ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಭಾವನೆಗಳಿಗೆ ಸ್ಪಂದಿಸಲಿಲ್ಲ.
ಕನ್ನಡಪ್ರಭ ವಾರ್ತೆ ಮೈಸೂರು
ರಾಜ್ಯದಲ್ಲಿ ಕಳೆದ ಆರೇಳು ತಿಂಗಳಿಂದ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕದನ ನಿರ್ಣಾಯಕ ಹಂತಕ್ಕೆ ಬಂದಿದೆ ಎಂದು ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ತಿಳಿಸಿದರು.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುರ್ಚಿ ಕಾದಾಟದಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಮೇ ತಿಂಗಳಲ್ಲಿ ಆಡಳಿತ ಪಕ್ಷದ ನಾಯಕತ್ವ ಬದಲಾವಣೆ ಆಗುವ ಸಂಭವವಿದೆ. ಹೊಸ ಮುಖ್ಯಮಂತ್ರಿ ಬಂದು ಯಾವ ರೀತಿ ಸ್ಪಂದಿಸುತ್ತಾರೆಂದು ನೋಡಬೇಕಿದೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಭಾವನೆಗಳಿಗೆ ಸ್ಪಂದಿಸಲಿಲ್ಲ. ಹಬ್ಬ ಹರಿದಿನಗಳಲ್ಲಿ ಮಾಂಸ ತಿನ್ನುತ್ತಿದ್ದೆ ಎಂದು ಹೇಳಿದ್ದಾರೆ. ಮಾಂಸ ತಿನ್ನುವವರು ಕೂಡ ವಾರದಲ್ಲಿ ಒಂದು ದಿನ ತಿನ್ನುವುದಿಲ್ಲ. ಆದರೆ, ಸಿದ್ದರಾಮಯ್ಯ ಮಾತ್ರ ರಾಜ್ಯದ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ. ಮುಂಬರುವ ಸಿಎಂ ಆದರೂ ಜನರ ಧಾರ್ಮಿಕ ಭಾವನೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಲಿ ಎಂದು ಅವರು ಹೇಳಿದರು.ದೇಶದ ಹಲವು ರಾಜ್ಯಗಳಲ್ಲಿ ಮುಸ್ಲಿಮರು ಬಿಜೆಪಿ ಜೊತೆಯಲ್ಲಿದ್ದಾರೆ. ಆದರೆ, ಕರ್ನಾಟಕದಲ್ಲಿ ಅಂತಹ ಪರಿಸ್ಥಿತಿ ಇರಲಿಲ್ಲ. ಇದೀಗ ಎರಡು ಕ್ಷೇತ್ರಗಳ ಉಪಚುನಾವಣೆ ಪ್ರಚಾರದ ವೇಳೆ ಮುಸ್ಲಿಂರು ಬಿಜೆಪಿ ಜೊತೆ ನಿಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ. ಅಲ್ಪಸಂಖ್ಯಾತರು ಕಾಂಗ್ರೆಸ್ ವಿರುದ್ಧ ನಿಂತರೆ ಒಳ್ಳೆಯದು. ಬಿಜೆಪಿ ಎಲ್ಲರನ್ನು ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡುತ್ತಿದೆ ಎಂದರು.ರಾಜ್ಯ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದೆ. ಆಡಳಿತ ಪಕ್ಷದ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ಅನುದಾನ ನೀಡಲಾಗಿದೆ. ವಿಪಕ್ಷಗಳ ಶಾಸಕರಿರುವ ಕ್ಷೇತ್ರಕ್ಕೆ ಕೇವಲ 25 ಕೋಟಿ ಅನುದಾನ ನೀಡಿ ತಾರತಮ್ಯ ಮಾಡಲಾಗಿದೆ. ಒಂದು ಕ್ಷೇತ್ರದ ಅಭಿವೃದ್ದಿಗೆ 25 ಕೋಟಿ ಅನುದಾನ ಸಾಕಾಗುವುದಿಲ್ಲ. ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನವೇ ಅಭಿವೃದ್ಧಿ ಎಂದುಕೊಂಡಿದೆ ಎಂದು ಅವರು ಟೀಕಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.