ಕನ್ನಡಪ್ರಭ ವಾರ್ತೆ ಹುಕ್ಕೇರಿ
ಪಟ್ಟಣದ ಹಳ್ಳದಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಪತ್ತು ವಿತರಿಸಿ ಮಾತನಾಡಿದ ಅವರು, ರೈತರ ಕಲ್ಯಾಣಕ್ಕೆ ಆದ್ಯತೆ ನೀಡಲಾಗುತ್ತಿದ್ದು ಟ್ರ್ಯಾಕ್ಟರ್, ಪಂಪ್ಸೆಟ್ ಮತ್ತು ಪೈಪ್ಲೈನ್ ಅಳವಡಿಸಿಕೊಳ್ಳಲು ಬಯಸುವ ರೈತರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಿಸಲಾಗುತ್ತಿದೆ. ಸರ್ಕಾರದ ಮತ್ತು ಬ್ಯಾಂಕ್ನ ಪ್ರತಿ ಯೋಜನೆಯನ್ನು ರೈತರ ಮನೆ ಬಾಗಿಲಿಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ನ ಆರ್ಥಿಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ರಾಷ್ಟ್ರಮಟ್ಟದಲ್ಲಿ ನಂಬರ್ 1 ಬ್ಯಾಂಕ್ ಆಗಿಸುವ ಸಂಕಲ್ಪ ಹೊಂದಿದ್ದೇನೆ. ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಸಹಕಾರಿಯಾಗಲು ನೀರಾವರಿ ಮತ್ತು ಹೈನುಗಾರಿಕೆಗೆ ಸಾಲ ನೀಡಲಾಗುತ್ತಿದೆ. ಸಹಕಾರಿ ಸಂಘಗಳ ಮೂಲಕ ರೈತರ ಆರ್ಥಿಕ ಸಬಲೀಕರಣಕ್ಕೆ ನಿರಂತರವಾಗಿ ಶ್ರಮಿಸುವುದಾಗಿ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.
ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ ಮಾತನಾಡಿ, ಸಹಕಾರಿ ಸಂಸ್ಥೆಗಳು ರೈತರ ಬದುಕಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಪಿಕೆಪಿಎಸ್ ಸಂಸ್ಥೆಯ ಸಾಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕಬ್ಬು ಬೆಳೆಗೆ ರೈತರು ಹೆಚ್ಚಿನ ಒತ್ತು ನೀಡಬೇಕು ಎಂದರು.ಮಾಜಿ ಸಚಿವ ಶಶಿಕಾಂತ ನಾಯಿಕ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಚಂದು ಪಾಟೀಲ, ಹಿರಿಯ ವಕೀಲ ಭೀಮಸೇನ ಬಾಗಿ, ಮುಖಂಡರಾದ ರವಿ ಕರಾಳೆ, ಮಹಾವೀರ ಬಾಗಿ, ಚಿದಾನಂದ ಕಿಲ್ಲೇದಾರ, ಸಂಘದ ನಿರ್ದೇಶಕರಾದ ಬಸಗೌಡ ಪಾಟೀಲ, ಗಿರೀಶ ಪಾಟೀಲ, ಪಾರವ್ವ ಲಟ್ಟಿ, ಮಹಾದೇವ ಖುಬನ್ನಗೋಳ ಮತ್ತಿತರರು ಉಪಸ್ಥಿತರಿದ್ದರು. ಗಿರೀಶ ಪಾಟೀಲ ಸ್ವಾಗತಿಸಿದರು. ಶಿವಾನಂದ ಅಲಗರಾವುತ ವಂದಿಸಿದರು.