ಕನ್ನಡಪ್ರಭ ವಾರ್ತೆ ಹಲಗೂರು
ಹಲಗೂರು ಆರಕ್ಷಕ ಉಪ ನಿರೀಕ್ಷಕರು ಮತ್ತು ವಲಯ ಅರಣ್ಯಧಿಕಾರಿ ವನ್ಯಜೀವಿ ವಲಯ ಮುತ್ತತ್ತಿ ಹಾಗೂ ಭೀಮೇಶ್ವರ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆಗೆ ಬಂದು ಮೋಜುಮಸ್ತಿ ಮಾಡಿ ಅಪಾಯವಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತೆ ಕ್ರಮವಾಗಿ ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ ನೀಡದಂತೆ ನಿಷೇಧಾಜ್ಞೆ ಮಾಡುವಂತೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ತಾಲೂಕು ದಂಡಾಧಿಕಾರಿ ಡಾ.ಲೋಕೇಶ್ ಆದೇಶ ಹೊರಡಿಸಿದ್ದಾರೆ.
ಹಲಗೂರು ಹೋಬಳಿಯ ಮುತ್ತತ್ತಿ ಗ್ರಾಮವು ಪ್ರಸಿದ್ಧ ಯಾತ್ರಾ ಹಾಗೂ ಪ್ರೇಕ್ಷಣೀಯ ಸ್ಥಳ. ಮುತ್ತತ್ತಿ ಗ್ರಾಮದ ಆಸು-ಪಾಸು ಮತ್ತು ನದಿ ಅಂಚಿನಲ್ಲಿ ಹೊಸ ವರ್ಷಾಚರಣೆಗಾಗಿ ಬೆಂಗಳೂರು, ಕನಕಪುರ, ಮಳವಳ್ಳಿ ಹಾಗೂ ಇತರ ಜಿಲ್ಲೆ/ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ.ಹೊಸ ವರ್ಷಾಚರಣೆಗಾಗಿ ಮದ್ಯಪಾನ ಸೇವನೆ ಮತ್ತು ಇತರೆ ಮೋಜು ಮಸ್ತಿ ಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಹಾಗೂ ಇಂತಹ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಮುತ್ತತ್ತಿ ಪ್ರವಾಸಿ ತಾಣ, ಭೀಮೇಶ್ವರಿ ಹಾಗೂ ಸುತ್ತ-ಮುತ್ತಲಿನ ಅರಣ್ಯ ಪ್ರದೇಶ ವ್ಯಾಪ್ತಿ ಡಿ.31ರ ಬೆಳಗ್ಗೆ 6 ಗಂಟೆಯಿಂದ ಜನವರಿ 2 ಬೆಳಗ್ಗೆ 6 ಗಂಟೆರವೆಗೆ 2 ದಿನಗಳ ಕಾಲ ಯಾರು ಪ್ರವೇಶ ಮಾಡದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕನಕಪುರ ಮತ್ತು ಸಾತನೂರು ಕಡೆಯಿಂದ ಬರುವ ಪ್ರವಾಸಿಗರಿಗೆ ಹಾಗೂ ಹಲಗೂರಿನಿಂದ ಹೋಗುವ ಪ್ರವಾಸಿಗರಿಗೆ ಪ್ರವೇಶ ಇರುವುದಿಲ್ಲ. ಮುತ್ತತ್ತಿಗೆ ಮುಂಚಿತವಾಗಿ ಹೋಗಿರುವ ಪ್ರವಾಸಿಗರನ್ನು ಹೊರಗೆ ಕಳಿಸಲಾಗುವುದು. ನಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಹಲಗೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಬಿ.ಮಹೇಂದ್ರ ತಿಳಿಸಿದ್ದಾರೆ.
ಬಲಮುರಿ, ಎಡಮುರಿ, ಕೆಆರ್ ಎಸ್ ಹಿನ್ನೀರಿನ ಪ್ರದೇಶಗಳಿಗೆ ನಿಷೇಧಶ್ರೀರಂಗಪಟ್ಟಣ:
ಹೊಸ ವರ್ಷಾಚರಣಿ ಹಿನ್ನೆಲೆ ತಾಲೂಕಿನ ಬೆಳಗೊಳ ಗ್ರಾಮದ ಬಳಿಯ ಕಾವೇರಿ ನದಿ ತೀರದ ಬಲಮುರಿ ಹಾಗೂ ಎಡಮುರಿ ಪ್ರವಾಸಿ ತಾಣಗಳಿಗೆ ಮತ್ತು ಕೆ.ಆರ್.ಸಾಗರ ಅಣೆಕಟ್ಟೆ ಹಿನ್ನೀರಿನ ಪ್ರದೇಶಗಳಲ್ಲಿ ಎರಡು ದಿನ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಆದೇಶಿಸಿದ್ದಾರೆ.ಶಾಂತಿ ಸುವ್ಯವಸ್ಥೆ, ಕಾನೂನು ಪಾಲನೆ ಹಾಗೂ ವರ್ಷಾಚರಣೆ ಹಿನ್ನೆಲೆ ಮೋಜು ಮಸ್ತಿ ಮಾಡಿ ಕಾವೇರಿ ನದಿಯಲ್ಲಿ ನಡೆಯಬಹುದಾದ ಸಾವು, ನೋವುಗಳನ್ನು ತಡೆಯುವ ದೃಷ್ಟಿಯಿಂದ ಡಿ.31ರ ಬೆಳಗ್ಗೆ 6ರಿಂದ ಜ.1ರ ರಾತ್ರಿ 8 ಗಂಟೆವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಈ ಆದೇಶ ಹೊರಡಿಸಿದ್ದಾರೆ.
ಆದೇಶ ಉಲ್ಲಂಘನೆ ಮಾಡಿ ನದಿ ತೀರದಲ್ಲಿ ಮೋಜು-ಮಸ್ತಿ ಮಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಕೆಆರ್ ಎಸ್ ಪೊಲೀಸರು ಎಚ್ಚರಿಸಿದ್ದಾರೆ.