ಲಕ್ಷ್ಮೇಶ್ವರ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳು ಹೆಚ್ಚು ಜಾಗೃತೆ ವಹಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಲಕ್ಷ್ಮೇಶ್ವರ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿವಿಧ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಲಕ್ಷ್ಮೇಶ್ವರ ಪಟ್ಟಣಕ್ಕೆ ಕಳೆದ ಒಂದು ತಿಂಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ. ಇದರಿಂದ ಜನರು ಕುಡಿಯುವ ನೀರು ಇಲ್ಲದೆ ಪರಿತಪಿಸುವಂತಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಅವರಿಗೆ ಸಾರ್ವಜನಿಕರು ಮನವಿ ಮಾಡಿದರು. ಈ ವೇಳೆ ಜಿಲ್ಲಾಧಿಕಾರಿ ಪುರಸಭೆ ಮುಖ್ಯಾಧಿಕಾರಿ ಜತೆ ಮಾತನಾಡಿ, ತುಂಗಭದ್ರಾ ನದಿಯಲ್ಲಿನ ನೀರು ಖಾಲಿ ಆಗಿರುವುದರಿಂದ ಮೇವುಂಡಿ ಹತ್ತಿರ ಪಟ್ಟಣಕ್ಕೆ ನೀರು ಸರಬರಾಜು ಮಾಡುತ್ತಿರುವ ಜಾಕ್ವೆಲ್ನಲ್ಲಿ ಅಕ್ಕಪಕ್ಕದಲ್ಲಿ ನೀರು ಇಲ್ಲವಾಗಿದ್ದರಿಂದ ಪಟ್ಟಣಕ್ಕೆ ನೀರು ಪೂರೈಸುವಲ್ಲಿ ತೊಂದರೆಯಾಗಿದೆ ಎಂದು ಹೇಳಿದ ಅವರು ಶೀಘ್ರದಲ್ಲಿ ಭದ್ರಾ ಮೇಲ್ದಂಡೆಯಿಂದ ಕುಡಿಯುವ ನೀರು ಬಿಡುಗಡೆಯಾಗಿದ್ದು, 2-3 ದಿನಗಳಲ್ಲಿ ಮೇವುಂಡಿ ಜಾಕ್ವೆಲ್ ತಲುಪುವ ನಿರೀಕ್ಷೆ ಇದೆ. ಅಲ್ಲಿಯ ವರೆಗೆ ಕೊಳವೆಬಾವಿಗಳ ಮೂಲಕ ಪಟ್ಟಣದ ಜನತಗೆ ಕುಡಿಯುವ ನೀರು ಕೊಡುವ ಕಾರ್ಯ ಮಾಡಬೇಕು. ಅಲ್ಲದೆ ಅತಿ ಅವಶ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಕಾರ್ಯ ಮಾಡಬೇಕು ಎಂದು ಹೇಳಿದರು. ಅಲ್ಲದೆ ನದಿಯ ಪಾತ್ರದಲ್ಲಿನ ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ನಿಲುಗಡೆ ಮಾಡಿ, ಕುಡಿಯುವ ನೀರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.ಕಿಸಾನ್ ಸಂಘದ ಅಧ್ಯಕ್ಷ ಟಾಕಪ್ಪ ಸಾತಪೂತೆ ಮಾತನಾಡಿ, ಬ್ಯಾಂಕ್ ಅಧಿಕಾರಿಗಳು ರೈತರ ಖಾತೆಗೆ ಜಮೆಯಾಗುತ್ತಿರುವ ಸರ್ಕಾರದ ಪರಿಹಾರದ ಹಣವನ್ನು ರೈತರಿಗೆ ನೀಡದೆ ಸತಾಯಿಸುತ್ತಿದ್ದಾರೆ. ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 6-7 ವರ್ಷಗಳಾಗಿದ್ದರೂ ತಾಲೂಕಿನ ಪ್ರಮುಖ ಕಚೇರಿಗಳು ಇನ್ನೂ ಆರಂಭವಾಗಿಲ್ಲ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಶೀಘ್ರದಲ್ಲಿ ಎಲ್ಲ ಕಚೇರಿಗಳನ್ನು ಆರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.