ಕನ್ನಡಪ್ರಭ ವಾರ್ತೆ ರಾಮನಗರ
ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಿಜೆಪಿ ನಾಯಕರಾದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಯೋಗೇಶ್ವರ್ ಸದ್ಯದಲ್ಲೇ ಕಾಂಗ್ರೆಸ್ಗೆ ಸೇರ್ಪಡೆಯಾಗುವುದಾಗಿ ಅವರೇ ಅಧಿಕೃತವಾಗಿ ಘೋಷಿಸಿದ್ದಾರೆ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕೆಲ ತಿಂಗಳ ಹಿಂದಷ್ಟೇ ನಿಶಾಯೋಗೇಶ್ವರ್ ಭೇಟಿ ಮಾಡಿದ್ದರು. ಬಳಿಕ ಬಿಎಂಐಸಿಪಿ ಅಧ್ಯಕ್ಷರಾಗಿ ಚನ್ನಪಟ್ಟಣ ಕಾಂಗ್ರೆಸ್ ಮುಖಂಡ ರಘುನಂದನ್ ರಾಮಣ್ಣ ಅಧಿಕಾರ ಸ್ವೀಕಾರದ ಸಮಯದಲ್ಲಿ ಸಹ ಸಂಸದ ಡಿ.ಕೆ.ಸುರೇಶ್ ಜೊತೆಗೆ ನಿಶಾ ಕಾಣಿಸಿಕೊಂಡಿದ್ದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
ನನ್ನ ತಂದೆ ಸಹ ಮತವೂ ಇದೆ:
ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಕ್ಕೆ ನನ್ನ ತಂದೆಯ ಸಹಮತವಿದೆ. ಅವರಿಗೆ ಗೊತ್ತಿದ್ದೇ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ. ಕಾಂಗ್ರೆಸ್ ಪಕ್ಷ ಸೇರುವ ಸ್ವಾತಂತ್ರ್ಯ ನನಗೆ ಕೊಟ್ಟಿದ್ದಾರೆ. ಇದರಿಂದ ಯಾರಿಗೆ ಲಾಭ, ಯಾರಿಗೆ ನಷ್ಟ ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ನನ್ನ ತಂದೆಯವರು ಸ್ವತಂತ್ರ್ಯವಾಗಿ ರಾಜಕಾರಣ ಮಾಡಿದವರು. ನನ್ನ ರಾಜಕೀಯ ಬೆಳವಣಿಗೆಗೂ ಅವರು ಅಡ್ಡಿಪಡಿಸುವುದಿಲ್ಲ. ನನಗೆ ಕಾಂಗ್ರೆಸ್ ಸೇರುವುದು ಒಳ್ಳೆಯದು ಅನಿಸುತ್ತಿದೆ. ಅದರಿಂದಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಯಾರೂ ಚನ್ನಪಟ್ಟಣ ಅಭಿವೃದ್ಧಿ ಮಾಡಿಲ್ಲ:ನಾನು ಕಾಂಗ್ರೆಸ್ ಸೇರುತ್ತಿರುವುದರ ಹಿಂದೆ ಚನ್ನಪಟ್ಟಣದ ಅಭಿವೃದ್ಧಿಯೇ ಮುಖ್ಯಕಾರಣ. ಎಲ್ಲರೂ ಚನ್ನಪಟ್ಟಣದ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ಆದರೆ, ಚನ್ನಪಟ್ಟಣದಲ್ಲಿ ಅಭಿವೃದ್ಧಿ ಏನೂ ಆಗಿಲ್ಲ. ಉದ್ಯೋಗ ಸಮಸ್ಯೆ ಸಾಕಷ್ಟಿದೆ. ನಾಲ್ಕೈದು ಕಂಪನಿಗಳನ್ನು ತರಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಚನ್ನಪಟ್ಟಣದಿಂದ ಸ್ಪರ್ಧಿಸಲು ಸಿದ್ಧ:ಕಾಂಗ್ರೆಸ್ನಿಂದ ಬೆಂಬಲ ಸಿಕ್ಕರೆ, ಟಿಕೆಟ್ ಸಿಕ್ಕರೆ ನಾನು ಕಾಂಗ್ರೆಸ್ನಿಂದಲೇ ಸೇವೆ ಮಾಡುತ್ತೇನೆ ಎಂದು ಹೇಳುವ ಮೂಲಕ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಯೋಗೇಶ್ವರ್ ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆಮಾಡುವ ಸುಳಿವು ನೀಡಿದ್ದಾರೆ.
ಚನ್ನಪಟ್ಟಣ ಹಾಲಿ ಶಾಸಕ ಎಚ್.ಡಿ.ಕುಮಾರಸ್ವಾಮಿ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ಆರಂಭಗೊಂಡಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯೋಗೇಶ್ವರ್ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ನಿಶಾಯೋಗೇಶ್ವರ್ ಹೇಳಿಕೆ ಸಾಕಷ್ಟು ಕುತೂಹಲ ಕೆರಳಿಸಿದೆ.