ಅರ್ಹತಾ 2023 ರ ನವೆಂಬರ್ 1 ಕ್ಕೆ ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ.
(ಇಂಗ್ಲಿಷ್ ಅಕ್ಷರಗಳಿವೆ) ಕನ್ನಡಪ್ರಭ ವಾರ್ತೆ ಮಡಿಕೇರಿ ಅವಧಿ ಪೂರ್ಣಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ತಯಾರಿಸಲು ನಿರ್ದೇಶನ ನೀಡಿರುತ್ತದೆ. ಅರ್ಹತಾ 2023 ರ ನವೆಂಬರ್ 1 ಕ್ಕೆ ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ. ಭಾರತ ಚುನಾವಣಾ ಆಯೋಗದ 2023ರ ಆ. 9ರ ಪತ್ರದ ಅನ್ವಯ ಕರ್ನಾಟಕ ನೈಋತ್ಯ ಪದವೀಧರರ ಮತ್ತು ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18 ಮತ್ತು ನಮುನೆ-19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಿದೆ. ನಮೂನೆ-18 ಮತ್ತು ನಮೂನೆ-19 ರ ಅರ್ಜಿಗಳನ್ನು ಸ್ವೀಕರಿಸಲು 2023 ರ ನ. 6 ಕೊನೆಯ ದಿನವಾಗಿದೆ. ಕರ್ನಾಟಕ ನೈರುತ್ಯ ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಹತೆಗಳು: ಭಾರತದ ಪ್ರಜೆಯಾಗಿರುವ ಮತ್ತು ಈ ಮತಕ್ಷೇತ್ರದ ವ್ಯಾಪಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು 2023 ರ ನವೆಂಬರ್, 01 ಕ್ಕೆ ಮೊದಲು ಆರು ವರ್ಷದ ಅವಧಿಯಲ್ಲಿ ಕನಿಷ್ಠ ಒಟ್ಟು ಮೂರು ವರ್ಷಗಳಷ್ಟು ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆಯಿಲ್ಲದ ನಿರ್ಧಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ. ಯಾವುದೇ ವ್ಯಕ್ತಿಯು ನಮೂನೆ-19 ರಲ್ಲಿ ಅರ್ಜಿ ಸಲ್ಲಿಸಿ, ಶಿಕ್ಷಕರ ಕ್ಷೇತ್ರದಲ್ಲಿ ಮತದಾರನಾಗಿ ನೋಂದಾಯಿಸಿಕೊಳ್ಳಲು ತನ್ನ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ತಾನು ಹಿಂದಿನ ಆರು ವರ್ಷಗಳಲ್ಲಿ ಒಟ್ಟು ಮೂರು ವರ್ಷಗಳು ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಕುರಿತು ಅರ್ಜಿಯೊಂದಿಗೆ ಪ್ರಮಾಣ ಪತ್ರವನ್ನು ಲಗತ್ತಿಸಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ದಿನಾಂಕದಂದು ಯಾವುದೇ ವ್ಯಕ್ತಿಯು ಬೋಧನಾ ವೃತ್ತಿಯಲ್ಲಿ ನಿರತನಾಗಿರದಿದ್ದಲ್ಲಿ, ಪ್ರಮಾಣಪತ್ರವನ್ನು ಅಂತಹ ವ್ಯಕ್ತಿಯು ಕೊನೆಯದಾಗಿ ಸೇವೆ ಸಲ್ಲಿಸಿದ ಸಂಸ್ಥೆಯ ಮುಖ್ಯಸ್ಥರಿಂದ ಸಹಿ ಮಾಡಿರಬೇಕು. ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾಗಿ ಸಲ್ಲಿಸಿದ್ದ ಅರ್ಜಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸಲಾಗುವುದಿಲ್ಲ. ಆದರೆ, ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯ ಎಲ್ಲ ಅರ್ಜಿಗಳನ್ನು ಒಟ್ಟಾಗಿ ಕಳುಹಿಸಬಹುದು. ಒಂದೇ ಕುಟುಂಬದ ಇತರೆ ಸದಸ್ಯರ ನಮೂನೆ-19ರ ಅರ್ಜಿಗಳನ್ನು ಕುಟುಂಬದ ಒಬ್ಬ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸಬೇಕು. ದಿನಾಂಕ 1-11-2020 ಕ್ಕಿಂತಲೂ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗಧಿಪಡಿಸಿದ ನಮೂನೆ-18 ರಲ್ಲಿ (ಭಾವಚಿತ್ರದೊಂದಿಗೆ) ಭರ್ತಿ ಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಬಗ್ಗೆ ಪದವಿ ಪ್ರಮಾಣ ಮತ್ತು ಅಥವಾ ಅಂಕಪಟ್ಟಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂ ಧೃಡೀಕರಿಸಿ, ಅಲ್ಲದೇ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ www.ceokarnataka.kar.nic.in ವೆಬ್ಸೈಟ್ನಲ್ಲಿಯೂ ಸಹ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.