ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ

KannadaprabhaNewsNetwork |  
Published : Jul 26, 2026, 02:15 AM IST
ಯಲಬುರ್ಗಾದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿ ಉದ್ದೇಶಿಸಿ ಮಾಜಿ ಸಚಿವ ಹಾಲಪ್ಪ ಆಚಾರ್ ಮಾತನಾಡಿದರು. | Kannada Prabha

ಸಾರಾಂಶ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತನಿಖೆ ನಡೆಸಲು ಕೇಂದ್ರ ಸರ್ಕಾರ ಈಗಾಗಲೇ ಮುಂದಾಗಿದೆ

ಯಲಬುರ್ಗಾ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಮಾತಿಲ್ಲ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ಈ ಕುರಿತು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಇಂತಹ ಘಟನೆ ಬಂಡವಾಳ ಮಾಡಿಕೊಳ್ಳುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ನ್ಯಾಯಸಮ್ಮತವಾದರೂ ಅದಕ್ಕೆ ರಾಜಕೀಯ ಬಣ್ಣ ಬಳಿಯುತ್ತಿರುವುದು ಸರಿಯಾದ ಬೆಳವಣಿಗೆ ಅಲ್ಲ. ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಷಯ, ಕಾಂಗ್ರೆಸ್ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತನಿಖೆ ನಡೆಸಲು ಕೇಂದ್ರ ಸರ್ಕಾರ ಈಗಾಗಲೇ ಮುಂದಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಮೋದಿ ಸರ್ಕಾರ ಬದ್ಧವಿದೆ. ವಿದ್ಯಾರ್ಥಿಗಳ ಹೋರಾಟದ ಹೆಸರಿನಲ್ಲಿ ರಾಜಕೀಯ ಪಕ್ಷಗಳು ತಮ್ಮ ಅಸ್ತಿತ್ವ ಪ್ರದರ್ಶಿಸಲು ಮುಂದಾಗಿರುವುದು ದುರದೃಷ್ಟಕರ. ಎಲ್ಲ ರಾಜಕೀಯ ಪಕ್ಷಗಳು ಸಂಯಮದಿಂದ ನಡೆದುಕೊಂಡು ಅಭ್ಯರ್ಥಿಗಳ ಹಿತ ಕಾಪಾಡಬೇಕು ಎಂದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಸತ್ಯಾಗ್ರಹ ನಡೆಸಿದ ಸೋನಂ ವಾಂಗ್ಚುಕ್ ಮನೆಗೆ ತೆರಳಿ ಬೆಂಬಲ ಸೂಚಿಸುವ ಬದಲು ಪ್ರಧಾನಿ ನಿವಾಸದ ಎದುರು ಪ್ರತಿಭಟನೆ ನಡೆಸಿರುವುದು ರಾಜಕೀಯ ಪ್ರೇರಿತವಾಗಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆ ವಿನಹ ಎಲ್ಲದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ.

ಪ್ರಶ್ನೆಪತ್ರಿಕೆ ಸೋರಿಕೆ ಇದೇ ಮೊದಲ ಘಟನೆಯಲ್ಲ. ಈ ಹಿಂದೆಯೂ ದೇಶದ ವಿವಿಧ ರಾಜ್ಯಗಳಲ್ಲಿ ಅಲ್ಲದೆ ಕರ್ನಾಟಕದಲ್ಲಿಯೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಇಂತಹ ಅಕ್ರಮ ತಡೆಯಲು ಎಲ್ಲ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪಾರದರ್ಶಕ ಆಡಳಿತ ನೀಡುತ್ತಿದೆ. ನೀಟ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯಿಲ್ಲ. ತನಿಖೆ ಪೂರ್ಣಗೊಂಡ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ಗಾವರಾಳ ಮಾತನಾಡಿ, ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ಬಿಜೆಪಿ ನಾಲ್ಕು ತಂಡ ರಚಿಸಿದೆ. ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ಲಾಲಸೆ ಹೆಚ್ಚಾಗಿದೆ. ಜನರ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಆರೋಪಿಸಿದರು. ಇಂಡಿಯಾ ಮೈತ್ರಿಕೂಟದ ನಾಯಕರಿಗೆ ದೇಶದ ಅಭಿವೃದ್ಧಿಗಿಂತ ರಾಜಕೀಯವೇ ಮುಖ್ಯವಾಗಿದೆ. ಕೆಲ‌ ಕಡೆ ಶಾಸಕರ ಆಪ್ತರು ಭೂವ್ಯವಹಾರಗಳಲ್ಲಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂಬ ಆರೋಪವಿದ್ದು, ಕುರಿತು ಸರ್ಕಾರ ತನಿಖೆ ನಡೆಸಬೇಕೆಂದರು.

ಈ ಸಂದರ್ಭದಲ್ಲಿ ಬಸಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ವಿಶ್ವನಾಥ ಮರಿಬಸಪ್ಪನವರ, ಶರಣಪ್ಪ ಈಳಿಗೇರ, ಅಮರೇಶ ಹುಬ್ಬಳ್ಳಿ, ಅಯ್ಯನಗೌಡ ಕೆಂಚಮ್ಮನವರ್, ಕಲ್ಲೇಶಪ್ಪ ಕರಮುಡಿ, ಅಶೋಕ ಅರಕೇರಿ,‌ ಕಳಕಪ್ಪ ತಳವಾರ್, ಈರಪ್ಪ ಬಣಕಾರ, ವಸಂತ ಭಾವಿಮನಿ ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಶ್ನೆಪತ್ರಿಕೆ ಸೋರಿಕೆ ಮರುಕಳಿಸದಂತೆ ಕಠಿಣ ಕ್ರಮ: ಜೋಶಿ
ಬರಗಾಲದ ಬೇಗೆಯಲ್ಲಿ ತೋಟಗಾರಿಕೆ ಬೆಳೆಗಾರರು ಕಂಗಾಲು