ಮುಂಡಗೋಡ; ಪಪಂನ ಹೊರಗುತ್ತಿಗೆ ನೌಕರನೋರ್ವ ಭಾರಿ ಅವ್ಯವಹಾರ ನಡೆಸಿದ್ದು, ಆತ ಮತ್ತು ಆತನಿಗೆ ಸಹಕರಿಸಿ ಪಪಂ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ಕಾನೂನು ಕ್ರಮವಾಗಬೇಕು ಎಂದು ಪಪಂ ಅಧ್ಯಕ್ಷೆ ಜಯಸುಧಾ ಬೋವಿ ಹೇಳಿದರು.
ಈ ಬಗ್ಗೆ ಪರಿಶಿಷ್ಟ ಗುತ್ತಿಗೆದಾರರು ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಆತ ನಡೆಸಿದ ಬಹುತೇಕ ಅಕ್ರಮ ಬಯಲಿಗೆ ಬಂದಿದೆ. ಆತನನ್ನು ಕೆಲಸದಿಂದ ತೆಗೆದು ಹಾಕುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಆದರೆ ಇಲ್ಲಿಯ ಮುಖ್ಯಾಧಿಕಾರಿ ಆತನನ್ನು ತೆಗೆದು ಹಾಕುವ ಬದಲು ಆತನಿಗೆ ನೋಟಿಸ್ ನೀಡಿ ಜಿಲ್ಲಾಧಿಕಾರಿ ಆದೇಶವನ್ನು ಗಾಳಿಗೆ ತೂರಿದ್ದಾರೆ ಎಂದು ದೂರಿದರು.
ಇವೆಲ್ಲ ಬೆಳವಣಿಗೆ ನೋಡಿದರೆ ಪಪಂ ಅಧಿಕಾರಿಗಳು, ಸಿಬ್ಬಂದಿ ಆತ ನಡೆಸಿದ ಅವ್ಯವಹಾರಗಳಲ್ಲಿ ಪಾಲುದಾರರಾಗಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಇದರಲ್ಲಿ ಯಾರ್ಯಾರ ಕೈವಾಡವಿದೆ ಎಂಬುವುದನ್ನು ನಾವು ಬಯಲಿಗೆಳೆಯುತ್ತೇವೆ. ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಅವ್ಯವಹಾರ ನಡೆದಿರುವ ಬಗ್ಗೆ ಸಂಪೂರ್ಣ ದಾಖಲೆ ಕಲೆ ಹಾಕಲಾಗಿದ್ದು, ಪೊಲೀಸ ಪ್ರಕರಣ ದಾಖಲಿಸಲು ಸಿದ್ದತೆ ನಡೆಸಲಾಗಿದೆ. ಅಗತ್ಯ ಬಿದ್ದರೆ ಸೈಬರ್ ಕ್ರೈಂಗೂ ದೂರು ಸಲ್ಲಿಸಲಾಗುವುದು. ಇದರ ನಂತರವು ಕೂಡ ಕ್ರಮವಾಗದಿದ್ದರೆ ಲೋಕಾಯುಕ್ತರಿಗೂ ದೂರು ಸಲ್ಲಿಸುವುದಾಗಿ ಎಚ್ಚರಿಸಿದರು.ಉಪಾಧ್ಯಕ್ಷೆ ರಹಿಮಾಬಾನು ಕುಂಕೂರ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಸುಬ್ಬಾಯವರ, ಸದಸ್ಯರಾದ ವಿಶ್ವನಾಥ ಪವಾಡಶೆಟ್ಟರ, ಶೇಖರ ಲಮಾಣಿ, ಬಿಬಿಜಾನ್ ಮುಲ್ಲಾನವರ, ರಜಾ ಖಾನ ಪಠಾಣ, ಮಹ್ಮದಗೌಸ ಮಖಾಂದಾರ, ಮಂಜುನಾಥ, ನಿರ್ಮಲಾ ಬೆಂಡ್ಲಗಟ್ಟಿ, ಮಹ್ಮದಜಾಪರ್ ಹಂಡಿ ಮುಂತಾದವರು ಉಪಸ್ಥಿತರಿದ್ದರು.