ಸಂಡೂರು: ಸಚಿವ ಬಿ. ನಾಗೇಂದ್ರ ಅವರು ಸ್ಥಳೀಯ ಶಾಸಕರಾದ ಅನ್ನಪೂರ್ಣಾ ಈ. ತುಕಾರಾಂ ಹಾಗೂ ಜಿಲ್ಲಾಧಿಕಾರಿಗಳ ತಂಡದೊಂದಿಗೆ ಶುಕ್ರವಾರ ತಾಲೂಕಿನ ವಿಠಲಾಪುರ ಗ್ರಾಮಕ್ಕೆ ಭೇಟಿ ನೀಡಿ ಬರ ಅಧ್ಯಯನ ನಡೆಸಿದರು
ಬಳ್ಳಾರಿಗೆ ಹೋಲಿಸಿದರೆ ಸಂಡೂರು ತಾಲೂಕಿನಲ್ಲಿ ಮಳೆಯಾಶ್ರಿತ ಸಣ್ಣ ಮತ್ತು ಅತಿಸಣ್ಣ ರೈತರೇ ಹೆಚ್ಚಾಗಿದ್ದು, ಬರ ಪರಿಸ್ಥಿತಿ ತೀವ್ರವಾಗಿದೆ. ಸಣ್ಣ ಹಿಡುವಳಿದಾರರಿಗೆ ಕೃಷಿ ನಷ್ಟದಿಂದ ಬದುಕು ಸಾಗಿಸುವುದು ಕಷ್ಟವಾಗಿದೆ. ಈ ಕುರಿತು ಶೀಘ್ರವೇ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲಾಗುವುದು ಹಾಗೂ ಮುಂಬರುವ ಸಭೆಯಲ್ಲಿ ಪರಿಹಾರ ಘೋಷಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾಲಿನ್ಯ ತಡೆಗೆ ಕ್ರಮ:ತಾಲೂಕಿನ ವ್ಯಾಪ್ತಿಯ ಕೈಗಾರಿಕೆಗಳಿಂದ ಧೂಳು ಹೆಚ್ಚಾಗುತ್ತಿದ್ದು, ಕೆರೆಗಳಿಗೆ ಕಲುಷಿತ ನೀರು ಬಿಡಲಾಗುತ್ತಿದೆ. ಇದರಿಂದ ಮೀನುಗಳು ಸಾಯುತ್ತಿದ್ದು, ನೀರು ಕುಡಿದ ಜನರಿಗೆ ಮೂಳೆ ಸಂಬಂಧಿತ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದ ದೂರುಗಳು ಕೇಳಿ ಬರುತ್ತಿವೆ. ಹೀಗಾಗಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳನ್ನು ಕರೆಯಿಸಿ, ಶೀಘ್ರವೆ ಸಭೆ ನಡೆಸಲಾಗುವುದು. ಕೈಗಾರಿಕೆಗಳು ವೈಜ್ಞಾನಿಕವಾಗಿ ಫಿಲ್ಟರ್ಗಳನ್ನ ಅಳವಡಿಸಿ, ಮಾಲಿನ್ಯ ನಿಯಂತ್ರಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.ಕುರೆಕುಪ್ಪ ಮತ್ತು ದರೋಜಿ ಭಾಗಗಳಲ್ಲಿ ಹರಿಯುವ ತ್ಯಾಜ್ಯ ನೀರು ಕೆರೆ ಕೊಳ್ಳಗಳಿಗೆ ಸೇರಿ ನೀರು ಕಲುಷಿತಗೊಳ್ಳುತ್ತಿರುವುದರ ಕುರಿತು ಶಾಸಕರು ಹಾಗೂ ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಮಾಲಿನ್ಯದಿಂದ ಬೆಳೆ ನಷ್ಟವಾಗುತ್ತಿದೆ. ನೀರು ಕಲುಷಿತವಾಗುವುದನ್ನು ತಡೆಯಲು ಎಸ್ಟಿಪಿ ಘಟಕವನ್ನು ಸ್ಥಾಪಿಸಲಾಗುವುದು. ಇದರಿಂದ ಅರ್ಧದಷ್ಟು ಮಾಲಿನ್ಯದ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.
