ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾರ್ಯಕರ್ತರು, ಟಿಪ್ಪು ಸುಲ್ತಾನ್ ಕನ್ನಡ ವಿರೋಧಿಯೂ ಆಗಿದ್ದು, ಆತ ತನ್ನ ಆಡಳಿತಾವಧಿಯಲ್ಲಿ ಈ ನಾಡಿನ ಜನರ ಮೇಲೆ ಬಲತ್ಕಾರವಾಗಿ ಪರ್ಷಿಯಾ ಭಾಷೆಯನ್ನು ಹೇರಿ ಜಾರಿಗೆ ತಂದಿರುವುದನ್ನು ಇತಿಹಾಸದ ಪುಟಗಳು ಸಾರಿ ಹೇಳುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚಿನ ದಿನಗಳಲ್ಲಿ ಆತನ ಮತಾಂಧತೆ ಹಾಗೂ ಕನ್ನಡ ವಿರೋಧಿ ನಿಲುವಿನ ಕುರಿತು ವ್ಯಾಪಕ ಚರ್ಚೆಗಳು ನಡೆದಿವೆ. ಕನ್ನಡ ದ್ವೇಷಿ ಹಾಗೂ ಹಿಂದು ವಿರೋಧಿ ಮತಾಂಧನೆಂಬುದು ಮತ್ತಷ್ಟು ಬಹಿರಂಗವಾಗಿದೆ ಎಂದು ದೂರಿದರು.ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ವಿರೋಧಿ ವ್ಯಕ್ತಿಯ ವಿಚಾರ ಗೋಷ್ಠಿಯನ್ನು ಕೆಲ ಸಾಹಿತಿಗಳು ಆಯೋಜಿಸಲು ಸಿದ್ಧತೆ ಮಾಡಿರುವುದು ಮಾಧ್ಯಮಗಳ ಮೂಲಕ ತಿಳಿದಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.
ಸುಮಾರು 30 ಕೋಟಿ ರು. ಹೆಚ್ಚು ಹಣ ವ್ಯಯಮಾಡಿ ನುಡಿ ಜಾತ್ರೆ ಮಂಡ್ಯ ಜಿಲ್ಲೆಯಲ್ಲಿ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಆದರೆ ಮೊಸರಿನ ಸಿಕ್ಕ ಕಲ್ಲಿನ ಹಾಗೆ ಕನ್ನಡ ವಿರೋಧಿ ಟಿಪ್ಪುವಿನ ವಿಚಾರ ಗೋಷ್ಠಿಯನ್ನು ಸಮ್ಮೇಳನದಲ್ಲಿ ಆಯೋಜಿಸಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಮನವಿ ಮಾಡಿದರು.
ಈ ವೇಳೆ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಶಿವಕುಮಾರ್ ಆರಾಧ್ಯ, ಹೊಸಹಳ್ಳಿ ಶಿವು, ನಂದೀಶ್ ಭಾಗವಹಿಸಿದ್ದರು.