ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಮೆಕ್ಕೆಜೋಳ ಮತ್ತು ಭತ್ತ ಪ್ರಮುಖ ಬೆಳೆಯಾಗಿದೆ. ಕೃಷಿ ಚಟುವಟಿಕೆಯಲ್ಲಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಶೇ.28ರಷ್ಟು ಬಿತ್ತನೆಯಾಗಿದೆ. ಆಗಸ್ಟ್ ಅಂತ್ಯದವರೆಗೆ ಬಿತ್ತನೆಗೆ ಅವಕಾಶ ಇರುವುದರಿಂದ ಹಾಲಿ ಮಳೆಯ ಪ್ರಮಾಣ ಕಡಿಮೆಯಿದ್ದರೂ ರೈತರು ಆತಂಕಗೊಳ್ಳುವುದು ಬೇಡ. ನಿರಂತರವಾಗಿ ಮಳೆಯಾಗದಿದ್ದರೂ ಆಗಾಗ ಮಳೆಯಾಗುತ್ತಿರುವುದರಿಂದ ಇನ್ನು ಮುಂದೆ ಮಳೆ ಬರುವ ಆಶಾವಾದ ಇದೆ. ಜುಲೈ 25ರಂದು ಚಿತ್ರದುರ್ಗದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಬೆಂಗಳೂರು ವಿಭಾಗದ ಜಿಲ್ಲಾಧಿಕಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮತ್ತು ಈ ಭಾಗದ ಜನಪ್ರತಿನಿಧಿಗಳ ಸಭೆ ಕರೆದು, ಮಳೆ, ಬರ ಕುರಿತು ಚರ್ಚಿಸಿದ್ದಾರೆ. ಅವರಿಗೆ ಜಿಲ್ಲೆಯ ವಸ್ತು ಸ್ಥಿತಿಯನ್ನು ತಿಳಿಸಲಾಗಿದೆ ಎಂದರು.
ಮಳೆ ಅಭಾವದ ಕಾರಣ ಮೆಕ್ಕೆಜೋಳ ಸರಿಯಾಗಿ ಮೊಳಕೆ ಬಂದಿಲ್ಲ. ಆದರೂ ಆ ಮಟ್ಟಿಗೆ ಬೆಳೆಹಾನಿಯಾಗಿಲ್ಲ. ಶಿಕಾರಿಪುರ, ಸೊರಬ ತಾಲೂಕುಗಳಿಗೆ ಭೇಟಿನೀಡಿ, ಮಳೆ, ಬೆಳೆಯ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದೇನೆ. ಮಳೆಯ ಅಭಾವದಿಂದ ವ್ಯತಿರಿಕ್ತ ಪರಿಣಾಮ ಬೀಳುವ ಸಾಧ್ಯತೆಯಿದೆ ಎಂದ ಅವರು, ರಸಗೊಬ್ಬರದ ದಾಸ್ತಾನು ಸಾಕಷ್ಟಿದೆ. ರೈತರಿಗೆ ಮುಂಗಾರಿನ ಕೃಷಿಗೆ ರಸಗೊಬ್ಬರದ ಕೊರತೆ ಆಗುವುದಿಲ್ಲ ಎಂದರು.ಜಿಲ್ಲೆಯಲ್ಲಿ 280 ಮಳೆಮಾಪನಗಳಿದ್ದು ಅವುಗಳಲ್ಲಿ 208 ಮಳೆಮಾಪನಗಳು ಕಾರ್ಯನಿರ್ವಹಿಸುತ್ತಿಲ್ಲ. ಕೇವಲ 72 ಮಾತ್ರ ಕೆಲಸ ನಿರ್ವಹಿಸುತ್ತಿವೆ. 