ಕನ್ನಡಪ್ರಭ ವಾರ್ತೆ ಮಂಗಳೂರು
ಉಳ್ಳಾಲದಲ್ಲಿ ಮನೆ ಮೇಲೆ ತಡೆಗೋಡೆ ಬಿದ್ದು ನಾಲ್ವರು ಸಾವಿಗೀಡಾದ ಪ್ರಕರಣ ನಡೆದ ಹಿನ್ನೆಲೆಯಲ್ಲಿ ಜಿಲ್ಲೆಗೆ ತುರ್ತು ಭೇಟಿ ನೀಡಿದ ಅವರು ಸ್ಥಳ ಪರಿಶೀಲನೆ ನಡೆಸಿ ರಾತ್ರಿಯೇ ಜಿಲ್ಲೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.
ಪ್ರತಿ ಪಂಚಾಯತಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಪ್ರಾಣಾಪಾಯವಾಗಬಹುದಾದ ಸ್ಥಳಗಳ ಅರಿವು ಸ್ಥಳೀಯ ಅಧಿಕಾರಿಗಳು, ಸಿಬ್ಬಂದಿಗೆ ಇರುತ್ತದೆ. ದುರ್ಘಟನೆ ನಡೆದ ಮೇಲೆ ಸ್ಥಳಕ್ಕೆ ಹೋಗುವುದಲ್ಲ. ದುರ್ಘಟನೆ ನಡೆಯುವ ಮೊದಲೇ ಅಂತಹ ಸ್ಥಳಗಳ ಮೇಲೆ ನಿಗಾ ವಹಿಸಬೇಕು. ಅಪಾಯದಲ್ಲಿರುವ ಮನೆಮಂದಿಯನ್ನು ಬಲವಂತವಾಗಿ ಆದರೂ ಸ್ಥಳಾಂತರಿಸಬೇಕು. ಯಾರಿಗೂ ಪ್ರಾಣಾಪಾಯ ಆಗಬಾರದು. ಒಂದು ವೇಳೆ ಇಂಥ ದುರ್ಘಟನೆ ಮರುಕಳಿಸಿದರೆ ಲೋಪ ತೋರುವ ಅಧಿಕಾರಿಗಳು ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.ಭೂಕುಸಿತ, ಕಡಲ ಕೊರೆತ ಉಂಟಾಗುವ ಸ್ಥಳಗಳ ಅರಿವು ಸ್ಥಳೀಯ ಅಧಿಕಾರಿಗಳಿಗೆ ಇದ್ದೇ ಇರುತ್ತದೆ. ಜೋರು ಮಳೆ ಬಂದಾಗ ಅಂತಹ ಸ್ಥಳಗಳಿಗೆ ತೆರಳಿ ಅಲ್ಲಿಯ ಜನರನ್ನು ಎಚ್ಚರಿಸಿ. ಮನೆಗಳು ಅಪಾಯದಲ್ಲಿ ಇರುವುದು ಕಂಡು ಬಂದರೆ ಪೊಲೀಸ್ ಬಲ ಪ್ರಯೋಗಿಸಿಯಾದರೂ ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಿ ಎಂದು ಕೃಷ್ಣ ಭೈರೇಗೌಡ ಸೂಚಿಸಿದರು.
ಜಿಲ್ಲೆಯಲ್ಲಿ ಮನೆಗಳನ್ನು ಕಟ್ಟುವಾಗ ಕನಿಷ್ಠ ಸೇಫ್ಟಿ ಕ್ರಮಗಳನ್ನು ಅನುಸರಿಸಬೇಕು. ನದಿ ನೀರಿನ ಅಪಾಯದ ಮಟ್ಟಕ್ಕಿಂತ ಕೆಳಭಾಗದಲ್ಲಿ ಮನೆ ಕಟ್ಟಬಾರದು ಎಂಬಿತ್ಯಾದಿ ನಿಯಮಗಳನ್ನು ಕಡ್ಡಾಯಗೊಳಿಸಿ ಜಾರಿಗೊಳಿಸಿ ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ವಿಪತ್ತು ನಿರ್ವಹಣಾ ಇಲಾಖೆ ಕಾರ್ಯದರ್ಶಿ ರಶ್ಮಿ ಮಹೇಶ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತಿ ಸಿಇಒ ಡಾ. ಆನಂದ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿಎಲ್, ಡಿಸಿಪಿ ಸಿದ್ಧಾರ್ಥ್ ಗೊಯೆಲ್ ಇದ್ದರು.