- ಚನ್ನಗಿರಿಯಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಚಾಲನೆ
ಕನ್ನಡಪ್ರಭ ವಾರ್ತೆ ಚನ್ನಗಿರಿ
ಚನ್ನಗಿರಿ ಕ್ರೀಡೆಗಳು ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ತಾಲೂಕಾಗಿದೆ. ತಾಲೂಕಿನಲ್ಲಿ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ತಾಲೂಕು, ಜಿಲ್ಲೆಗೆ ಹೆಸರು ತಂದಿದ್ದಾರೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.ಭಾನುವಾರ ಸಂಜೆ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕೆರೆ ಏರಿ ಶ್ರೀ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ ಅಂಗವಾಗಿ ದಾವಣಗೆರೆ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ಹಾಗೂ ಚಿರಂಜೀವಿ ಕ್ರೀಡಾ ಸಂಸ್ಥೆ ಆಶ್ರಯದ ರಾಜ್ಯಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.
ಶಾಸಕನಾಗಿದ್ದ ಸಂದರ್ಭ ಈ ಕ್ರೀಡಾಂಗಣವನ್ನು ನಿರ್ಮಿಸಿಕೊಟ್ಟಿದ್ದೆ. ಅನಂತರ ₹3.5 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸಿ ಉದ್ಘಾಟನೆ ಮಾಡಿದ್ದೆ. ಆದರೆ ಆ ಒಳಾಂಗಣ ಕ್ರೀಡಾಂಗಣ ಸೂಕ್ತವಾಗಿ ಬಳಕೆ ಮಾಡಿಕೊಳ್ಳದೇ ಇರುವುದು ವಿಷಾದನೀಯ ಸಂಗತಿ ಎಂದರು.ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದ್ದು ತೀರ್ಪುಗಾರರು ನ್ಯಾಯ ಸಮ್ಮತವಾದ ತೀರ್ಪುನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಸಮಾರಂಭದ ದಿವ್ಯ ಸಾಧ್ಯಧ್ಯ ವಹಿಸಿದ್ದ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ಮಾತನಾಡಿ, ಕ್ರೀಡೆಗಳಿಗೆ ಮನಸ್ಸು ಮತ್ತು ದೇಹ ಸದೃಡಗೊಳಿಸುವ ಶಕ್ತಿ ಇದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಬೇಕಾಗಿದೆ. ಸೋಲು-ಗೆಲುವು ಸಹಜವಾಗಿದೆ. ಗೆದ್ದೆ ಎಂದು ಬೀಗದೆ, ಸೋತೆ ಎಂದು ಕುಗ್ಗದೇ ಪ್ರಾಮಾಣಿಕವಾಗಿ ಕ್ರೀಡಾಪ್ರೌಢಿಮೆ ಪ್ರದರ್ಶನ ಮಾಡಿದರೆ ಯಶಸ್ಸು ಲಭಿಸಲಿದೆ ಎಂದರು.ಕೆರೆ ಏರಿ ಶ್ರೀ ಚೌಡೇಶ್ವರಿ ದೇವಾಲಯ ಅಭಿವೃದ್ದಿ ಸಮಿತಿಯ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್, ಕೆಪಿಸಿಸಿ ವಕ್ತಾರ ಹೊದಿಗೆರೆ ರಮೇಶ್ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಂಘದ ಮನೋಹರ್, ಭಾಷಾ, ದಾವಣಗೆರೆ ಅಮೆಚೂರ್ ಕಬಡ್ಡಿ ಸಂಸ್ಥೆ ಅಧ್ಯಕ್ಷ ಪಳನಿಸ್ವಾಮಿ, ಜಗದೀಶ್, ರಾಮಣ್ಣ, ಟಿ.ರಾಜು, ಮಹಾಂತೇಶ್, ಸ್ವಾಮಿ ಸೇರಿದಂತೆ ಸಾರ್ವಜನಿಕರು, ಕ್ರೀಡಾಪಟುಗಳು ಹಾಜರಿದ್ದರು.
- - --15ಕೆಸಿಎನ್ಜಿ2, 3.:
ರಾಜ್ಯಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಉದ್ಘಾಟಿಸಿದರು.