ಸಂಡೂರಿನಲ್ಲಿ ಹೊಸ ಗಣಿ ಗುತ್ತಿಗೆ ಸಲ್ಲದು: ಎಸ್‌.ಆರ್‌. ಹಿರೇಮಠ

KannadaprabhaNewsNetwork |  
Published : Jul 21, 2024, 01:20 AM IST
20ಎಚ್‌ಪಿಟಿ1- ಹೊಸಪೇಟೆಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಾಜ ಪರಿವರ್ತನಾ ಸಮುದಾಯ (ಎಸ್‌ಪಿಎಸ್‌)ದ ಮುಖ್ಯಸ್ಥ ಎಸ್.ಆರ್‌. ಹಿರೇಮಠ ಮಾತನಾಡಿದರು.  | Kannada Prabha

ಸಾರಾಂಶ

ಕೆಎಂಇಆರ್‌ಸಿಗೆ ಸುಪ್ರೀಂಕೋರ್ಟ್‌ ನೇಮಿಸಿರುವ ನ್ಯಾ. ಬಿ. ಸುದರ್ಶನ ರೆಡ್ಡಿ ಅವರಿಗೂ ಪತ್ರ ಬರೆದು ಒತ್ತಾಯಿಸಲಾಗಿದೆ.

ಹೊಸಪೇಟೆ: ಸಂಡೂರಿನ ಅರಣ್ಯ ಪ್ರದೇಶದಲ್ಲಿ ಎರಡು ಹೊಸ ಗಣಿಗಳಿಗೆ ಗುತ್ತಿಗೆ ನೀಡಲು ಸರ್ಕಾರಗಳು ಮುಂದಾಗಿರುವುದು ಸರಿಯಲ್ಲ. ಕೂಡಲೇ ಕುದುರೆಮುಖ ಕಬ್ಬಿಣದ ಅದಿರು ಕಂಪನಿ, ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಂಪನಿಗೆ ಸಂಡೂರಿನ ಅರಣ್ಯ ಪ್ರದೇಶದಲ್ಲಿ ಗಣಿ ಗುತ್ತಿಗೆ ನೀಡುತ್ತಿರುವುದನ್ನು ಕೂಡಲೇ ರದ್ದುಪಡಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್‌. ಹಿರೇಮಠ ಒತ್ತಾಯಿಸಿದರು.

ಸ್ಥಳೀಯ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಂಇಆರ್‌ಸಿಗೆ ಸುಪ್ರೀಂಕೋರ್ಟ್‌ ನೇಮಿಸಿರುವ ನ್ಯಾ. ಬಿ. ಸುದರ್ಶನ ರೆಡ್ಡಿ ಅವರಿಗೂ ಪತ್ರ ಬರೆದು ಒತ್ತಾಯಿಸಲಾಗಿದೆ. ಉತ್ಕೃಷ್ಟ ಅರಣ್ಯದಲ್ಲೇ ಗಣಿಗಾರಿಕೆಗೆ ಅವಕಾಶ ನೀಡುತ್ತಿರುವುದು ಸರಿಯಲ್ಲ ಎಂದು ಒತ್ತಾಯಿಸಿದ್ದೇವೆ. ಈ ವಿಚಾರವನ್ನು ಸುಪ್ರೀಂ ಕೋರ್ಟ್‌ ಗಮನಕ್ಕೂ ತರಲು ಮನವಿ ಮಾಡಿಕೊಳ್ಳಲಾಗಿದೆ ಎಂದರು.

ಕೆಐಒಸಿಎಲ್‌ಗೆ 401 ಹೆಕ್ಟೇರ್‌ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಇದರಿಂದ 99,330 ಮರಗಳ ಮಾರಣಹೋಮ ನಡೆಯಲಿದೆ. ಇನ್ನು ವಿಐಎಸ್‌ಎಲ್‌ಗೆ 60.7 ಹೆಕ್ಟೇರ್‌ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ 29,400 ಮರಗಳ ಮಾರಣಹೋಮ ನಡೆಯಲಿದೆ. ಶ್ರೀಗಂಧ, ಔಷಧೀಯ ಮರಗಳು ಸೇರಿದಂತೆ ಜೀವವೈವಿಧ್ಯತೆಗೆ ಕೊಡಲಿ ಏಟು ಬೀಳಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚೆತ್ತು ಈ ಗಣಿ ಗುತ್ತಿಗೆಗಳನ್ನು ರದ್ದುಪಡಿಸಬೇಕು. ಸಿ-ಕೆಟಗರಿಯ ಗಣಿಗಳಲ್ಲಿ ಪರಿಸರ ಸಂರಕ್ಷಣೆಯೊಂದಿಗೆ ಗಣಿಗಾರಿಕೆ ಮಾಡಬಹುದು. ಆದರೆ, ಕಾಡನ್ನೇ ನಾಶ ಮಾಡಿ ಗಣಿಗಾರಿಕೆ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ವರದಿ ಪರಿಶೀಲಿಸದೇ ತರಾತುರಿಯಲ್ಲಿ ಕೆಐಒಸಿಎಲ್‌ಗೆ ಗಣಿ ಗುತ್ತಿಗೆ ನೀಡಿದ್ದಾರೆ. ಅರಣ್ಯ ಅಧಿಕಾರಿಗಳು 10 ಡಿಸಿಎಫ್ ಅರಣ್ಯ, ಪರಿಸರಕ್ಕೆ ಧಕ್ಕೆಯಾಗುತ್ತದೆ ಎಂದು ವರದಿ ನೀಡಿದ್ದಾರೆ. ಇದನ್ನು ಪರಿಗಣನೆಗೆ ತೆಗೆದುಕೊಳ್ಳದೇ ಗಣಿಗಾರಿಕೆಗೆ ಪರವಾನಗಿ ನೀಡಿರುವುದು ಸರಿಯಲ್ಲ. ವಿಐಎಸ್‌ಎಲ್‌ ಗಣಿ ಗುತ್ತಿಗೆ ಕುರಿತು ಆಗಸ್ಟ್‌ನಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆಗೆ ಸಭೆ ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಈ ಭಾಗದ ಜನರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕು ಎಂದರು.

ಸಮಾಜ ಪರಿವರ್ತನಾ ಸಮುದಾಯದ ಶ್ರೀಶೈಲ ಆಲ್ದಹಳ್ಳಿ, ಜಿ.ಕೆ. ನಾಗರಾಜ, ಸಯ್ಯದ್‌ ಹೈದರ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಲೂರು ದೇವಸ್ಥಾನಕ್ಕೆ ಡಿಸಿ ಭೇಟಿ
ವಾಕ್, ಶ್ರವಣ ಸಮಸ್ಯೆ ಪರಿಹರಿಸುವ ಪ್ರಯಾಸ್ ಯೋಜನೆ ಮಾದರಿ