₹32 ಸಾವಿರ ಕೋಟಿ ಯೋಜನೆಯಿಂದಕರಾವಳಿ ಅಭಿವೃದ್ಧಿಗೆ ಹೊಸ ಚೈತನ್ಯ

KannadaprabhaNewsNetwork |  
Published : Sep 20, 2026, 03:15 AM IST
ಅಳ್ನಾವರದಲ್ಲಿ ಕುಂಬಾರಕೊಪ್ಪ ಗ್ರಾಮ ಜಮೀನಕ್ಕೆ ಸಂಬಂಧಿಸಿದಂತೆ ಉಂಟಾದ ಗೊಂದಲ ಬಗೆ ಹರಿಸಲು ಜರುಗಿದ ಶಾಂತಿ ಸಭೆಯಲ್ಲಿ ಎಸಿ ಪ್ರಭಾವತಿ ಮಾತನಾಡಿದರು. | Kannada Prabha

ಸಾರಾಂಶ

ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಲಾದ ಯೋಜನೆಗಳನ್ನು ಇದೇ ಅವಧಿಯಲ್ಲಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುವುದು.

ಕುಮಟಾ: ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹32 ಸಾವಿರ ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದು, ಇದರಿಂದ ಕರಾವಳಿ ಅಭಿವೃದ್ಧಿಯಲ್ಲಿ ಇತಿಹಾಸ ನಿರ್ಮಾಣವಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಕುಮಟಾದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಪ್ರದೇಶದ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ ಉದ್ದೇಶವನ್ನು ಮುಖ್ಯಮಂತ್ರಿ ಹೊಂದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಅನುದಾನ ನೀಡಲಾಗಿದ್ದು, ಜಿಲ್ಲೆಯ ಏಳು ದ್ವೀಪಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನೂ ರೂಪಿಸಲಾಗಿದೆ. ಕರಾವಳಿ ಜಿಲ್ಲೆಗಳ ಬಹುದಿನಗಳ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಲಾದ ಯೋಜನೆಗಳನ್ನು ಇದೇ ಅವಧಿಯಲ್ಲಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುವುದು. ತುಳು ಭಾಷೆಗೆ ಎರಡನೇ ರಾಜ್ಯ ಭಾಷೆಯ ಸ್ಥಾನಮಾನ ನೀಡಬೇಕೆಂಬ ಉಡುಪಿ-ಮಂಗಳೂರು ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸುವ ಪ್ರಯತ್ನ ಮಾಡಿದೆ. ಈ ಭಾಗದ ಜನರು ಹಲವು ಬಾರಿ ಬಿಜೆಪಿ ಶಾಸಕರನ್ನು ಆಯ್ಕೆ ಮಾಡಿದರೂ ಬೇಡಿಕೆ ಈಡೇರಲಿಲ್ಲ ಎಂದು ಪಕ್ಕದಲ್ಲಿದ್ದ ಬಿಜೆಪಿ ಶಾಸಕ ದಿನಕರ ಶೆಟ್ಟಿ ಅವರನ್ನು ತೋರಿಸಿ ಸವದಿ ಟೀಕಿಸಿದರು.

ಸಿಎಂ ಭಗವಂತನಲ್ಲ:ಅಭಿವೃದ್ಧಿ ಯೋಜನೆ ನೀಡಿದರೆ ಮತ್ತೊಂದು ಯೋಜನೆ ಏಕೆ ಆಗಿಲ್ಲ ಎಂದು ಪ್ರಶ್ನಿಸುತ್ತಾರೆ. ಎಲ್ಲ ಸಮಸ್ಯೆಗಳನ್ನು ಏಕಕಾಲದಲ್ಲಿ ಪರಿಹರಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭಗವಂತನಲ್ಲ. ನಾನೂ ಭಗವಂತನಲ್ಲ; ಎಲ್ಲ ಸಮಸ್ಯೆಗಳನ್ನು ಒಂದೇ ಬಾರಿಗೆ ಭಗವಂತನಿಗೂ ಪರಿಹರಿಸಲು ಸಾಧ್ಯವಿಲ್ಲ ಎಂದು ಸವದಿ ಹೇಳಿದರು.

ಬಿಜೆಪಿ ಅವಧಿಯಲ್ಲಿ ಅಂಕೋಲಾ ವಿಮಾನ ನಿಲ್ದಾಣ ಘೋಷಣೆಯಾಗಿದ್ದರೂ ಕಾಮಗಾರಿ ಆರಂಭವಾಗಿಲ್ಲ. ಯೋಜನೆ ಘೋಷಣೆ ಎಲ್ಲರೂ ಮಾಡುತ್ತಾರೆ. ಆದರೆ, ನಾವು ಘೋಷಣೆಗಳನ್ನು ಕಾರ್ಯಗತಗೊಳಿಸುತ್ತೇವೆ. ನಮ್ಮ ಅವಧಿಯಲ್ಲೇ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ ವಿಮಾನದಲ್ಲೇ ಕರಾವಳಿಗೆ ಬರಲಿದ್ದೇವೆ ಎಂದು ಸವದಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬುಡಕಟ್ಟು ಸಿದ್ದಿ ಸಮುದಾಯಕ್ಕೆ ಪೌಷ್ಟಿಕಾಹಾರ ವಿತರಿಸಿ
ರೋಗ ಬರುವ ಮುಂಚೆ ಜಾಗೃತಿ ವಹಿಸಿ: ಡಾ. ಯೋಗೇಶ್ ಮಡಗಾಂವಕರ