ಲಿರುವ ಸರ್ಕಾರಿ ಶಾಲೆ, ಕಾಲೇಜು ಸೇರಿದಂತೆ ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಅಗತ್ಯ ಅನುದಾನ ಸರ್ಕಾರದಿಂದ ನಿರಂತರವಾಗಿ ತರುತ್ತಿದ್ದೇನೆ. ಪ್ರಮುಖವಾಗಿ ಶಾಲಾ ಕಾಲೇಜು ಕೊಠಡಿಗಳಿಗೆ ಹೊಸ ವಿನ್ಯಾಸ ನೀಡುವ ಉದ್ದೇಶದಿಂದ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರದ ಅನುದಾನದ ಜೊತೆಗೆ ಸಿಎಸ್ಆರ್ ಅನುದಾನವನ್ನ ಸಹ ಸದ್ಬಳಕೆ ಮಾಡಿಕೊಳ್ಳುತ್ತಿದ್ದೇವೆ. ನಬಾರ್ಡ್ ಯೋಜನೆಯಡಿ ದೇವಲಾಪುರ ಕಾಲೇಜು ಆವರಣದಲ್ಲಿ 1.68 ಕೋಟಿ ರು. ವೆಚ್ಚದಲ್ಲಿ ಸುಸಜ್ಜಿತ ಕೊಠಡಿಗಳ ನಿರ್ಮಾಣ ಮಾಡುತ್ತಿದ್ದೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅನುಗೊಂಡನಹಳ್ಳಿ ಹೋಬಳಿಯ ಕಣೇಕಲ್ ಹಾಗೂ ದೊಡ್ಡ ದೊಡ್ಡದುನ್ನಸಂದ್ರ ಗ್ರಾಮಗಳಲ್ಲಿ ಸುಮಾರು 75 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.