ಬಳ್ಳಾರಿ: ರಾಜಕೀಯ ಒತ್ತಡದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಜಾರಿ ಮಾಡಿದ್ದಾರೆ. ಇದರಿಂದ ಪಕ್ಷಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಮುಖ್ಯಮಂತ್ರಿ ರಾಜೀನಾಮೆ ಕೊಡುವ ಅಗತ್ಯವೂ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಬಸವರಾಜ ಬೊಮ್ಮಾಯಿ ಅಧಿಕಾರದಲ್ಲಿದ್ದಾಗ ನಿವೇಶನ ಹಂಚಿಕೆ ಮಾಡಲಾಗಿದೆ. ಈಗ ಸಿಎಂ ಸಿದ್ದರಾಮಯ್ಯ ಅವರ ಮೇಲೆ ವಿನಾಕಾರಣ ಆರೋಪಿಸಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರ ಮಾಡುವ ಷಡ್ಯಂತ್ರ ಬಿಜೆಪಿ ಮಾಡುತ್ತಿದೆ. ಈ ವಿಚಾರ ಇಡೀ ನಾಡಿನ ಜನರಿಗೆ ಗೊತ್ತಿರುವ ಸಂಗತಿಯಾಗಿದೆ. ಮುಡಾ ವಿಚಾರವನ್ನು ಇಟ್ಟುಕೊಂಡು ಬಿಜೆಪಿ ಅವರು ಪಾದಯಾತ್ರೆ ಮಾಡಿದರೂ ಏನೂ ಪ್ರಯೋಜನ ಆಗಿಲ್ಲ. ಹೀಗಾಗಿ, ರಾಜ್ಯಪಾಲರ ಮೂಲಕ ಪ್ರಾಸಿಕ್ಯೂಷನ್ ಜಾರಿ ಮಾಡಿಸಿದ್ದಾರೆ ಎಂದರು.
ನಮ್ಮದು ಜನಪರ ಸರ್ಕಾರ. ಬಡವರು, ಮಹಿಳೆಯರ ಹಿತ ಕಾಯುವ ದೃಷ್ಟಿಯಿಂದ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪರ ವಾತಾವರಣವಿದೆ. ಸಿದ್ದರಾಮಯ್ಯ ನೇತೃತ್ವದ ಜನಕಲ್ಯಾಣದ ಸರ್ಕಾರವನ್ನು ಜನರು ಕೊಂಡಾಡುತ್ತಿದ್ದಾರೆ. ಇದನ್ನು ಸಹಿಸದ ಬಿಜೆಪಿಯವರು ಸರ್ಕಾರ ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ. ಆದರೆ, ಅವರ ಯಾವುದೇ ಷಡ್ಯಂತ್ರಗಳು ಫಲ ನೀಡುವುದಿಲ್ಲ. ಕಾಂಗ್ರೆಸ್ ಹೋರಾಟದಿಂದ ಬಂದಿರುವ ಪಕ್ಷ. ಕಾನೂನು ಹೋರಾಟ ಮಾಡುತ್ತೇವೆ. ಬಿಜೆಪಿಯ ಯಾವುದೇ ಹುನ್ನಾರಗಳಿಗೆ ಜಗ್ಗುವುದಿಲ್ಲ ಎಂದು ಸ್ಪಷ್ಪಪಡಿಸಿದರು.