ವಿದ್ಯಾರ್ಥಿಗಳಲ್ಲಿ ಕುತೂಹಲ ಬೆಳೆಸಲು ಹೊಸ ಪ್ರಯೋಗ: ಶಾಸಕ ಶ್ರೀನಿವಾಸ ಮಾನೆ

KannadaprabhaNewsNetwork |  
Published : Feb 06, 2025, 12:16 AM IST
ಫೋಟೊ: 4ಎಚ್‌ಎನ್‌ಎಲ್2 | Kannada Prabha

ಸಾರಾಂಶ

ಡಿಜಿಟಲ್ ಕಲಿಕೆಯನ್ನು ಉತ್ತೇಜಿಸಲು ತಾಲೂಕಿನ 7 ಸರ್ಕಾರಿ ಪ್ರೌಢಶಾಲೆಗಳಿಗೆ 55 ಇಂಚಿನ್ 4ಕೆ ಸ್ಮಾರ್ಟ್ ಟಿವಿ ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನು ಶಾಸಕ ಶ್ರೀನಿವಾಸ ಮಾನೆ ಉಚಿತವಾಗಿ ವಿತರಿಸಿದರು.

ಹಾನಗಲ್ಲ: ಇಲ್ಲಿನ ಪರಿವರ್ತನ ಕಲಿಕಾ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಡ್ರೀಮ್ ಸ್ಕೂಲ್ ಫೌಂಡೇಶನ್‌ನಿಂದ ಡಿಜಿಟಲ್ ಕಲಿಕೆಯನ್ನು ಉತ್ತೇಜಿಸಲು ತಾಲೂಕಿನ 7 ಸರ್ಕಾರಿ ಪ್ರೌಢಶಾಲೆಗಳಿಗೆ 55 ಇಂಚಿನ್ 4ಕೆ ಸ್ಮಾರ್ಟ್ ಟಿವಿ ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನು ಶಾಸಕ ಶ್ರೀನಿವಾಸ ಮಾನೆ ಉಚಿತವಾಗಿ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾನೆ, ವಿದ್ಯಾರ್ಥಿಗಳಲ್ಲಿ ಕುತೂಹಲ ಹೆಚ್ಚಿಸಲು, ರಚನಾತ್ಮಕತೆ ಉತ್ತೇಜಿಸಲು, ಕಲಿಯುವಿಕೆ ಪ್ರೇರೇಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ತಾಲೂಕಿನಲ್ಲಿ ಡ್ರೀಮ್ ಸ್ಕೂಲ್ ಫೌಂಡೇಶನ್ ಸಹಯೋಗದಲ್ಲಿ ನಡೆಸುತ್ತಿರುವ ಹೊಸ ಹೊಸ ಪ್ರಯೋಗಗಳು ಯಶಸ್ವಿಯಾಗುತ್ತಿದ್ದು, ಉತ್ತಮ ಫಲಿತಾಂಶ ನೀಡುತ್ತಿವೆ. ಡಿಜಿಟಲ್ ಕಲಿಕೆಯಲ್ಲಿ ಆಸಕ್ತಿ ಬೆಳೆಸಲಾಗುತ್ತಿದ್ದು, ಶಾಲೆಗಳನ್ನು ಸ್ಮಾರ್ಟ್ ಆಗಿ ಪರಿವರ್ತಿಸಲಾಗುತ್ತಿದೆ. ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ಬೇರೆ ಬೇರೆ ವಿಷಯಗಳ ಬಗ್ಗೆ ನಮ್ಮ ತಾಲೂಕಿನ ವಿದ್ಯಾರ್ಥಿಗಳಿಗೆ ಆಸಕ್ತಿ ಬೆಳೆಸಿ, ಪ್ರತಿ ಕ್ಷೇತ್ರಗಳಲ್ಲಿಯೂ ಸಾಧನೆ ತೋರುವ ನಿಟ್ಟಿನಲ್ಲಿ ಕೌಶಲ್ಯ ವೃದ್ಧಿಸಿ, ತರಬೇತಿಗೊಳಿಸುವ ಕೆಲಸ ಮಾಡಲಾಗುತ್ತಿದೆ. ಸ್ಪರ್ಧಾತ್ಮಕ ಜಗತ್ತಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಪರಿವರ್ತನ ಕಲಿಕಾ ಕೇಂದ್ರದಲ್ಲಿ ಪರಿಣಿತಿಯಿಂದ ಮಾರ್ಗದರ್ಶನ ದೊರಕಿಸಲಾಗುತ್ತಿದೆ ಎಂದು ಹೇಳಿದ ಅವರು ಒಟ್ಟಾರೆ ತಾಲೂಕಿನ ವಿದ್ಯಾರ್ಥಿಗಳು, ಯುವಕ, ಯುವತಿಯರು ಸಾಧನೆ ಮೆರೆಯಬೇಕು. ಅದಕ್ಕೆ ಪೂರಕ ವಾತಾವರಣ ಕಲ್ಪಿಸಲು ಕಾಳಜಿ ವಹಿಸಿದ್ದಾಗಿ ತಿಳಿಸಿದರು.

