ನೇತ್ರಾವತಿ ಕಲುಷಿತ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬೃಹತ್‌ ಹೋರಾಟ ನಿರ್ಧಾರ

KannadaprabhaNewsNetwork | Published : Apr 19, 2025 12:47 AM

ಸಾರಾಂಶ

ಬಂಟ್ವಾಳ ಮತ್ತು ಮಂಗಳೂರಿಗೆ ಕುಡಿಯುವ ನೀರಿನ ಸರಬರಾಜು ಮಾಡುವ ನೇತ್ರಾವತಿ ನದಿ ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ವತಿಯಿಂದ ಮೇ ಕೊನೆಯ ವಾರದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಬಂಟ್ವಾಳ ಮತ್ತು ಮಂಗಳೂರಿಗೆ ಕುಡಿಯುವ ನೀರಿನ ಸರಬರಾಜು ಮಾಡುವ ನೇತ್ರಾವತಿ ನದಿ ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ವತಿಯಿಂದ ಮೇ ಕೊನೆಯ ವಾರದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸ್ಥಾಪಕಾಧ್ಯಕ್ಷ ತೋನ್ಸೆ ಜಯಕೃಷ್ಣ ಶೆಟ್ಟಿ, ನಿಯೋಗವು ಸದ್ಯದಲ್ಲಿಯೇ ರಾಜ್ಯದ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ, ಸಮಸ್ಯೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಅವಳಿ ಜಿಲ್ಲೆಯ ನದಿಗಳ ರಕ್ಷಣೆಗೆ ಯೋಜನೆ ರೂಪಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದೆ ಇಡಲಿದ್ದೇವೆ ಎಂದರು.

ನೇತ್ರಾವತಿ ನದಿ ಕಲುಷಿತವಾಗದಂತೆ ಮಾಡಲು ಸರ್ಕಾರಕ್ಕೆ ಒತ್ತಡ ಹೇರಲು ಸದ್ಯದಲ್ಲೇ ಸಾಂಕೇತಿಕ ಪ್ರತಿಭಟನೆ ಮಾಡಲಿದೆ. ಅಲ್ಲದೆ ಅವಳಿ ಜಿಲ್ಲೆಗಳ ಸಮುದ್ರ ತೀರ ಸ್ವಚ್ಛತೆಯ ಬಗ್ಗೆಯೂ ಸರ್ಕಾರದ ಗಮನ ಸೆಳೆಯಲಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ನಿತ್ಯಾನಂದ ಕೋಟ್ಯಾನ್, ಉಪಾಧ್ಯಕ್ಷರಾದ ಕೆ. ಪಿ. ಜಗದೀಶ್ ಅಧಿಕಾರಿ, ಅರುಣ್ ಪ್ರಕಾಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸುರೇಂದ್ರ ಮೆಂಡನ್ ಇದ್ದರು.

....................

ವಿದ್ಯುತ್ ಪೂರೈಕೆಗ ಸ್ಪಂದನೆ

ಉಡುಪಿ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಅದಾನಿ ಕಂಪನಿಯ ಉಷ್ಣ ವಿದ್ಯುತ್‌ ಸ್ಥಾವರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನಪೂರ್ತಿ ‍ವಿದ್ಯುತ್ ಪೂರೈಕೆ ಮಾಡಬೇಕು ಎಂಬ ಸಮಿತಿಯ ಹೋರಾಟಕ್ಕೆ ರಾಜ್ಯ ಸರ್ಕಾರದಿಂದ ಸಕರಾತ್ಮಕ ಪ್ರತಿಕ್ರಿಯೆ ಲಭಿಸಿದೆ.

ಪಡುಬಿದ್ರಿಯಲ್ಲಿ 2010ರಿಂದ ಕಾರ್ಯಾಚರಿಸುತ್ತಿರುವ ಈ ಉಷ್ಣ ವಿದ್ಯುತ್ ಸ್ಥಾವರವು ಪ್ರಸ್ತುತ 1300 ಮೆಗಾ ವ್ಯಾಟ್‌ ವಿದ್ಯುತ್ ಉತ್ಪಾದಿಸುತ್ತಿದೆ. ಇಲ್ಲಿಂದ ರಾಜಧಾನಿ ಬೆಂಗಳೂರಿಗೆ ಶೇ. 45ರಷ್ಟು ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ ತಮ್ಮ ವಿರೋಧ ಇಲ್ಲ, ಆದರೆ ಈ ಸ್ಥಾವರ ಅಸ್ತಿತ್ವದಲ್ಲಿರುವ ಅವಳಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಮೊದಲು ಈ ಅವಳಿ ಜಿಲ್ಲೆಗಳಿಗೆ ಮೊದಲು ಅಗತ್ಯವಿರುವ ವಿದ್ಯುತ್ ಪೂರೈಕೆ ಮಾಡಿ, ನಂತರ ಬೇರೆಡೆಗೆ ಕಳುಹಿಸಬೇಕು. ಈ ಬಗ್ಗೆ ಸ್ಪೀಕರ್ ಯು.ಟಿ ಖಾದರ್, ಡಿಸಿಎಂ ಡಿಕೆ ಶಿವಕುಮಾರ್, ಸರಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಸದಾನಂದ ಗೌಡ ಅವರನ್ನು ಭೇಟಿಯಾಗಿ ಚರ್ಚಿಸಲಾಗಿದ್ದು, ಸ್ಪೀಕರ್ ಯುಟಿ ಖಾದರ್ ಇಂಧನ ಸಚಿವರಿಗೆ ಪತ್ರ ಬರೆದಿದ್ದಾರೆ ಎಂದರು.

Share this article