ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯಲ್ಲಿ ಮಾತನಾಡಿ, ಹಾವು ಕಡಿತ ಉಂಟಾದ ತಕ್ಷಣದಲ್ಲೇ ಆಸ್ಪತ್ರೆಗೆ ಕರೆತರಬೇಕು. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ನೀಡುವ ಅಗತ್ಯ ಔಷಧಿ ಲಭ್ಯ ಇಟ್ಟುಕೊಳ್ಳಬೇಕು. ಮುನ್ನೆಚ್ಚರಿಕೆ ಹಾಗೂ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಮನೆ ಸುತ್ತಮುತ್ತ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಹಾಗೂ ಶಾಲಾ ಆವರಣದಲ್ಲಿ ಅನಗತ್ಯ ಗಿಡ ಗಂಟೆಗಳನ್ನು ಸ್ವಚ್ಚಗೊಳಿಸಬೇಕು ಎಂದರು ಹಾಗೂ ಹಾವು ಕಡಿತಕ್ಕೆ ಯಾವುದೇ ಕಾರಣಕ್ಕೆ ನಾಟಿ ವೈದ್ಯರ ಬಳಿ ತೆರಳದೇ ತತ್ಕ್ಷಣ ಆಸ್ಪತ್ರೆಗೆ ರೋಗಿಯನ್ನು ಕರೆತರಬೇಕು ಎಂದರು.ಕೆಎಫ್ಡಿಗೆ ಕಾರಣವಾಗುವ ಉಣ್ಣೆ ಕಡಿತದಿಂದ ರಕ್ಷಣೆ ಪಡೆಯಲು ತೀರ್ಥಹಳ್ಳಿ, ಹೊಸನಗರ, ಸಾಗರ ಭಾಗದಲ್ಲಿ ಡೇಪಾ ಎಣ್ಣೆಯನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು. ಇಲ್ಲಿನ ಮಕ್ಕಳು ಶಾಲೆಗೆ ಮತ್ತು ಹೊರಗೆ ಹೋಗುವಾಗ ಡೇಪಾ ಎಣ್ಣೆ, ಸಾಕ್ಸ್ ಧರಿಸಿಕೊಂಡು ಹೋಗಬೇಕು. ಜ್ವರ ಲಕ್ಷಣಗಳಿದ್ದರೆ ತಕ್ಷಣ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ಒಳಪಡಿಸಬೇಕು ಎಂದು ಎಚ್ಚರಿಕೆ ನೀಡಬೇಕು ಎಂದರು.
ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ: ಜಿಲ್ಲೆಯಲ್ಲಿ ಈ ತಿಂಗಳು 2254 ನಾಯಿ ಕಡಿತ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಈವರೆಗೆ 8140 ನಾಯಿ ಕಡಿತ ಪ್ರಕರಣ ದಾಖಲಾಗಿದೆ. ಯಾವುದೇ ಸಾವು ಸಂಭವಿಸಿಲ್ಲ. ನಾಯಿ ಕಡಿತ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡುವ ಪ್ರಕ್ರಿಯೆಯನ್ನು ಪರಿಣಾಮಕಾರಿಗೊಳಿಸಬೇಕು. ಹೋಟೆಲ್, ದರ್ಶಿನಿಗಳು ಛತ್ರಗಳು, ಶಾಲೆಗಳು, ಹಾಸ್ಟೆಲ್ಗಳಲ್ಲಿ ಆಹಾರ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು ಹಾಗೂ ಎಲ್ಲೆಂದರಲ್ಲಿ ಬೀದಿ ನಾಯಿಗಳಿಗೆ ಆಹಾರ ಪದಾರ್ಥ ಹಾಕಬಾರದು ಎಂದು ವಿ.ಅಭಿಷೇಕ್ ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಗುಡದಪ್ಪ ಕಸಬಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಈವರೆಗೆ 1682 ಪರೀಕ್ಷೆ ನಡೆದಿದ್ದು, 42 ಪಾಸಿಟಿವ್ ಪ್ರಕರಣ ದಾಖಲಾಗಿ ಚಿಕಿತ್ಸೆ ನಡೆಯುತ್ತಿದೆ. ಮಲೇರಿಯಾ 5 ಪ್ರಕರಣ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಸುಜಾತ, ಡಿಎಚ್ಓ ಡಾ.ನಟರಾಜ್, ಆರ್ಸಿಎಚ್ಒ ಡಾ. ಮಲ್ಲಪ್ಪ, ಇತರೆ ಕಾರ್ಯಕ್ರಮಗಳ ಅನುಷ್ಠಾನ ಅಧಿಕಾರಿಗಳು, ಟಿಎಚ್ಒಗಳು ಹಾಜರಿದ್ದರು.
ಡಿಎಸ್ಒ ಡಾ.ನಾಗರಾಜ್ ನಾಯ್ಕ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 226 ಹಾವು ಕಡಿತದ ಪ್ರಕರಣಗಳಿದ್ದು, 3 ಸಾವು ಸಂಭವಿಸಿದೆ. ಸಾಗರ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ ಎಂದರು. ಜಿಲ್ಲೆಯಲ್ಲಿ ಈವರೆಗೆ ಕೆಎಫ್ಡಿ 123 ಪಾಸಿಟಿವ್ ಪ್ರಕರಣಗಳಿದ್ದು, ಚಿಕಿತ್ಸೆ ನಡೆಸಲಾಗುತ್ತಿದೆ. ಒಟ್ಟು 5 ಸಾವು ಸಂಭವಿಸಿದೆ. ಟಿಕ್ ಮಾದರಿ ಪರೀಕ್ಷೆ ನಡೆಸಲಾಗುತ್ತಿದ್ದು, ಈವರೆಗೆ 625 ಮಾದರಿಯನ್ನು ಪುಣೆಗೆ ಕಳುಹಿಸಲಾಗಿದೆ ಅದರಲ್ಲಿ 3 ಟಿಕ್ ಪೂಲ್ ಪಾಸಿಟಿವ್ ಬಂದಿದೆ. ಈವರೆಗೆ 147 ಮಂಗಗಳು ಸಾವನ್ನಪ್ಪಿದ್ದು, ಇದರಲ್ಲಿ 34 ಅಟಾಪ್ಸಿ ನಡೆಸಲಾಗಿದ್ದು, ಯಾವುದೇ ಪಾಸಿಟಿವ್ ಪ್ರಕರಣ ಬಂದಿಲ್ಲ ಎಂದು ತಿಳಿಸಿದರು.