ಶಾಸಕಿ ಅನ್ನಪೂರ್ಣ ಈ. ತುಕಾರಾಂ ಮಾತನಾಡಿ, ಈ ಬಾರಿ ತಾಲೂಕಿನಲ್ಲಿ ತೀವ್ರ ಮಳೆ ಅಭಾವ ಎದುರಾಗಿದ್ದು, ರೈತರು ಮತ್ತು ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಲೂಕಿನಲ್ಲಿ ಈ ಬಾರಿ ಶೇ. 67ರಷ್ಟು ಮಳೆ ಕೊರತೆಯಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಮುಂಗಾರು ಮಳೆ ತಡವಾಗಿ ಬಂದಿದ್ದರಿಂದ ಬಿತ್ತನೆ ಮಾಡಿದ ಬೆಳೆಗಳು ಸಂಪೂರ್ಣವಾಗಿ ಕೈಗೆ ಸಿಗದಂತಾಗಿವೆ. ಕೇವಲ ರೈತರಷ್ಟೆ ಅಲ್ಲದೆ, ದನ ಕರುಗಳಿಗೂ ಕುಡಿಯುವ ನೀರು ಹಾಗೂ ಮೇವಿನ ಕೊರತೆ ಎದುರಾಗಿದೆ. ತಾಲೂಕಿನ ನೈಜ ಪರಿಸ್ಥಿತಿಯ ಕುರಿತು ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸಿ, ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಪರಿಹಾರ ಘೋಷಿಸಬೇಕು ಎಂದು ಸಚಿವರಿಗೆ ಮನವಿ ಮಾಡಿದರು.
ತಾಲೂಕಿನ ವಿಠಲಾಪುರ, ಗಂಗಲಾಪುರ ಸೇರಿದಂತೆ 21 ಗ್ರಾಮಗಳ ವ್ಯಾಪ್ತಿಯಲ್ಲಿ ಸುಮಾರು 9000 ಜಾನುವಾರುಗಳಿವೆ. ತಾಲೂಕು ಮಟ್ಟದಲ್ಲಿ 44292 ಜಾನುವಾರುಗಳಿವೆ. ಪ್ರಸ್ತುತ ಲಭ್ಯವಿರುವ ಒಣ ಮೇವಿನ ದಾಸ್ತಾನು ಮುಂದಿನ ಒಂದು ತಿಂಗಳ ಕಾಲ ನಿರ್ವಹಣೆಗೆ ಸಾಕಾಗುತ್ತದೆ. ಮೇವಿನ ಅಭಾವವಿರುವ ವಿಠಲಾಪುರ ಹಾಗೂ ಮೆಟ್ರಿಕಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಮೇವಿನ ಬ್ಯಾಂಕ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಪಶು ಸಂಗೋಪನಾ ಇಲಾಖಾಧಿಕಾರಿಗಳು ಸಚಿವರ ಗಮನಕ್ಕೆ ತಂದರು.
ಸಿಂಧಿಗೇರಿ ಗ್ರಾಮದಲ್ಲಿ ಬರ ಪರಿಶೀಲನೆ
ನಾಲೆಗೆ ನೀರು ಬಂದಾಗ ಬಿಳಿ ಜೋಳ ಬಿತ್ತನೆ ಮಾಡಬೇಕು. ಆದರೆ, ಕುಡುತಿನಿ ಬಳಿಯ ಡಿ7 ಉಪಕಾಲುವೆಯಿಂದ ಹರಿಸುವ ನೀರು ಸುಮಾರು 37 ಕೀ.ಮಿ ದೂರದ ಗ್ರಾಮಕ್ಕೆ ತಲುಪುತ್ತಿಲ್ಲ. 500 ಕ್ಯೂಸೆಕ್ ಬದಲು ನಾಲೆಗೆ ಕೇವಲ 290 ಕ್ಯೂಸೆಕ್ ಮಾತ್ರ ಬಿಡುವುದರಿಂದ ಸಮಸ್ಯೆ ಉಲ್ಬಣವಾಗುತ್ತಿದೆ. 500 ಕ್ಯೂಸೆಕ್ ನೀರು ಹರಿಸಿದರೆ ಮಾತ್ರ ಸಿಂಧಿಗೇರಿ ಗ್ರಾಮದ ರೈತರಿಗೆ ನೀರು ದೊರೆಯುತ್ತದೆ. ಕಾಲುವೆಗೆ ಸಮರ್ಪಕ ನೀರು ಪೂರೈಸಬೇಕು ಮತ್ತು ಸಮರ್ಪಕ ವಿದ್ಯುತ್ ಪೂರೈಕೆಗೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ರೈತ ಲಕ್ಷ್ಮಣ ನಾಯಕ ಸಿಂದಗೇರಿ ಮತ್ತು ಗಾದಿಲಿಂಗಪ್ಪ ಸಚಿವರ ಮುಂದೆ ಅಳಲು ತೋಡಿಕೊಂಡರು. ಅಧಿಕಾರಿಗಳಿಗೆ ಸೂಚಿಸುವುದಾಗಿ ಸಚಿವರು ಭರವಸೆ ನೀಡಿದರುಜೆ.ಎನ್. ಗಣೇಶ್ ಗೈರು