)
ಕುಮಟಾ: ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹32 ಸಾವಿರ ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದು, ಇದರಿಂದ ಕರಾವಳಿ ಅಭಿವೃದ್ಧಿಯಲ್ಲಿ ಇತಿಹಾಸ ನಿರ್ಮಾಣವಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಲಾದ ಯೋಜನೆಗಳನ್ನು ಇದೇ ಅವಧಿಯಲ್ಲಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುವುದು. ತುಳು ಭಾಷೆಗೆ ಎರಡನೇ ರಾಜ್ಯ ಭಾಷೆಯ ಸ್ಥಾನಮಾನ ನೀಡಬೇಕೆಂಬ ಉಡುಪಿ-ಮಂಗಳೂರು ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸುವ ಪ್ರಯತ್ನ ಮಾಡಿದೆ. ಈ ಭಾಗದ ಜನರು ಹಲವು ಬಾರಿ ಬಿಜೆಪಿ ಶಾಸಕರನ್ನು ಆಯ್ಕೆ ಮಾಡಿದರೂ ಬೇಡಿಕೆ ಈಡೇರಲಿಲ್ಲ ಎಂದು ಪಕ್ಕದಲ್ಲಿದ್ದ ಬಿಜೆಪಿ ಶಾಸಕ ದಿನಕರ ಶೆಟ್ಟಿ ಅವರನ್ನು ತೋರಿಸಿ ಸವದಿ ಟೀಕಿಸಿದರು.
ಸಿಎಂ ಭಗವಂತನಲ್ಲ:ಅಭಿವೃದ್ಧಿ ಯೋಜನೆ ನೀಡಿದರೆ ಮತ್ತೊಂದು ಯೋಜನೆ ಏಕೆ ಆಗಿಲ್ಲ ಎಂದು ಪ್ರಶ್ನಿಸುತ್ತಾರೆ. ಎಲ್ಲ ಸಮಸ್ಯೆಗಳನ್ನು ಏಕಕಾಲದಲ್ಲಿ ಪರಿಹರಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭಗವಂತನಲ್ಲ. ನಾನೂ ಭಗವಂತನಲ್ಲ; ಎಲ್ಲ ಸಮಸ್ಯೆಗಳನ್ನು ಒಂದೇ ಬಾರಿಗೆ ಭಗವಂತನಿಗೂ ಪರಿಹರಿಸಲು ಸಾಧ್ಯವಿಲ್ಲ ಎಂದು ಸವದಿ ಹೇಳಿದರು.ಬಿಜೆಪಿ ಅವಧಿಯಲ್ಲಿ ಅಂಕೋಲಾ ವಿಮಾನ ನಿಲ್ದಾಣ ಘೋಷಣೆಯಾಗಿದ್ದರೂ ಕಾಮಗಾರಿ ಆರಂಭವಾಗಿಲ್ಲ. ಯೋಜನೆ ಘೋಷಣೆ ಎಲ್ಲರೂ ಮಾಡುತ್ತಾರೆ. ಆದರೆ, ನಾವು ಘೋಷಣೆಗಳನ್ನು ಕಾರ್ಯಗತಗೊಳಿಸುತ್ತೇವೆ. ನಮ್ಮ ಅವಧಿಯಲ್ಲೇ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ ವಿಮಾನದಲ್ಲೇ ಕರಾವಳಿಗೆ ಬರಲಿದ್ದೇವೆ ಎಂದು ಸವದಿ ಹೇಳಿದರು.