ಗುಡ್ಡಗಾಡು ಜನರಿಗೆ ನೇತ್ರರಥ ಅನುಕೂಲ: ಶಾಂತಾರಾಮ ಸಿದ್ದಿ

KannadaprabhaNewsNetwork |  
Published : Nov 25, 2025, 02:45 AM IST
24ಎಸ್.ಆರ್‌.ಎಸ್‌8ಪೊಟೋ1 (ವಿನೂತನವಾಗಿ ಆರಂಭಿಸಲಾದ ಸಂಚಾರಿ ಕಣ್ಣಿನ ಆಸ್ಪತ್ರೆಗೆ ವಿಧಾನಪರಿಷತ್‌ ಸದಸ್ಯ ಶಾಂತಾರಾಮ ಸಿದ್ದಿ ಚಾಲನೆ ನೀಡಿದರು.)24ಎಸ್.ಆರ್.ಎಸ್‌8ಪೊಟೋ2 (ಸಭಾ ಕಾರ್ಯಕ್ರಮವನ್ನು ವಿಧಾನಪರಿಷತ್‌ ಸದಸ್ಯ ಶಾಂತಾರಾಮ ಸಿದ್ದಿ ಉದ್ಘಾಟಿಸಿದರು.)24ಎಸ್.ಆರ್.ಎಸ್‌8ಪೊಟೋ3 ( ಶಾಂತಾರಾಮ ಸಿದ್ದಿ ಅವರ ನೇತ್ರ ತಪಾಸಣೆ ನಡೆಸಲಾಯಿತು.) | Kannada Prabha

ಸಾರಾಂಶ

ನೇತ್ರರಥ ಕಣ್ಣಿನ ಆಸ್ಪತ್ರೆಯು ಗುಡ್ಡಗಾಡು ಜನರ ಅಂಧತ್ವ ನಿವಾರಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಸ್ಕೊಡ್‌ವೆಸ್‌ನಿಂದ ಉತ್ತರ ಕನ್ನಡ ಜಿಲ್ಲೆಯ ಪ್ರಥಮ ಸಂಚಾರಿ ಕಣ್ಣಿನ ಆಸ್ಪತ್ರೆಗೆ ಚಾಲನೆ

ಕನ್ನಡಪ್ರಭ ವಾರ್ತೆ ಶಿರಸಿ

ನೇತ್ರರಥ ಕಣ್ಣಿನ ಆಸ್ಪತ್ರೆಯು ಗುಡ್ಡಗಾಡು ಜನರ ಅಂಧತ್ವ ನಿವಾರಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಹೇಳಿದರು. ತಾಲೂಕಿನ ಹುಲೇಕಲ್‌ ಗ್ರಾಪಂ ಆವಾರದಲ್ಲಿ ಸೋಮವಾರ ಗುಜರಾತಿನ ದೇಸಾಯಿ ಫೌಂಡೇಶನ್ ಟ್ರಸ್ಟ್, ಬೆಂಗಳೂರಿನ ಆಧ್ಯನ್ ಚಾರಿಟೇಬಲ್ ಟ್ರಸ್ಟ್ ಮತ್ತು ಸ್ಕೊಡ್‌ವೆಸ್ ಸಂಸ್ಥೆಯ ಸಹಯೋಗದಲ್ಲಿ ವಿನೂತನವಾಗಿ ಆರಂಭಿಸಲಾದ ಸಂಚಾರಿ ಕಣ್ಣಿನ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದರು.ಉತ್ತರ ಕನ್ನಡ ಜಿಲ್ಲೆಯಂತಹ ದಟ್ಟ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶದ ಜನರು ದೃಷ್ಟಿ ಸಂಬಂಧಿತ ಸಮಸ್ಯೆಗಾಗಿ ಸಾವಿರಾರು ರೂಪಾಯಿ ಖರ್ಚು ಮಾಡಿ 30-40 ಕಿಮೀ ಕ್ರಮಿಸಬೇಕಾದ ಅನಿವಾರ್ಯತೆ ಇದೆ. ಇಂತಹ ಸಂದರ್ಭದಲ್ಲಿ ಹಲವಾರು ಜನರು ಸಮಸ್ಯೆ ಉಲ್ಬಣವಾಗುವವರೆಗೂ ಆಸ್ಪತ್ರೆಗಳಿಗೆ ತೆರಳದೇ ಕೊನೆಯ ಹಂತದಲ್ಲಿ ಚಿಕಿತ್ಸೆಗಾಗಿ ತೆರಳುವುದರಿಂದ ಹಲವಾರು ರೀತಿಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇಂತಹ ಸಮಸ್ಯೆಗಳಿಗೆ ಗ್ರಾಪಂ ವ್ಯಾಪ್ತಿಗೆ ತೆರಳಿ ಉತ್ತಮವಾಗಿ ಸೇವೆ ನೀಡುವುದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಅತ್ಯಂತ ಉಪಯುಕ್ತವಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಹುಲೇಕಲ್ ಗ್ರಾಪಂ ಅಧ್ಯಕ್ಷ ಖಾಸೀಂ ಸಾಬ್ ಮಾತನಾಡಿ, ಸ್ಕೊಡ್‌ವೆಸ್ ಸಂಸ್ಥೆ ಯಾವತ್ತೂ ವಿನೂತನವಾದಂತಹ ಕಾರ್ಯಕ್ರಮ ರೂಪಿಸುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸುತ್ತಿರುವುದು ಅಭಿನಂದನಾರ್ಹ ಎಂದರು. ನಗರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕಣ್ಣಿನ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ಕಣ್ಣಿನ ಸಮಸ್ಯೆಗೆ ಚಿಕಿತ್ಸೆ ನೀಡಿ ಅವರ ಜೀವನದಲ್ಲಿ ಬೆಳಕು ಕಾಣುವಂತೆ ಮಾಡುತ್ತಿರುವುದು ಪುಣ್ಯದ ಕೆಲಸ ಎಂದರು. ದೇಸಾಯಿ ಫೌಂಡೇಶನ್‌ನ ಅಭಿವೃದ್ಧಿ ವಿಭಾಗದ ನಿರ್ದೇಶಕ ಮನೋಜ ಪಂಡಾ, ಆಧ್ಯನ್ ಫೌಂಡೇಶ್‌ನ್‌ನ ಮುಖ್ಯಸ್ಥೆ ಅಂಜನಾ ಕಾವೂರು, ಬೆಂಗಳೂರಿನ ನಯನ ಜ್ಯೋತಿ ಟ್ರಸ್ಟ್‌ನ ಸಂಸ್ಥಾಪಕ ಜಯರಾಮನ್‌ ಮಾತನಾಡಿದರು.