185 ಮಳೆಮಾಪನಗಳನ್ನು ಸರಿಪಡಿಸಬೇಕಾಗಿದೆ. ಮಳೆಮಾಪನ ತಪ್ಪಾಗಿ ದಾಖಲಾಗಿದ್ದರಿಂದ ರೈತರಿಗೆ ತೊಂದರೆಯಾಗಿದೆ. ವಿಮಾ ಕಂಪನಿಗಳ ಜೊತೆ ಪರಿಹಾರ ಕಾರ್ಯಕ್ಕೆ ಮಾತುಕತೆ ನಡೆಸಲಾಗಿದೆ. ಶೇ.33ಕ್ಕೂ ಹೆಚ್ಚಿನ ಭೂಪ್ರದೇಶದ ಜನರಿಗೆ ಬೆಳೆಹಾನಿ ವಿಮೆ ನೀಡಬೇಕಾಗಿದೆ. ಹೆಕ್ಟೇರ್ಗೆ 22500 ರು. ಪರಿಹಾರ ನೀಡಲು ನಿಯಮದಲ್ಲಿ ಅವಕಾಶವಿದೆ. ಬೆಳೆವಿಮೆ ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಜಿಲ್ಲೆಯ ಸೊರಬ ತಾಲೂಕಿನ ಒಂದು ಗ್ರಾಮದಲ್ಲಿನ ನಿವಾಸಿಗಳಿಗೆ ಟ್ಯಾಂಕರ್ಮೂಲಕ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿ 37 ಗ್ರಾಮಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಅಲ್ಲಿ ಕೊಳವೆಬಾವಿಗಳ ಮೂಲಕ ಬಾಡಿಗೆ ಆಧಾರದ ಮೇಲೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಆ.8ರವರೆಗೆ ಎ್ಐಆರ್ ಪ್ರಕ್ರಿಯೆ ಅವಧಿ ವಿಸ್ತರಣೆ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.8ರಂದು ಕೊನೆಯ ದಿನದವರೆಗೂ ಬಿಎಲ್ಒಗಳು ಮನೆಮನೆ ಭೇಟಿಗೆ ನೀಡಿ ಮಾಹಿತಿ ಸಂಗ್ರಹಿಸುವರು. ಆ.17ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ನಂತರ ಸೆಪ್ಟೆಂಬರ್ 16 ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಧಿ ಇರುತ್ತದೆ. ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಅಕ್ಟೋಬರ್ 15 ರೊಳಗಾಗಿ ವಿಲೇವಾರಿ ಮಾಡಲಾಗುವುದು. ಅಕ್ಟೋಬರ್ 19 ರಂದು ಮತದಾರರ ಪಟ್ಟಿಯ ಅಂತಿಮ ಪಟ್ಟಿ ಪ್ರಕಟಗೊಳ್ಳಿದೆ ಎಂದರು.
ಮತದಾರರ ಪಟ್ಟಿಯಲ್ಲಿ ಗೈರಾಗಿರುವವರು, ಮರಣ ಹೊಂದಿದವರು, ಸ್ಥಳಾಂತರಗೊಂಡಿರುವ ಕುಟುಂಬಗಳು ಹಾಗೂ ಎರೆಡೆರೆಡು ಕಡೆಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ಉಳಿಸಿಕೊಂಡಿರುವವರು ಸೇರಿದಂತೆ ಒಟ್ಟು 156012 ಜನರನ್ನು ಗುರುತಿಸಲಾಗಿದೆ. ಆ ಪೈಕಿ 43845 ಮತದಾರರು ಮರಣ ಹೊಂದಿರುವುದನ್ನು ಗುರುತಿಸಲಾಗಿದೆ. ಗುರುತಿಸಲಾಗದ ಅಥವಾ ಗೈರಾಗಿರುವ 23,738 ಮಂದಿಯನ್ನು ಗುರುತಿಸಲಾಗಿದೆ. ಜಿಲ್ಲೆಯ ಒಟ್ಟು ಮತದಾರರಲ್ಲಿ 72,544 ಮತದಾರರು ಸ್ಥಳಾಂತರಗೊಂಡಿರುವುದನ್ನು ಗುರುತಿಸಲಾಗಿದೆ ಎಂದರು.