ಕನ್ನಡಪ್ರಭ ವಾರ್ತೆ, ತುಮಕೂರುಜಿಲ್ಲೆಯ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಪ್ರವರ್ಗ “ಎ” ಮತ್ತು “ಬಿ” ದೇವಾಲಯಗಳ ಹುಂಡಿಗಳ ಭದ್ರತೆ, ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸಿಸಿಟಿವಿ ಕಣ್ಗಾವಲು ವ್ಯವಸ್ಥೆ, ಅಗ್ನಿ ಸುರಕ್ಷತೆ ಹಾಗೂ ತುರ್ತು ಪರಿಸ್ಥಿತಿ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಿಯಮಾನುಸಾರ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹುಂಡಿಗಳ ಭದ್ರತೆ ಕುರಿತು ಹೊರಡಿಸಿರುವ ಸುತ್ತೋಲೆಗಳನ್ವಯ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜರುಗಿದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ದೇವಾಲಯಗಳ ವಿವಿಧ ಸೂಕ್ತ ಜಾಗಗಳನ್ನು ಗುರುತಿಸಿ, ಎಲ್ಲರಿಗೂ ಕಾಣುವಂತೆ ಹುಂಡಿಗಳನ್ನು ಅಳವಡಿಸಿ, ಸೂಕ್ತ ಭದ್ರತೆ ಒದಗಿಸಬೇಕು. ದೇವಾಲಯದಲ್ಲಿ ಅಳವಡಿಸುವ ಹುಂಡಿಗಳು ನಾಲ್ಕು ದಿಕ್ಕಿನಿಂದ ಕಾಣುವಂತೆ ಅಗತ್ಯವಾದ ಸಿ.ಸಿ.ಟಿವಿ, ವೆಬ್ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.ಭದ್ರತಾ ಹಿತದೃಷ್ಟಿಯಿಂದ ದೇವಾಲಯಗಳಲ್ಲಿ ಅಳವಡಿಸಿರುವ ಸಿ.ಸಿ.ಟಿವಿ ವೆಬ್ ಕ್ಯಾಮರಾಗಳ ಸಂಪರ್ಕವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಪೋಲೀಸ್ ಅಧೀಕ್ಷಕರು ಮತ್ತು ಪೋಲೀಸ್ ಠಾಣೆ ರವರ ಕಚೇರಿಗಳಿಗೆ ಸಂಪರ್ಕ ಕಲ್ಪಿಸಿ, ಅವುಗಳ ವೀಕ್ಷಣೆಗಾಗಿ ಸಂಚಾರ ನಿಯಂತ್ರಣ ಕೊಠಡಿಯಲ್ಲಿರುವಂತೆ ಡ್ಯಾಶ್ ಬೋರ್ಡ್ ಗಳ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು. ದೇವಾಲಯಗಳಲ್ಲಿ ಪಾರದರ್ಶಕತೆ, ಬಳಕೆಯ ಸುಲಭತೆ ಮತ್ತು ಸುಧಾರಿತ ಹಣಕಾಸು ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ದೇವಾಲಯದ ಲೆಕ್ಕಪತ್ರ ವ್ಯವಸ್ಥೆಯೊಂದಿಗೆ ಸಂಯೋಜಿಸಬೇಕು ಎಂದರು.