ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಅಡ್ಜಸ್ಟ್ಮೆಂಟ್ ರಾಜಕಾರಣಿ ಎಂದು ಟೀಕಿಸಿದ್ದ ಸಹೋದರ ಹಾಗೂ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿಕೆಗೆ ಸಚಿವ ಮಧುಬಂಗಾರಪ್ಪ ತೀಕ್ಷಣವಾಗಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಪಕ್ಷದಲ್ಲಿ ಯಾವುದೇ ಸೂಕ್ತ ದಿಕ್ಕು-ದೆಸೆ ಇಲ್ಲದೆ ಅವರು ಎಲ್ಲಿ ಕೂತಿದ್ದಾರೆ ಎಂಬುದನ್ನು ಒಮ್ಮೆ ನೋಡಲಿ ಎಂದು ಕಟುವಾಗಿ ಉತ್ತರಿಸಿದ್ದಾರೆ.
ಅಂತಹ ಹೊಲಸು ಹಾಗೂ ವ್ಯರ್ಥ ಮಾತುಗಳಿಗೆ ಉತ್ತರ ಕೊಟ್ಟು ಸಮಯ ಹಾಳುಮಾಡಲು ನಾನು ಬಯಸುವುದಿಲ್ಲ. ಸಂಪೂರ್ಣವಾಗಿ ತುಕ್ಕು ಹಿಡಿದಿರುವ ಗಿರಾಕಿಗೆ ಉತ್ತರ ನೀಡುವುದು ಅನಗತ್ಯ, ಎಷ್ಟೇ ತಿಕ್ಕಿದರೂ ತುಕ್ಕು ಹಿಡಿದಿರುವುದು ಬದಲಾಗುವುದಿಲ್ಲ ಎಂದರು.ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಹಾಗೂ ಅವರ ಸಚಿವ ಸ್ಥಾನದ ಕುರಿತು ವಿಪಕ್ಷಗಳು ಚರ್ಚೆ ಮಾಡುವುದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ. ಆದರೆ, ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದು, ಅವುಗಳ ಕುರಿತಾಗಿಯೂ ವಿಪಕ್ಷಗಳು ಶಾಸನಸಭೆಯಲ್ಲಿ ಚರ್ಚಿಸಲಿ ಎಂದು ಮನವಿ ಮಾಡಿದರು.
ಉತ್ತರ ಪ್ರದೇಶ, ಬಿಹಾರ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ರಾಜಕೀಯ ಇತಿಹಾಸವನ್ನು ಕೆದಕಿದರೆ ವಾಷಿಂಗ್ ಮಿಷನ್ ರಾಜಕಾರಣದ ವಿಚಾರಗಳು ಮುನ್ನೆಲೆಗೆ ಬರಲಿವೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದ ಸರ್ಕಾರಿ ಶಾಲೆಗಳ ಸಮಗ್ರ ನಿರ್ವಹಣೆಗೆ ಸರ್ಕಾರ ಈಗಾಗಲೇ ಅಗತ್ಯ ಹಣಕಾಸಿನ ಸೌಲಭ್ಯಗಳನ್ನು ನಿಗದಿಪಡಿಸಿದೆ ಎಂದರು. ಶಾಲೆಗಳಲ್ಲಿ ಯಾವುದೇ ಮೂಲಸೌಕರ್ಯ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ತೊಡಕುಗಳಿದ್ದರೆ ಸಾರ್ವಜನಿಕರು ತಮ್ಮ ಗಮನಕ್ಕೆ ತರಬಹುದು, ತಕ್ಷಣವೇ ಪರಿಹಾರ ಕಲ್ಪಿಸಲಾಗುವುದು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸೂಕ್ತ ಬಸ್ ಸೌಕರ್ಯ ಒದಗಿಸಿಲ್ಲ ಹಾಗೂ ಅಗತ್ಯ ಶಿಕ್ಷಕರ ನೇಮಕಾತಿಯನ್ನೂ ಮಾಡಿಲ್ಲ. ಆ ಆಡಳಿತಾತ್ಮಕ ವೈಫಲ್ಯಗಳ ಹೊರೆ ಈಗ ತಮ್ಮ ಸರ್ಕಾರದ ಮೇಲೆ ಬೀಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.