ಪ್ರೊ.ವಿ.ಬಿ.ಅರ್ತಿಕಜೆಗೆ ‘ನಿರಂಜನ ಪ್ರಶಸ್ತಿ’೯ರಂದು ಪ್ರಶಸ್ತಿ ಪ್ರದಾನ ಸಮಾರಂಭ

KannadaprabhaNewsNetwork |  
Published : May 03, 2024, 01:09 AM IST
ಫೋಟೋ: ೨ಪಿಟಿಆರ್-ಪ್ರೊ.ವಿ.ಬಿ. ಅರ್ತಿಕಜೆ | Kannada Prabha

ಸಾರಾಂಶ

ಮೇ ೯ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡಪ್ರಭ ವಾರ್ತೆ ಪುತ್ತೂರು

ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ)ದ ಶಿವರಾಮ ಕಾರಂತ ಅಧ್ಯಯನ ಕೇಂದ್ರದಿಂದ ಕೊಡಮಾಡುವ ನಿರಂಜನ ಪ್ರಶಸ್ತಿಯನ್ನು ನಿವೃತ್ತ ಪ್ರಾಧ್ಯಾಪಕರಾದ ಸಾಹಿತಿ ಪ್ರೊ.ವಿ.ಬಿ. ಅರ್ತಿಕಜೆ ಅವರಿಗೆ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನ ಇವರಿಗೆ ಪ್ರಕಟಿಸಲಾಗಿದೆ.

ಮೇ ೯ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣ ಭಟ್ ವಹಿಸಲಿದ್ದಾರೆ. ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಪತಿ ಡಾ. ನಿರಂಜನ ವಾನಳ್ಳಿ ಹಾಗೂ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ವರದರಾಜ ಚಂದ್ರಗಿರಿ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿರಂಜನ ಸಾಹಿತ್ಯ ಪ್ರಶಸ್ತಿ: ನಿರಂಜನ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಪ್ರೊ. ವಿ. ಬಿ. ಅರ್ತಿಕಜೆ ಅವರು ಪುತ್ತೂರು ಬಳಿಯ ಈಶ್ವರಮಂಗಲದ ಅರ್ತಿಕಜೆ ಶ್ಯಾಮ ಭಟ್ಟ ಹಾಗೂ ಸಾವಿತ್ರಿ ದಂಪತಿಯ ಪುತ್ರರಾಗಿ ೧೯೪೩ ಜೂನ್ ೨೯ರಂದು ಜನಿಸಿದರು. ಇವರ ಆಸಕ್ತಿಯ ಕ್ಷೇತ್ರ ಅಧ್ಯಾಪನ, ಪತ್ರಿಕೋದ್ಯಮ, ಸಾಹಿತ್ಯ ಹಾಗೂ ಸಂಘಟನೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ೩೩ ವರ್ಷಗಳ ಕಾಲ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ ಇವರು ಪ್ರೌಢಶಾಲಾ ದಿನಗಳಲ್ಲಿ ನವೋದಯ, ಸುಪ್ರಭಾತ ಮತ್ತು ನವರಸ ಹಸ್ತಪತ್ರಿಕೆಗಳನ್ನು ಆರಂಭಿಸಿದವರು. ತಮ್ಮ ಆಡುಭಾಷೆ ಹವ್ಯಕವನ್ನು ಅಂಕಣದಲ್ಲಿ ಉಪಯೋಗಿಸಿದರು. ನಂತರ ಆ ಭಾಷೆಯಲ್ಲೇ ಸಾಹಿತ್ಯ ಸೃಷ್ಟಿಸಿದ ಹಿರಿಮೆ ಇವರದು. ಪುತ್ತೂರಿನ ಸಾಹಿತ್ಯಕ, ಸಾಂಸ್ಕೃತಿಕ ಸಂಸ್ಥೆಗಳಲ್ಲೂ ಸಕ್ರಿಯರಾಗಿ ಸಂಘಟನ ಕೌಶಲವನ್ನು ಸಾಬೀತುಪಡಿಸಿರುವ ಇವರು ಅನೇಕ ಪ್ರತಿಭಾಶಾಲಿಗಳಿಗೆ ಪ್ರೋತ್ಸಾಹಿಸಿದವರು. ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮವನ್ನು ಪ್ರಾರಂಭಿಸಿದ ಹೆಗ್ಗಳಿಕೆಯೂ ಇವರದು. ಇವರು ನಾದಪೂಜೆ, ಅಪರೂಪ, ಅನನ್ಯ ಸಾಧಕ. ಜೇನಹನಿ, ಪುಸ್ತಕ ಪ್ರೀತಿಗೆ ರೂಪಕ: ಬೋಳಂತಕೋಡಿ ಈಶ್ವರ ಭಟ್ಟ, ಹಾಸ್ಯೋಲ್ಲಾಸ, ನಗೆಮಿಂಚು, ಪತ್ರಿಕಾ ರಂಗ ಪ್ರವೇಶ ಮೊದಲಾದ ಪ್ರಮುಖ ಕೃತಿಗಳನ್ನು ಪ್ರಕಟಿಸಿದ್ದಾರೆ.

