ವಿಜಯ್ ಕೇಸರಿ
ಕೆಂಗಲ್ನಲ್ಲೇ ಪೂಜೆ ಸಲ್ಲಿಸಿ ಪ್ರವಾಸ:
ಶುಕ್ರವಾರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ನಿಖಿಲ್ ಕುಮಾರಸ್ವಾಮಿ ತಾಲೂಕಿನ ವಂದಾರಗುಪ್ಪೆ ಹಾಗೂ ಹೊಂಗನೂರು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದ್ದರು. ಪಕ್ಷದ ಕಾರ್ಯಕರ್ತರು ಹಾಗೂ ಜನರ ಸಮಸ್ಯೆ ಅರಿಯಲು ಪ್ರವಾಸ ನಡೆಸಿದ್ದೇನೆ. ನಾನು ಚನ್ನಪಟ್ಟಣ ಕ್ಷೇತ್ರದ ಸ್ಪರ್ಧಾಂಕ್ಷಿಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.ತಾಲೂಕಿನ ದೈವಮೂಲೆ ಎಂದು ನಂಬಿರುವ ಕೆಂಗಲ್ನಿಂದಲೇ ಅವರು ಪೂಜೆ ಸಲ್ಲಿಸಿ ಪ್ರವಾಸ ಆರಂಭಿಸಿರುವುದು ಏಕೆ ಎಂಬ ಪ್ರಶ್ನೆ ಮೂಡಿಸಿದೆ. ರಾಜಕಾರಣಿಗಳು ಸಾಮಾನ್ಯವಾಗಿ ಕೆಂಗಲ್ನಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸುವುದು ವಾಡಿಕೆ. ಆದರೆ ನಿಖಿಲ್ ಬರೀ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಲು ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರವಾಸ ಆರಂಭಿಸಿದ್ದು ಏಕೆ ಎಂಬ ಕುತೂಹಲ ಮೂಡಿದೆ.
ಚನ್ನಪಟ್ಟಣದ ಎನ್ಡಿಎ ಮೈತ್ರಿ ಟಿಕೆಟ್ಗಾಗಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಟಿಕೆಟ್ಗಾಗಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತೀವ್ರ ಪ್ರಯತ್ನ ನಡೆಸಿದ್ದು, ಟಿಕೆಟ್ ದೊರೆಯದಿದ್ದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವ ತಯಾರಿ ನಡೆಸಿದ್ದಾರೆ. ಮುಂದಿನ ವಾರ ದೆಹಲಿಯಲ್ಲಿ ಚನ್ನಪಟ್ಟಣ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಅವರು ದೆಹಲಿಗೆ ತೆರಳುವ ಸಾಧ್ಯತೆ ಇದೆ.
ಈಗಾಗಲೇ ಎರಡು ಚುನಾವಣೆಗಳಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದ್ದಾರೆ. ಇದೀಗ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಚುನಾವಣೆಗೆ ಪಕ್ಷ ಸಂಘಟನೆಯ ಜತೆಗೆ ಕ್ಷೇತ್ರದ ಜನರ ನಾಡಿಮಿಡಿತ ಅರಿಯುವ ನಿಟ್ಟಿನಲ್ಲಿ ನಿಖಿಲ್ ಪ್ರವಾಸ ನಡೆಸಿದ್ದಾರೆ ಎನ್ನುವ ವ್ಯಾಖ್ಯಾನ ರಾಜಕೀಯ ಅಂಗಳದಲ್ಲಿ ಕೇಳಿಬರುತ್ತಿದೆ.
ನಿಖಿಲ್ ಕುಮಾರಸ್ವಾಮಿ ಕ್ಷೇತ್ರ ಪ್ರವಾಸ ಹೊಸದೇನು ಅಲ್ಲ. ಕಳೆದ ವರ್ಷ ನಡೆದಿದ್ದ ವಿಧಾನಸಭಾ ಚುನಾವಣೆಯ ವೇಳೆ ಸಹ ಕ್ಷೇತ್ರದಲ್ಲಿ ಪ್ರವಾಸ ನಡೆಸಿದ್ದರು.
ಕ್ಷೇತ್ರದಲ್ಲಿ ನಿಖಿಲ್ ಎರಡನೇ ದಿನ ಪ್ರವಾಸ:
ಚನ್ನಪಟ್ಟಣ ಉಪಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಾಲೂಕಿನಲ್ಲಿ ಎರಡನೇ ದಿನ ಪ್ರವಾಸ ಮುಂದುವರೆಸಿದರು.
ಬೇವೂರು ಜಿಪಂ ವ್ಯಾಪ್ತಿಯ ಇರುಳಿಗರದೊಡ್ಡಿ, ನಾಯಿದೊಳ್ಳೆ ಗ್ರಾಮ, ದಶವಾರ, ಮಾಕಳಿಹೊಸಹಳ್ಳಿ, ಪಟೇಲರದೊಡ್ಡಿ, ಅಬ್ಬೂರು, ಎಲೆಹೊಸಹಳ್ಳಿ ಸೇರಿ ಸುಮಾರು ೧೦ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿದ ಅವರು, ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿದರು.
ನಂತರ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ಚನ್ನಟಪ್ಟಣ ವಿಧಾನಸಭೆ ಕ್ಷೇತ್ರಕ್ಕೆ ಯಾವಾಗ ಬೇಕಾದರೂ ಚುನಾವಣೆ ಘೋಷಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಬೂತ್ಮಟ್ಟದಲ್ಲಿ ಪಕ್ಷವನ್ನು ಸಂಘಟನೆಗೊಳಿಸುವಂತೆ ಸೂಚಿಸಿದರು.ಚನ್ನಪಟ್ಟಣ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವರಿಷ್ಠರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚರ್ಚೆ ನಡೆಸಿ, ಒಮ್ಮತದ ನಿರ್ಧಾರಕ್ಕೆ ಬರಲಿದ್ದಾರೆ. ಅವರು ಯಾವುದೇ ತೀರ್ಮಾನ ಕೈಗೊಂಡರೂ ಅದಕ್ಕೆ ನಾವೆಲ್ಲ ಬದ್ಧರಾಗಿಬೇಕು. ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಗೆಲ್ಲುವುದು ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ನಾವೆಲ್ಲ ಸೇರಿ ಒಗ್ಗೂಡಿ ದುಡಿದು ಎನ್ಡಿಎ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸಬೇಕು ಎಂದರು.
ಇದೇ ವೇಳೆ ನೆರೆದಿದ್ದ ಕೆಲವು ಕಾರ್ಯಕರ್ತರು ಕ್ಷೇತ್ರದಿಂದ ನೀವೇ ಸ್ಪರ್ಧಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿಯವರಿಗೆ ಒತ್ತಾಯಿಸಿದರು.ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು, ಒಕ್ಕಲಿಗರ ಸಂಘದ ನಿರ್ದೇಶಕ ಹಾಪ್ಕಾಮ್ಸ್ ದೇವರಾಜು ಸೇರಿ ಅನೇಕ ಮುಖಂಡರು ಇದ್ದರು.