ಆಶ್ರಯ ನಿವೇಶನ ಹಂಚಿಕೆಯಲ್ಲಿನ ನಡೆದಿರುವ ಗೋಲ್ಮಾಲ್ ಸರಿಪಡಿಸಿ ಅರ್ಹರಿಗೆ ನಿವೇಶನ ಲಭಿಸುವಂತೆ ಮಾಡಬೇಕು ಎಂದು ವಿವಿಧ ಸಂಘಟನೆಯ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ಸೋಮೇಶ್ವರ ನೂಲಿನ ಗಿರಿಣಿಯ ಬಂದ್ ಆಗಿದ್ದು, ರೈತರಿಂದ ಕಡಿಮೆ ಬೆಲೆಯಲ್ಲಿ ಫಲವತ್ತಾದ ಜಮೀನನ್ನು ಖರೀದಿಸಲಾಗಿದೆ. ಅದನ್ನು ಅನ್ಯಕಾರ್ಯಗಳಿಗೆ ಬಳಸಲಾಗುತ್ತಿದೆ. ಆದ್ದರಿಂದ ನಮ್ಮ ಜಮೀನು ನಮಗೆ ಮರಳಿಸಬೇಕು ಎಂದು ಉಮಚಗಿ ಕುಟುಂಬದ ಸದಸ್ಯರು ಹಾಗೂ ವಿವಿಧ ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ವೃದ್ಧಾಪ್ಯ ವೇತನ, ಪಡಿತರ ಚೀಟಿ, ವಿದ್ಯುತ್ ಸಮಸ್ಯೆ, ಸಾರಿಗೆ ವ್ಯವಸ್ಥೆ, ಕಿತ್ತು ಹೋಗಿರುವ ರಸ್ತೆಗಳ ಕುರಿತು ದೂರು ಸಲ್ಲಿಕೆಯಾಗಿದೆ. ಗೃಹಲಕ್ಷ್ಮೀ ಯೋಜನೆಯಲ್ಲಿ ಆಗಿರುವ ಲೋಪ ಸರಿಪಡಿಸಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಿಸಬೇಕು. ಒಳಚರಂಡಿ ಯೋಜನೆಯಲ್ಲಿನ ಆಗಿರುವ ಲೋಪದೋಷ ಸರಿಪಡಿಸುವುದು, ಕೈಮಗ್ಗ ನೇಕಾರರಿಗೆ ಆಗುತ್ತಿರುವ ತೊಂದರೆ ತಪ್ಪಿಸಿ ನೇಕಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಶಿಗ್ಲಿಯ ನೇಕಾರರು ಮನವಿ ಸಲ್ಲಿಸಿದರು.ಜನತಾ ದರ್ಶನದಲ್ಲಿ ಒಟ್ಟು 78 ಅರ್ಜಿಗಳು ಬಂದಿದ್ದು, ಅದರಲ್ಲಿ ಕೆಲವು ಸ್ಥಳೀಯ ಮಟ್ಟದಲ್ಲಿ ಪರಿಹಾರ ಕಂಡರೆ ಕೆಲವು ಸರ್ಕಾರದ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತೆಗೆದುಕೊಳ್ಳುವ ತೀರ್ಮಾನದಿಂದ ಬಗೆಹರಿಯುತ್ತವೆ. ಸರ್ಕಾರಕ್ಕೆ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಅರ್ಜಿ ವಿಲೇವಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ತಹಸೀಲ್ದಾರ ವಾಸುದೇವ ಸ್ವಾಮಿ, ತಾಪಂ ಇಒ ಕೃಷ್ಣಪ್ಪ ಧರ್ಮರ, ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ಗ್ರೇಡ್ -2 ತಹಸೀಲ್ದಾರ್ ಮಂಜುನಾಥ ಅಮಾಸಿ ಇದ್ದರು. ಅಲ್ಲದೆ ತಾಲೂಕಿನ 28 ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.