ಶಂಕರ ಸಾಹಿತ್ಯ ಪ್ರಶಸ್ತಿ: ಶಂಕರ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನ ಸಂಸ್ಥೆಯನ್ನು ಪುತ್ತೂರು ಸೀಮೆಯ ಹಿರಿಯ ವೈದಿಕ ವಿದ್ವಾಂಸರೂ ಪುರೋಹಿತರೂ ಆದ ದಿವಂಗತ ಮಿತ್ತೂರು ತಿಮ್ಮಯ್ಯ ಭಟ್ಟರ ಹೆಸರಿನಲ್ಲಿ ಅವರ ಮರಣಾನಂತರ ಅವರ ಶಿಷ್ಯವರ್ಗದವರು, ಬಂಧುಗಳೂ ಸೇರಿ ೧೯೯೩ರಲ್ಲಿ ಸ್ಥಾಪಿಸಿದರು. ನೋಂದಾಯಿತ ಸಂಸ್ಥೆಗೆ ಈಗ ಮೂವತ್ತನೆಯ ವರ್ಷ. ಸಂಸ್ಕೃತ ಭಾಷೆ, ವೈದಿಕ ವಿಷಯಗಳು ನಮ್ಮ ಸಂಸ್ಕೃತಿ-ಪರಂಪರೆ-ಇವುಗಳ ಅಧ್ಯಯನ ಮತ್ತು ಪ್ರಸಾರದೊಂದಿಗೆ ಸಾಮಾಜಿಕ ಸಮುನ್ನತಿಯ ಧೈಯಗಳನ್ನೂ ಹೊಂದಿರುವ ಸಂಸ್ಥೆಯು ಕಳೆದ ಮೂವತ್ತು ವರ್ಷಗಳಿಂದ ಪರಿಸರದ ಶಾಲಾ ಕಾಲೇಜುಗಳಲ್ಲಿ ಸಂಸ್ಕೃತಾಧ್ಯಯನದಲ್ಲಿ ತರಗತಿಗೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಪ್ರೋತ್ಸಾಹಧನ ಪ್ರದಾನದೊಂದಿಗೆ ನಡೆಸುತ್ತಿದೆ.. ಕನ್ನಡ ಸಂಧ್ಯಾಭಾಷ್ಯ, ಆದಿತ್ಯಾದಿ ನವಗ್ರಹ ಪೂಜಾವಿಧಿ, ಶಾರದಾರಾಧನಮ್, ಗೋದಾನಾದಿ ವಿಧಾನಮ್, ವೇದವೇದಾಂಗ ಪರಿವಾರ, ಶಿವಯೋಗದೀಪಿಕಾ ಮೊದಲಾದ ಸತ್ಕೃತಿಗಳನ್ನು ಪ್ರಕಟಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ
ಕಾರ್ಯಭಾರ ಆಧರಿಸಿ ಶಿಕ್ಷಕರ ನೇಮಕ - ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