ಇದಕ್ಕೂ ಮೊದಲು ಏಕದಿನ ಅಂತರ್ ಶಾಲಾ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಕಲೆ ಮತ್ತು ಗಣಿತ ಪ್ರದರ್ಶನದ ಎರಡನೆ ಹಂತ ಯಶಸ್ವಿಯಾಗಿ ನಡೆಯಿತು. ತಾಲೂಕಿನ ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ತಮ್ಮ ಸೃಜನಶೀಲ ಮಾದರಿಗಳನ್ನು ಪ್ರದರ್ಶಿಸಿದರು. ಪ್ರತಿಫಲನ ಮತ್ತು ವಿಚಲನ, ಆಮ್ಲಗಳು, ಪ್ರತ್ಯಾಮ್ಲಗಳು, ಲವಣಗಳು, ಸರಣಿ, ಸಮಾಂತರ ರೆಸಿಸ್ಟರ್‌ಗಳು, ಉಸಿರಾಟದ ವ್ಯವಸ್ಥೆಯ ಮಾದರಿಗಳು ಪ್ರದರ್ಶನದಲ್ಲಿ ಗಮನ ಸೆಳೆದವು. ಪ್ರದರ್ಶನದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರವಾಗಿ ನಗದು ಬಹುಮಾನ ವಿತರಿಸಲಾಯಿತು.

ಡ್ರೀಮ್ ಸ್ಕೂಲ್ ಫೌಂಡೇಶನ್‌ನ ಆಪರೇಷನಲ್ ಮುಖ್ಯಸ್ಥ ಸಗಾಯಿ ಸೆಬಾಸ್ಟಿಯನ್, ಪ್ರೋಗ್ರಾಂ ವ್ಯವಸ್ಥಾಪಕರಾದ ರವೀಂದ್ರ, ಮನೀಷಾ, ಜಿಲ್ಲಾ ಸಂಯೋಜಕರಾದ ಮಂಗಳಾ, ಬಿಇಒ ವಿ.ವಿ. ಸಾಲಿಮಠ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಜಾಗತಿಕ ಸ್ಪರ್ಧೆ

ಹಾನಗಲ್ ತಾಲೂಕಿನಲ್ಲಿ ಕಳೆದ ಒಂದೂವರೆ ವರ್ಷದಿಂದ ಡ್ರೀಮ್ ಸ್ಕೂಲ್ ಫೌಂಡೇಶನ್ ಮತ್ತು ಪರಿವರ್ತನ ಕಲಿಕಾ ಕೇಂದ್ರದಿಂದ ಶಿಕ್ಷಣ ಉತ್ತೇಜಿಸುವ ನಾನಾ ಚಟುವಟಿಕೆ ಆಯೋಜಿಸಲಾಗುತ್ತಿದೆ. ನಗರ ಪ್ರದೇಶದಲ್ಲಿನ ಸೌಲಭ್ಯಗಳನ್ನು ಗ್ರಾಮೀಣ ಶಾಲೆಗಳಿಗೂ ಕಲ್ಪಿಸಿ ಜಾಗತಿಕ ಸ್ಪರ್ಧೆಗೆ ಸಜ್ಜುಗೊಳಿಸಲಾಗುತ್ತಿದೆ.

ಶ್ರೀನಿವಾಸ ಮಾನೆ, ಶಾಸಕ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!