ಸ್ಕೊಡ್‌ವೆಸ್ ಸಂಸ್ಥೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಕುಮಾರ ಕೂರ್ಸೆ, ಸಹಕಾರ್ಯದರ್ಶಿ ಪ್ರೊ. ಕೆ.ಎನ್. ಹೊಸಮನಿ, ಕಾರ್ಯಕಾರಿ ಸದಸ್ಯರಾದ ದಯಾನಂದ ಅಗಾಸೆ, ಪ್ರತಿಭಾ ಭಟ್ಟ, ಹುಲೇಕಲ್ ಗ್ರಾಪಂ ಅಭಿವೃದ್ಧಿ ಅಧಿಕಾರಿ ಯೋಗಿತಾ ಹೆಗಡೆ ಹಾಗೂ ಸದಸ್ಯರಿದ್ದರು.

ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಂಸ್ಥೆಯ ಕಾರ್ಯದರ್ಶಿ ಸರಸ್ವತಿ ಎನ್. ರವಿ ವಂದಿಸಿದರು. ಕಾರ್ಯಕ್ರಮ ಅಧಿಕಾರಿ ಡಾ. ನಾರಾಯಣ ಹೆಗಡೆ ನಿರೂಪಿಸಿದರು. ಸ್ಕೊಡ್‌ವೆಸ್ ಸಂಸ್ಥೆಯ ಸಿಬ್ಬಂದಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಏರ್ಪಡಿಸಿ ಯಶಸ್ವಿಗೊಳಿಸಿದರು. ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚಿನ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಿ, ಹಿಮೋಗ್ಲೋಬಿನ್ ಪರೀಕ್ಷೆಯನ್ನೂ ನಡೆಸಲಾಯಿತು. ನೇತ್ರರಥದ ವಿಶೇಷತೆಗಳು:ಉತ್ತರ ಕನ್ನಡ ಜಿಲ್ಲೆಯ ಪ್ರಥಮ ಸಂಚಾರಿ ಕಣ್ಣಿನ ಆಸ್ಪತ್ರೆ

ಸೌರಶಕ್ತಿ ಬೆಂಬಲಿತ ಸೇವೆಗಳು ಅತ್ಯಾಧುನಿಕ ಯಂತ್ರೋಪಕರಣಗಳಿಂದ ಕೂಡಿದ ಹವಾ ನಿಯಂತ್ರಿತ ವಾಹನ ಕಣ್ಣಿನ ತಪಾಸಣೆ ನಡೆಸಿ, ಉಚಿತ ಕನ್ನಡಕ ಹಾಗೂ ಔಷಧಗಳ ವಿತರಣೆ ನುರಿತ ತಜ್ಞರಿಂದ ಚಿಕಿತ್ಸೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯನಗುಡಿಯಲ್ಲಿ ಹನುಮಂತೋತ್ಸವ ಸಂಪನ್ನ
ವಂದೇ ಮಾತರಂ ಗೀತೆಯಲ್ಲಿ ರಾಷ್ಟ್ರಭಕ್ತಿ ಚಿಂತನೆ