ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲಾ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ದೇವಸ್ಥಾನದ ಅರ್ಚಕರ ನೇಮಕ ಹಾಗೂ ಪೂಜಾ ಕಾರ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ದೇವಸ್ಥಾನದ ಆವರಣದಲ್ಲಿ ಅರ್ಚಕರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ವಂಶಪಾರಂಪರ್ಯವಾಗಿ ಸೇವೆ ಸಲ್ಲಿಸುತ್ತಿದ್ದ ೨೪ ಅರ್ಚಕರ ಪೈಕಿ ಕೆಲವರು ಮೃತಪಟ್ಟಿದ್ದು, ಉಳಿದ ಅರ್ಚಕರು ಹಾಗೂ ಮೃತರ ವಾರಸುದಾರರ ಅರ್ಹತೆ ಮತ್ತು ಕಾನೂನುಬದ್ಧ ವಾರಸುದಾರಿಕೆಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಅರ್ಹ ದಾಖಲೆಗಳನ್ನು ಸಲ್ಲಿಸಲು ಸಂಬಂಧಪಟ್ಟವರಿಗೆ ಕಾಲಾವಕಾಶ ನೀಡಲಾಗಿದೆ. ಸರ್ಕಾರದ ಆದೇಶ, ಸುತ್ತೋಲೆ ಹಾಗೂ ನಿಯಮಗಳನ್ನು ಉಲ್ಲಂಘಿಸಿ ದೇವಸ್ಥಾನದ ಪೂಜಾ ವ್ಯವಸ್ಥೆಯಲ್ಲಿ ಯಾರಾದರೂ ನಡೆದುಕೊಂಡರೆ ಅವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.ದೇವಸ್ಥಾನದ ಆವರಣದಲ್ಲಿ ಆನ್ಲೈನ್ ಸಿಸಿಟಿವಿ ವ್ಯವಸ್ಥೆ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದೇವಸ್ಥಾನದಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಲಿದ್ದು, ಅಗತ್ಯ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸ್ ಠಾಣೆಯವರು ದೃಶ್ಯಾವಳಿಗಳನ್ನು ಪರಿಶೀಲಿಸಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗುವುದು. ನಿಯಮ ಉಲ್ಲಂಘನೆ ಅಥವಾ ಅಹಿತಕರ ಚಟುವಟಿಕೆ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ. ದೇವಸ್ಥಾನದ ಆವರಣದಲ್ಲಿ ಹೈಟೆಕ್ ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಅಂದಾಜು ಸಿದ್ಧಪಡಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಅನುಮೋದನೆ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ದೇವಸ್ಥಾನದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮೇಲೂ ಗಮನ ಹರಿಸಲಾಗುವುದು ಎಂದರು.